ತಾವು ನಿಜವಾದ ನಾಯಕ ಎಂಬುದನ್ನು ಮೋದಿ ತೋರಿಸಿಕೊಟ್ಟರು; ನಾರಾಯಣ ಮೂರ್ತಿ
ಬೆಂಗಳೂರು, ಮಾರ್ಚ್ 02: ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಲಸಿಕೆ ಪಡೆದುಕೊಂಡಿದ್ದು ನಾಯಕತ್ವಕ್ಕೆ ಒಂದು ಉತ್ತಮ ಉದಾಹರಣೆ. ಅವರಿಂದ ಪ್ರೇರೇಪಿತನಾಗಿ ನಾನು ಲಸಿಕೆ ಪಡೆದುಕೊಳ್ಳುತ್ತಿದ್ದೇನೆ" ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು ಮೋದಿ ಕುರಿತು ಮೆಚ್ಚುಗೆಯ ಮಾತನ್ನಾಡಿದ್ದಾರೆ.
"ತಾವು ನಿಜವಾದ ನಾಯಕ ಎಂಬುದನ್ನು ಪ್ರಧಾನಿ ಮೋದಿಯವರು ಈ ಮೂಲಕ ತೋರಿಸಿಕೊಟ್ಟಿದ್ದಾರೆ" ಎಂದು ಹೊಗಳಿರುವ ನಾರಾಯಣಮೂರ್ತಿ ಅವರು ತಮ್ಮ ಪತ್ನಿ ಸುಧಾ ಮೂರ್ತಿ ಅವರೊಂದಿಗೆ ಮಂಗಳವಾರ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಲಸಿಕೆ ಪಡೆದುಕೊಂಡರು.
"ಸುಧಾ ಹಾಗೂ ನಾನು ಲಸಿಕೆಗೆ ನೋಂದಣಿ ಮಾಡಿಕೊಂಡೆವು. ಎಲ್ಲವೂ ಸುಲಲಿತವಾಗಿ ನಡೆಯಿತು. 28 ದಿನಗಳ ನಂತರ ಮತ್ತೆ ಎರಡನೇ ಡೋಸ್ ಲಸಿಕೆ ಪಡೆಯುತ್ತೇವೆ" ಎಂದು ಹೇಳಿದ್ದಾರೆ.

ಭಾರತದಲ್ಲಿ ಜನವರಿ 16ರಿಂದ ಕೊರೊನಾ ಸೋಂಕಿನ ವಿರುದ್ಧ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು.
ಮಾರ್ಚ್ 01ರಿಂದ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಆರಂಭಗೊಂಡಿದ್ದು, ಮೊದಲು 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇತರೆ ಆರೋಗ್ಯ ಸಮಸ್ಯೆಗಳುಳ್ಳ 45 ವರ್ಷ ಮೇಲ್ಪಟ್ಟವರಿಗೆ ಕೂಡ ಲಸಿಕೆ ನೀಡಲಾಗುತ್ತದೆ.
ಪ್ರಧಾನಿ ಮೋದಿ ಅವರು ದೆಹಲಿಯ ಏಮ್ಸ್ನಲ್ಲಿ ಸೋಮವಾರ ಕೊರೊನಾ ಲಸಿಕೆ ಪಡೆದುಕೊಂಡಿದ್ದು, ಬಿಜೆಪಿಯ ಹಲವು ನಾಯಕರು ಲಸಿಕೆ ತೆಗೆದುಕೊಳ್ಳುತ್ತಿದ್ದಾರೆ.












Click it and Unblock the Notifications