ಬಿಬಿಎಂಪಿ ರಸ್ತೆ ಡಾಂಬರೀಕರಣಕ್ಕೆ ಪ್ಲಾಸ್ಟಿಕ್ ಬಳಕೆ
ಬೆಂಗಳೂರು, ಅಕ್ಟೋಬರ್ 28 : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೊಳ್ಳುವ ರಸ್ತೆ ಡಾಂಬರೀಕರಣದಲ್ಲಿ ಪ್ಲಾಸ್ಟಿಕ್ ಬಳಸಿಕೊಳ್ಳುವ ಮಹತ್ವದ ನಿರ್ಧರವನ್ನು ತೆಗೆದುಕೊಳ್ಳಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ನಡೆದ ಬಿಬಿಎಂಪಿ ಮತ್ತು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ನಗರದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ಆದರೂ ಅದರ ಹಾವಳಿ ಕಡಿಮೆಯಾಗಿಲ್ಲ. ಇದು ಕಸ ವಿಲೇವಾರಿಗೂ ಸಮಸ್ಯೆಯಾಗಿದೆ. ಹೀಗಾಗಿ ಪ್ಲಾಸ್ಟಿಕ್ ಅನ್ನು ಡಾಂಬರೀಕರಣಕ್ಕೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯಕ್ತ ಮಂಜುನಾಥ ಪ್ರಸಾದ್, ನಗರದಲ್ಲಿ ಈ ವರೆಗೆ ಒಂದು ಲಕ್ಷ ಕೆ.ಜಿ. ಪ್ಲಾಸ್ಟಿಕ್ ವಶಪಡಿಸಿಕೊಂಡು 1.67 ಕೋಟಿ ರೂ. ದಂಡ ವಿಧಿಸಲಾಗಿದೆ. ಆದರೆ, ಕೇಸು ದಾಖಲು ಮಾಡುವ ಅಧಿಕಾರ ನಮಗೆ ಇಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಡಾಂಬರೀಕರಣಕ್ಕೆ ಪ್ಲಾಸ್ಟಿಕ್ ಬಳಸಿಕೊಳ್ಳಲು ನಿರ್ಣಯಿಸಿದೆ ಎಂದು ವಿವರಿಸಿದರು.
ಇದರಲ್ಲಿ ವಿಜಿ-10 ಮತ್ತು ವಿಜಿ-30 ಎಂಬ ಎರಡು ಮಾದರಿಗಳಿವೆ. ವಿಜಿ-30ಯಲ್ಲಿ ಹೈಗ್ರೇಡ್ ವಿಟಮಿನ್ ಇರುತ್ತದೆ. ಇದನ್ನು ಎಸ್ಆರ್ ದರದಲ್ಲಿ ಸೇರಿಸಲಾಗಿದೆ. ಡಾಂಬರೀಕರಣದಲ್ಲಿ ಪ್ಲಾಸ್ಟಿಕ್ ಬಳಸುವುದರಿಂದ ಹೆಚ್ಚು ಬಾಳಿಕೆ ಬರುತ್ತದೆ ಎಂದು ಅವರು ಹೇಳಿದರು.
ಟನ್ ವಿಟಮಿನ್ಗೆ 32 ಸಾವಿರ ರೂ. ವೆಚ್ಚವಾಗುತ್ತದೆ. ಶೇ. 8ರಷ್ಟು ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ವಿಟಮಿನ್ಗೆ 2,100 ಹೆಚ್ಚುವರಿ ವೆಚ್ಚವಾಗುತ್ತದೆ. ಆದರೂ ರಸ್ತೆಗಳು ಹೆಚ್ಚು ಬಾಳಿಕೆ ಬರುವುದರ ಜತೆಗೆ ವಾಹನಗಳ ಸಂಚಾರ ಸುಗಮವಾಗಿರುತ್ತದೆ ಎಂದು ತಿಳಿಸಿದರು.
ನಗರದಲ್ಲಿ ಪ್ಲಾಸ್ಟಿಕ್ ಹೆಚ್ಚು ಸಂಗ್ರಹವಾಗುವುದರಿಂದ ಅನುಕೂಲವಾಗುತ್ತದೆ. ಈ ಸಂಬಂಧ ಸೋಮವಾರ ಅಧಿಸೂಚನೆ ಹೊರಬೀಳಲಿದೆ ಎಂದರು. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಜೈನ್, ಬಿಬಿಎಂಪಿ ಮೇಯರ್ ಸಂಪತ್ ರಾಜ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಸಭೆಯಲ್ಲಿದ್ದರು.












Click it and Unblock the Notifications