ಪಾದರಾಯನಪುರ ಗಲಭೆ; ಸರ್ಕಾರಕ್ಕೆ ಹಲವು ಪ್ರಶ್ನೆ ಕೇಳಿದ ಹೈಕೋರ್ಟ್
ಬೆಂಗಳೂರು, ಏಪ್ರಿಲ್ 22 : ವೈದ್ಯರು, ಆರೋಗ್ಯ ಮತ್ತು ಆಶಾ ಕಾರ್ಯಕರ್ತರ ಭದ್ರತೆಗೆ ಯಾವ ಮಾರ್ಗಸೂಚಿ ರೂಪಿಸಲಾಗಿದೆ. ಅವರಿಗೆ ಸಶಸ್ತ್ರ ಭದ್ರತೆ ನೀಡಲು ಸಾಧ್ಯವೇ? ಎಂದು ಕರ್ನಾಟಕ ಹೈಕೋರ್ಟ್ ಸರ್ಕಾರವನ್ನು ಪ್ರಶ್ನೆ ಮಾಡಿದೆ.
ಬೆಂಗಳೂರಿನ ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ಗಲಭೆ ನಡೆದಿತ್ತು. ಬಿಬಿಎಂಪಿ, ಆರೋಗ್ಯ ಇಲಾಖೆ ಅಧಿಕಾರಿಗಳ ಮೇಲೆ ಹಲ್ಲೆಗೆ ಪ್ರಯತ್ನ ನಡೆಸಲಾಗಿತ್ತು. ಈ ಘಟನೆ ಸಂಬಂಧ ಇದುವರೆಗೂ 119 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಪಾದರಾಯನಪುರದಲ್ಲಿ ಗಲಭೆ ನಡೆಸಿದ ಆರೋಪಿಗಳ ವಿರುದ್ಧ ರಾಷ್ಟ್ರೀ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ದೂರು ದಾಖಲಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಬೇಕು ಎಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.

ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮಂಗಳವಾರ ಹೈಕೋರ್ಟ್ನಲ್ಲಿ ನಡೆಯಿತು. ಅರ್ಜಿದಾರರ ಪರವಾಗಿ ವಾದ ಮಂಡನೆ ಮಾಡಿದ ವಕೀಲ ಜಿ. ಆರ್. ಮೋಹನ್ ಘಟನೆ ಬಗ್ಗೆ ನ್ಯಾಯಪೀಠಕ್ಕೆ ವಿವರಣೆ ನೀಡಿದರು.
ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಪೀಠ ಈ ರೀತಿಯ ಬೆಳವಣಿಗೆ ನಡೆದರೆ ವೈದ್ಯರು, ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸರು ಹೇಗೆ ಕೆಲಸ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿತು.
ಇಂತಹ ಘಟನೆ ನಡೆಯದಂತೆ ಯಾವ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ಸಲ್ಲಿಸಿಲು ಸರ್ಕಾರಕ್ಕೆ ಸೂಚನೆ ನೀಡಿದ ನ್ಯಾಯಾಲಯ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಿದೆ.
ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 119 ಜನರನ್ನು ಬಂಧಿಸಲಾಗಿದೆ. ಹಲವು ಆರೋಪಿಗಳನ್ನು ರಾಮನಗರದ ಜೈಲಿಗೆ ಕ್ವಾರಂಟೈನ್ಗಾಗಿ ಶಿಫ್ಟ್ ಮಾಡಲಾಗಿದೆ.












Click it and Unblock the Notifications