ಭಾನುವಾರ ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಬಂದ್: ಪರ್ಯಾಯ ಮಾರ್ಗಗಳ ವಿವರ ತಿಳಿಯಿರಿ
Bengaluru Traffic Restrictions: ಬಹುನಿರೀಕ್ಷಿತ ಬೆಂಗಳೂರಿನ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಭಾನುವಾರ (ಆಗಸ್ಟ್ 10ರಂದು) ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಇನ್ನು ಮೋದಿ ಭೇಟಿ ಹಿನ್ನೆಲೆ ನಗರದ ಹಲವು ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ ಹಾಗೂ ಪರ್ಯಾಯ ಮಾರ್ಗಗಳನ್ನು ಒದಗಿಸಲಾಗಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.
ಎಲ್ಲೆಲ್ಲಿ ವಾಹನ ಸಂಚಾರ ನಿರ್ಬಂಧ?: ಭಾನುವಾರ ಬೆಳಗ್ಗೆ 8.30 ರಿಂದ 12 ಗಂಟೆಯವರೆಗೆ ಮಾರೇನಹಳ್ಳಿ ರಾಜಲಕ್ಷ್ಮೀ ಜಂಕ್ಷನ್ನಿಂದ 18ನೇ ಮುಖ್ಯರಸ್ತೆ, ಈಸ್ಟ್ ಎಂಡ್ ಜಂಕ್ಷನ್ನಿಂದ ಅರವಿಂದ ಜಂಕ್ಷನ್ವರೆಗೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈ ಓವರ್, ಹೊಸೂರು ಕಡೆಯಿಂದ ನಗರದ ಕಡೆಗೆ ಬರುವ ಮಾರ್ಗ, ಇನ್ಫೋಸಿಸ್ ಅವೆನ್ಯೂ, ವೇಲಾಂಕಣಿ ರಸ್ತೆಗಳಲ್ಲಿ ನಿರ್ಬಂಧ ಹೇರಲಾಗಿದೆ. ಅಲ್ಲದೆ, ಬೆಳಗ್ಗೆ 9:30ರಿಂದ ಮಧ್ಯಾಹ್ನ 2:30ರ ವರೆಗೆ ಈ ನಿರ್ಬಂಧ ಇರಲಿದೆ ಎಂದು ತಿಳಿಸಲಾಗಿದೆ.

ಪರ್ಯಾಯ ಮಾರ್ಗಗಳ ವಿವರ: ನಿರ್ಬಂಧಿತ ರಸ್ತೆಗಳಿಗೆ ಪರ್ಯಾಯ ಮಾರ್ಗಗಳನ್ನು ಕಲ್ಪಿಸಲಾಗಿದೆ. ಮಾರೇನಹಳ್ಳಿ ರಾಜಲಕ್ಷ್ಮಿ ಜಂಕ್ಷನ್ನಿಂದ ಜಯದೇವ ಕಡೆಗೆ ಸಂಚರಿಸುವ ವಾಹನಗಳು, ಬನಶಂಕರಿ ಬಸ್ ನಿಲ್ದಾಣ, ಸಾರಕ್ಕಿ ಮಾರ್ಕೆಟ್, ಆರ್.ವಿ. ಡೆಂಟಲ್ ಜಂಕ್ಷನ್, 9ನೇ ಕ್ರಾಸ್ ರಸ್ತೆ ಮೂಲಕ ಸಂಚಾರ ಮಾಡಬಹುದು. ಅಷ್ಟೇ ಅಲ್ಲದೆ ಸಾರಕ್ಕಿ ಜಂಕ್ಷನ್ ಔಟರ್ ರಿಂಗ್ ರಸ್ತೆ ಮೂಲಕ ಕೂಡ ಬನ್ನೇರುಘಟ್ಟ ರಸ್ತೆ ಕಡೆಗೆ ಸಂಚಾರ ಮಾಡಬಹುದಾಗಿದೆ.
ಈಸ್ಟ್ ಎಂಡ್ ಸರ್ಕಲ್ನಿಂದ ಬನಶಂಕರಿ ಕಡೆಗೆ ಸಂಚರಿಸುವ ವಾಹನಗಳು 28ನೇ ಮುಖ್ಯರಸ್ತೆಯಲ್ಲಿ ಎಡ ತಿರುವು, 9ನೇ ಕ್ರಾಸ್ ಜಂಕ್ಷನ್, ಡಾಲಿಯಾ ಜಂಕ್ಷನ್, ಔಟರ್ ರಿಂಗ್ ರಸ್ತೆ ಮೂಲಕ ಸಾರಕ್ಕಿ ಜಂಕ್ಷನ್, ಕನಕಪುರ ರಸ್ತೆ ಹಾಗೂ ಬನಶಂಕರಿ ಕಡೆಗೆ ಸಂಚಾರ ಮಾಡಬಹುದು ಎಂದು ತಿಳಿಸಲಾಗಿದೆ.
ಇನ್ನು ಹೊಸೂರು ರಸ್ತೆಯಿಂದ ಕನಕಪುರ ರಸ್ತೆ, ಮೈಸೂರು ರಸ್ತೆ ಮತ್ತು ತುಮಕೂರು ಕಡೆ ಹೋಗುವ ವಾಹನಗಳು ನೈಸ್ ರಸ್ತೆ ಬಳಕೆ ಮಾಡಲು ಸೂಚಿಸಲಾಗಿದೆ. ನೈಸ್ ರಸ್ತೆಯಿಂದ ಬರುವ ವಾಹನಗಳು ಬನ್ನೇರುಘಟ್ಟ ಜಂಕ್ಷನ್, ಜಿಗಣಿ ರಸ್ತೆ, ಬೊಮ್ಮಸಂದ್ರ ಜಂಕ್ಷನ್, ಹೊಸೂರು ರಸ್ತೆ ಕಡೆಗೆ ಸಂಚಾರ ಮಾಡಬಹುದು. ಮತ್ತೊಂದೆಡೆ ಮೆಜೆಸ್ಟಿಕ್ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್ ರೈಲು ಉದ್ಘಾಟನೆ ಹಿನ್ನೆಲೆ ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.
ಮೋದಿ ಕಾರ್ಯಕ್ರಮಗಳು: ಬೆಳಗ್ಗೆ 10.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ ಮೋದಿ ಅವರು, ಕೆಎಸ್ಆರ್ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ವರ್ಚುವಲ್ ಆಗಿ ಅಮೃತ್ಸರ್-ಶ್ರೀ ಮತಾ ವೈಷ್ಣೋದೇವಿ ಕತ್ರಿ ಹಾಗೂ ಅಜ್ನಿ (ನಾಗಪುರ್)-ಪುಣೆಯ ಮತ್ತೆರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.
ಬಳಿಕ ರಸ್ತೆ ಮಾರ್ಗದ ಮೂಲಕ ಆರ್ವಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿ ನಮ್ಮ ಮೆಟ್ರೋ ಯೆಲ್ಲೋ ಲೈನ್ ಲೋಕಾರ್ಪಣೆ ಮಾಡಲಿದ್ದಾರೆ. ನಂತರ ಎಲೆಕ್ಟ್ರಾನಿಕ್ ಸಿಟಿ ಸ್ಟೇಷನ್ವರೆಗೆ ಮೆಟ್ರೋ ಪ್ರಯಾಣ ಮಾಡಲಿದ್ದಾರೆ. 19.15 ಕಿಲೋ ಮೀಟರ್ ಉದ್ದದ ಆರ್ವಿ ರಸ್ತೆಯಿಂದ ಬೊಮ್ಮಸಂದ್ರ ಸಾಗಲಿರುವ ಹಳದಿ ಮೆಟ್ರೋ ಮಾರ್ಗದಲ್ಲಿ 16 ಸ್ಟೇಷನ್ಗಳು ಬರಲಿದ್ದು, ಇದನ್ನು 5,056.99 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಬಳಿಕ ಐಐಐಟಿ ಆಗಮಿಸಿಲಿದ್ದು, ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಎಚ್ಎಎಲ್ಗೆ ತೆರಳಿ, ದೆಹಲಿಯತ್ತ ಪ್ರಯಾಣ ಬೆಳಸಲಿದ್ದಾರೆ.












Click it and Unblock the Notifications