ಗುಂಡಿ ಮುಕ್ತವಾಗಲಿವೆ ಬೆಂಗಳೂರು ರಸ್ತೆಗಳು
ಬೆಂಗಳೂರು, ಸೆ.27 : ಬೆಂಗಳೂರಿನ ರಸ್ತೆಗಳನ್ನು ಗುಂಡಿಮುಕ್ತವಾಗಿಸುವ ಕಾರ್ಯಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚಾಲನೆ ನೀಡಿದೆ. ರಸ್ತೆ ಗುಂಡಿ ಮುಚ್ಚುವ ಕಾರ್ಯ ಮುಂದಿನ ವಾರದಿಂದ ಆರಂಭವಾಗಲಿದ್ದು, ಇದಕ್ಕಾಗಿ ಪ್ರತಿವಾರ್ಡ್ ಗೆ 5 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.
ಸೆ.30ರ ಸೋಮವಾರದಿಂದ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ ನಲ್ಲಿ ಗುಂಡಿ ಮುಚ್ಚುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಐದು ದಿನಗಳಲ್ಲಿ ರಸ್ತೆಗಳ ಗುಂಡಿಗಳನ್ನು ಮುಚ್ಚಿ, ಗುಂಡಿ ಮುಕ್ತ ರಸ್ತೆ ನಿರ್ಮಿಸಲು ಬಿಬಿಎಂಪಿ ಸಜ್ಜಾಗಿದೆ.

ಪ್ರತಿ ವಾರ್ಡ್ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಪ್ರತಿ ವಾರ್ಡ್ ಗೆ 5 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಾರ್ಡ್ ಮಟ್ಟದ ಕಾಮಗಾರಿಗಳ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎ. ಬಸವರಾಜು ಹೇಳಿದ್ದಾರೆ.
ಸೆ. 30ರ ಸೋಮವಾರದಿಂದ ಐದು ದಿನಗಳ ಕಾಲ ಬಿಬಿಎಂಪಿ ಇಂಜಿನಿಯರ್ ಗಳು ಯಾವುದೇ ಸಭೆ ನಡೆಸದೆ ರಸ್ತೆಗಳಲ್ಲಿ ಗುಂಡಿ ಮುಚ್ಚಿಸುವ ಉಸ್ತುವಾರಿ ನೋಡಿಕೊಳ್ಳಬೇಕು ಎಂದು ಆದೇಶ ನೀಡಲಾಗಿದೆ. ಪ್ರತಿದಿನ ಎಷ್ಟು ಗುಂಡಿಗಳನ್ನು ಮುಚ್ಚಲಾಗಿದೆ ಎಂಬ ವರದಿಯನ್ನು ನೀಡಬೇಕಿದೆ.
ಬಿಬಿಎಂಪಿ ಆಯುಕ್ತರು ಈ ಕುರಿತು ಗುರುವಾರ ಸುತ್ತೋಲೆ ಹೊರಡಿಸಿದ್ದು, ಗುಂಡಿ ಮುಚ್ಚುವ ಕಾರ್ಯ ಕೈಗೊಳ್ಳಿ ಎಂದು ನಿರ್ದೇಶಸಿದ್ದಾರೆ. ಬಿಬಿಎಂಪಿಗೆ ನೂತನ ಮೇಯರ್ ಕಟ್ಟೆ ಸತ್ಯನಾರಾಯಣ ಗುಂಡಿ ಮುಚ್ಚುವ ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಕೆಲವು ದಿನಗಳ ಹಿಂದೆ ನಗರ ಪ್ರದಕ್ಷಿಣೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಸಹ ನಗರದ ರಸ್ತೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮಳೆನಿಂತ ತಕ್ಷಣ ಗುಂಡಿ ಮುಚ್ಚುವ ಕಾರ್ಯ ನಡೆಸಬೇಕೆಂದು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶಿಸಿದ್ದರು. (ನಾಲ್ಕು ತಾಸು ಬೆಂಗಳೂರು ಪ್ರದಕ್ಷಿಣೆ ಹಾಕಿದ ಸಿಎಂ)
ಸರ್ಕಾರ ಮತ್ತು ಮೇಯರ್ ಸೂಚನೆ ಮೇರೆಗೆ ಬಿಬಿಎಂಪಿ ಗುಂಡಿ ಮುಚ್ಚುವ ಕಾರ್ಯಕ್ರಮವನ್ನು ಐದು ದಿನಗಳ ಕಾಲ ಹಮ್ಮಿಕೊಂಡಿದೆ. ಐದು ದಿನಗಳ ನಂತರ ಎಲ್ಲಾ ವಾರ್ಡ್ ಗಳ ರಸ್ತೆಗಳು ಗುಂಡಿ ಮುಕ್ತವಾಗಲಿವೆಯೇ? ಕಾದು ನೋಡಿ.












Click it and Unblock the Notifications