ಬೆಂಗಳೂರಲ್ಲಿ ಎಲ್ಲಾ ಬಗೆಯ ಪ್ಲಾಸ್ಟಿಕ್ ಕೈ ಚೀಲ ನಿಷೇಧ
ಬೆಂಗಳೂರು, ಜ. 20 : ಬೆಂಗಳೂರು ನಗರದಲ್ಲಿ ಎಲ್ಲಾ ಮಾದರಿಯ ಪ್ಲಾಸ್ಟಿಕ್ ಕೈ ಚೀಲ ಬಳಕೆಯನ್ನು ನಿಷೇಧಿಸಲಾಗಿದೆ. ಮುಂದಿನ ಹಂತದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಕುರಿತ ಆದೇಶ ಶೀಘ್ರದಲ್ಲೇ ಹೊರಬೀಳಲಿದೆ.
ಸೋಮವಾರ ಸಂಜೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಭೆಯ ಬಳಿಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪರಿಸರ ಸಂರಕ್ಷಣೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ಎಲ್ಲಾ ಬಗೆಯ ಪ್ಲಾಸ್ಟಿಕ್ ಕೈ ಚೀಲಗಳ ಬಳಕೆಯನ್ನು ನಿಷೇಧಿಸಲಾಗಿದೆ. ಆದರೆ, ಸಮಯ ಇನ್ನೂ ನಿಗದಿಯಾಗಿಲ್ಲ, ಸದ್ಯದಲ್ಲೇ ಈ ಕುರಿತ ಆದೇಶ ಹೊರಡಿಸುವುದಾಗಿ ಸಿದ್ದರಾಮಯ್ಯ ಅವರು ಹೇಳಿದರು. [ಪ್ಲಾಸ್ಟಿಕ್ ರಾಷ್ಟ್ರಧ್ವಜ ಬಳಕೆ ನಿಷೇಧ]
ಎಲ್ಲಾ ಬಗೆಯ ಪ್ಲಾಸ್ಟಿಕ್ ಕೈ ಚೀಲ ನಿಷೇಧವನ್ನು ಭವಿಷ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೆ ತರುವ ಆಲೋಚನೆ ಸರ್ಕಾರದ ಮುಂದಿದೆ ಎಂದು ಸಿಎಂ ಮಾಹಿತಿ ನೀಡಿದರು. ಬೆಂಗಳೂರಲ್ಲಿ ಪಾಸ್ಟಿಕ್ ಕೈ ಚೀಲ ನಿಷೇಧದ ಜೊತೆಗೆ ಅಕ್ರಮ ಫ್ಲೆಕ್ಸ್ ಗಳ ಹಾವಳಿ ತಡೆಯಲು ಯೋಜನೆ ರೂಪಿಸಲಾಗಿದೆ ಎಂದರು. [ಬ್ಯಾನರ್ ಹಾಕಲು ಬಂತು ಮಾರ್ಗಸೂಚಿ]
ಫ್ಲೆಕ್ಸ್ ಮುದ್ರಕರ ಮೇಲೆ ಕ್ರಮ : ಬೆಂಗಳೂರಿನಲ್ಲಿ ಅಕ್ರಮವಾಗಿ ಫ್ಲೆಕ್ಸ್ ಹಾಕುವವರು ಮತ್ತು ಮುದ್ರಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಿಬಿಎಂಪಿ ಗುರುತಿಸಿದ ಜಾಗಗಳಲ್ಲಿ ಮಾತ್ರ ಶುಲ್ಕ ಪಾವತಿ ಮಾಡಿ ಫ್ಲೆಕ್ಸ್ ಅಳವಡಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.












Click it and Unblock the Notifications