ಏ.3ರಿಂದ ಕೆ.ಆರ್.ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ನಿಷೇಧ
ಬೆಂಗಳೂರು, ಮಾರ್ಚ್ 22 : ಬೆಂಗಳೂರಿನ ಬೃಹತ್ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದೆ. ಏ.3ರಿಂದ ಕೆ.ಆರ್.ಮಾರುಕಟ್ಟೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ವ್ಯಾಪಾರಿಗಳು ನಿರ್ಧರಿಸಿದ್ದಾರೆ. ಮಾರ್ಕೆಟ್ನಲ್ಲಿ ಪ್ರತಿನಿತ್ಯ 1 ಸಾವಿರ ಕೆ.ಜಿ ಪ್ಲಾಸ್ಟಿಕ್ ಬಳಕೆಯಾಗುತ್ತದೆ ಎಂದು ಅಂದಾಜಿಸಲಾಗಿದೆ.
'ಏಪ್ರಿಲ್ 2ರಂದು ಕೆ.ಆರ್.ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಆರಂಭಿಸಲಿದ್ದೇವೆ. ಅಭಿಯಾನದ ಮೂಲಕ ಮಾರುಕಟ್ಟೆ ಆವರಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡಲು ಉದ್ದೇಶಿಸಲಾಗಿದೆ. ವ್ಯಾಪಾರಿಗಳು ಈ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಏ.3ರಿಂದ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಲಾಗುತ್ತದೆ' ಎಂದು ಕೆ.ಆರ್. ಮಾರುಕಟ್ಟೆ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಿ.ಎಂ. ದಿವಾಕರ್ ಹೇಳಿದ್ದಾರೆ. [ಪ್ಲಾಸ್ಟಿಕ್ ನಿಷೇಧ ಅಧಿಕೃತ, ನಿಯಮ ಮುರಿದರೆ ಜೈಲೂಟ]

ಏ.3ರಿಂದ ಪ್ಲಾಸ್ಟಿಕ್ ಬಳಕೆ ಇಲ್ಲ : 'ಪ್ಲಾಸ್ಟಿಕ್ ಮುಕ್ತ ಅಭಿಯಾನದಡಿ ಬಿಬಿಎಂಪಿ ಅಧಿಕಾರಿಗಳು ಮಾರುಕಟ್ಟೆಯ ವ್ಯಾಪಾರಿಗಳನ್ನು ಭೇಟಿ ಮಾಡಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸುವಂತೆ ಮನವಿ ಮಾಡಲಿದ್ದಾರೆ. ಏಪ್ರಿಲ್ 3ರಿಂದ ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಹಲವು ವ್ಯಾಪಾರಿಗಳು ಒಪ್ಪಿದ್ದಾರೆ' ಎಂದು ದಿವಾಕರ್ ತಿಳಿಸಿದ್ದಾರೆ. [ಪರಿಸರ ಸ್ನೇಹಿಯಾದ ಸರ್ಕಾರ, ಪ್ಲಾಸ್ಟಿಕ್ ಬಳಕೆ ನಿಷೇಧ]
ಕೆ.ಆರ್.ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಸುಮಾರು 1 ಸಾವಿರ ಕೆ.ಜಿ ಪ್ಲಾಸ್ಟಿಕ್ ಬಳಕೆಯಾಗುತ್ತದೆ. ಹಬ್ಬದ ಸಂದರ್ಭದಲ್ಲಿ ಅದರ ಪ್ರಮಾಣ ದುಪ್ಪಟಾಗುತ್ತದೆ. ಪ್ಲಾಸ್ಟಿಕ್ ಬಳಕೆ ನಿಲ್ಲಿಸಿದರೆ ಮಾರುಕಟ್ಟೆಯ ಕಸದ ಪ್ರಮಾಣವೂ ಕಡಿಮೆಯಾಗಲಿದೆ. [ಪ್ಲಾಸ್ಟಿಕ್ ಅತಿ ಬಳಕೆ ಮನುಕುಲಕ್ಕೆ ತಂದಿಟ್ಟ ಅಪಾಯ]
ಪ್ಲಾಸ್ಟಿಕ್ ಮುಕ್ತ ಅಭಿಯಾನದಡಿ ಮಾರುಕಟ್ಟೆಯ ಪ್ರತಿ ವ್ಯಾಪಾರಿಗಳನ್ನು ಭೇಟಿ ಮಾಡಿ, ಕರಪತ್ರ ಹಂಚಿ ಪ್ಲಾಸ್ಟಿಕ್ ಬದಲಿಗೆ ಪರ್ಯಾಯ ವಸ್ತುಗಳನ್ನು ಬಳಸುವಂತೆ ಜಾಗೃತಿ ಮೂಡಿಸಲಾಗುತ್ತದೆ. ಪ್ಲಾಸ್ಟಿಕ್ ಬಳಕೆ ನಿಲ್ಲಿಸಿದರೆ ತಿಂಗಳು 5000 ರೂ. ಉಳಿತಾಯವಾಗುತ್ತದೆ ಎಂದು ಹೂವಿನ ವ್ಯಾಪಾರಿಗಳು ಹೇಳಿದ್ದು, ಅಭಿಯಾನಕ್ಕೆ ಬೆಂಬಲ ಕೊಟ್ಟಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಅವರು, ವ್ಯಾಪಾರಿಗಳ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿದರೆ ಕಸದ ಸಮಸ್ಯೆ ಕಡಿಮೆಯಾಗಲಿದೆ ಎಂದು ಅವರ ಹೇಳಿದ್ದಾರೆ.
ಅಂದಹಾಗೆ ಕರ್ನಾಟಕ ಸರ್ಕಾರ ಕೆಲವು ದಿನಗಳ ಹಿಂದೆ 40 ಮೈಕ್ರಾನ್ಗಿಂತ ತೆಳುವಾದ ಎಲ್ಲ ಬಗೆಯ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ನಿಷೇಧ ಹೇರಿದೆ. 40 ಮೈಕ್ರಾನ್ಗಿಂತ ತೆಳುವಾದ ಪ್ಲಾಸ್ಟಿಕ್ ಪುನರ್ ಬಳಕೆ (recycle) ಮಾಡಲು ಆಗುವುದಿಲ್ಲ. ಮಣ್ಣಿನಲ್ಲಿ ಕೊಳೆಯುವುದಿಲ್ಲ, ಸುಟ್ಟರೆ ರಾಸಾಯನಿಕಗಳಿಂದ ಪರಿಸರಕ್ಕೆ ಹಾನಿಯಾಗುತ್ತದೆ. ಆದ್ದರಿಂದ, ಅವುಗಳನ್ನು ನಿಷೇಧಿಸಲಾಗಿದೆ.












Click it and Unblock the Notifications