ಕೋವಿಡ್ ಬಿಕ್ಕಟ್ಟು: ಸಿಎಂ, ಡಿಸಿಗಳೊಂದಿಗೆ ಇಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್
ಬೆಂಗಳೂರು, ಮೇ 18: ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ನಿರ್ವಹಣೆಯ ಕುರಿತು ಮಾಹಿತಿ ಪಡೆಯಲು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಪಿಎಂಒ ಕಚೇರಿ, ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ೧೦ ರಾಜ್ಯಗಳಲ್ಲಿ ಕೋವಿಡ್ ಬಿಕ್ಕಟ್ಟು ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ.
ಪ್ರಧಾನಿಗಳ ಸಭೆಯಲ್ಲಿ ಕರ್ನಾಟಕ, ಬಿಹಾರ, ಅಸ್ಸಾಂ, ಚಂಡೀಗಡ, ತಮಿಳುನಾಡು, ಉತ್ತರಾಖಂಡ, ಮಧ್ಯಪ್ರದೇಶ, ಗೋವಾ, ಹಿಮಾಚಲ ಪ್ರದೇಶ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಈ ವೇಳೆ ಗ್ರಾಮೀಣ ಮಟ್ಟದಲ್ಲಿ ಕೊರೊನಾ ನಿರ್ವಹಣೆಗೆ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ.
Recommended Video
ಸಿಎಂ ಗೃಹ ಕಚೇರಿ ಕೃಷ್ಣಾದಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತಾ, ಹಿರಿಯ ಅಧಿಕಾರಿಗಳಾದ ರಮಣ ರೆಡ್ಡಿ, ಲಕ್ಷ್ಮೀನಾರಾಯಣ್, ಮಂಜುನಾಥ್ ಪ್ರಸಾದ್ ಸೇರಿ, 17 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿಗಳು, ಸಿಇಒಗಳು ಭಾಗಿಯಾಗಿದ್ದರು.