ಪಂಚಮಸಾಲಿ ಸಮುದಾಯಕ್ಕೆ ಬಿ.ವೈ.ವಿಜಯೇಂದ್ರ ಅಭಯ, ಏನದು?
2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯವು ಸದ್ಯ ಬೆಳಗಾವಿಯಲ್ಲಿ ಬೀಡುಬಿಟ್ಟಿದೆ. ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯುತ್ತಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಬಿಸಿ ಮುಟ್ಟಿಸಲು ಮುಂದಾಗಿದೆ. ಇನ್ನು ಒಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಂಚಮಸಾಲಿ ಹೋರಾಟಕ್ಕೆ ಸಾಥ್ ನೀಡಿದ್ದಾರೆ.
ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪಂಚಮಸಾಲಿ ಸಮುದಾಯಕ್ಕೆ ಅಭಯ ನೀಡಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಭವಿಷ್ಯದ ದಿನಗಳಲ್ಲಿ ಸುಮುದಾಯಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಸದನದ ಒಳಗೆ ಹಾಗೂ ಹೊರಗೆ ದನಿಯೆತ್ತಿ ಹೋರಾಟ ನಡೆಸುವುದಾಗಿ ಪ್ರತಿಭಟನಾ ನಿರತ ಪಂಚಮಸಾಲಿ ಸಮುದಾಯದಕ್ಕೆ ಅಭಯ ನೀಡಿದ್ದಾರೆ.
ಪ್ರತಿಭಟನಾ ಸಮಾವೇಶದಲ್ಲಿ ವಿಧಾನಸಭಾ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್, ಮಾಜಿ ಸಚಿವ ಸಿ.ಸಿ.ಪಾಟೀಲ್, ಸಿದ್ದು ಪಾಟೀಲ್ ಅವರು ಸೇರಿದಂತೆ ಪಕ್ಷದ ಶಾಸಕರು, ಸಮುದಾಯದ ಮುಖಂಡರು ಹಾಗೂ ಪಂಚಮಸಾಲಿ ಸಮುದಾಯದ ಜನರು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದರು.
ಬಿಜೆಪಿ ನಾಯಕ ಅರವಿಂದ್ ಬೆಲ್ಲದ್ ಅವರು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ಸ್ವಾಮೀಜಿಗಳು, ಹೋರಾಟಗಾರರ ಟ್ರಾಕ್ಟರ್ ರ್ಯಾಲಿಗೆ ನಿರ್ಬಂಧ ಹೇರಿದ ಪ್ರಜಾಪ್ರಭುತ್ವ ವಿರೋಧಿ ಕಾಂಗ್ರೆಸ್ ಸರ್ಕಾರ ನಮ್ಮ ಈ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದೆ ಎಂದು ದೂರಿದ್ದಾರೆ.

ಆದರೆ, ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಇಂದು ಸುವರ್ಣ ಸೌಧದ ಮುಂಭಾಗದಲ್ಲಿ ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಪರಮಪೂಜ್ಯ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತಿದೆ. ಮೀಸಲಾತಿ ಭಿಕ್ಷೆಯಲ್ಲ, ನಮ್ಮ ಹಕ್ಕು. ನಮ್ಮ ಹಕ್ಕನ್ನು ನಾವು ಪಡೆದೇ ತೀರುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಅವರು ಎಚ್ಚರಿಕೆ ನೀಡಿದ್ದಾರೆ.
ಮೀಸಲಾತಿಗೆ ನಾನು ಅಡ್ಡಿಯಲ್ಲ: ಸಿಎಂ
ಇತ್ತೀಚೆಗೆ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಕೂಡ ಮಾತನಾಡಿದ್ದರು. ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು ಎಂದು ಹೇಳಿದ್ದರು.
ಪಂಚಮಸಾಲಿಗಳನ್ನು 2ಎಗೆ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಣೆ ಮಾಡಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿಯಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎಗೆ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕ. ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಾಟಗಾರರಿಗೆ ತಿಳಿಸಿದ್ದೇನೆ ಎಂದಿದ್ದರು.
ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ. ಬದಲಾಗಿ ಅಲ್ಪಸಂಖ್ಯಾತರಿಗೆ ನೀಡಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿಗೆ ತಲಾ ಶೇ 2ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂ ಸಮುದಾಯದವರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು ಎಂದು ವಿವರಿಸಿದ್ದರು.
ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂಮರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡವಿಟ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಇದರ ಪ್ರತಿಯನ್ನು ಸದನದ ಮುಂದೆ ಮಂಡಿಸುತ್ತೇನೆ ಎಂದೂ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು.












Click it and Unblock the Notifications