ನಲಪಾಡ್ ಗ್ಯಾಂಗಿನ ಐವರನ್ನು ಬಂಧಿಸಿದ ಪೊಲೀಸರು
ಬೆಂಗಳೂರು, ಫೆಬ್ರವರಿ 18: ಯುಬಿ ಸಿಟಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.
ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಅವರು ಪ್ರಮುಖ ಆರೋಪಿಯಾಗಿದ್ದು, ನಾಪತ್ತೆಯಾಗಿದ್ದಾರೆ. ಘಟನೆ ಬಳಿಕ ಮೊಹಮ್ಮದ್ ಅವರನ್ನು ಕಾಂಗ್ರೆಸ್ಸಿನಿಂದ ಉಚ್ಚಾಟಿಸಲಾಗಿದೆ.
ಯುಬಿ ಸಿಟಿಯ ರೆಸ್ಟೋರೆಂಟ್ ವೊಂದರಲ್ಲಿ ವಿದ್ವತ್ ಎಂಬಾತ ಮೇಲೆ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಲಪಾಡ್ ಹಾಗೂ ಆತನ ಸಹಚರರು ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾಗಿದ್ದ ವಿದ್ವತ್ ಮಲ್ಯ ಆಸ್ಪತ್ರೆಗೆ ದಾಖಲಾದ ಬಳಿಕವೂ ಮತ್ತೆ ನಲಪಾಡ್ ಗ್ಯಾಂಗಿನವರು ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು 5 ಮಂದಿಯನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ.

ಬಂಧಿತರನ್ನು ಬಾಲಕೃಷ್ಣ, ಮಂಜುನಾಥ್, ಅಭಿಷೇಕ್, ಅರುಣ್ ಸೇರಿದಂತೆ 5 ಮಂದಿಯನ್ನು ವಿಚಾರಣೆಗೊಳಪಡಿಸಲಾಗಿದೆ. ತಲೆಮರೆಸಿಕೊಂಡಿರುವ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಗಾಗಿ ಹುಡುಕಾಟ ಜಾರಿಯಲ್ಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಪ್ರಕರಣದ ಸೆಕ್ಷನ್ ಗಳ ಬಗ್ಗೆ ಕೂಡಾ ಚರ್ಚೆ ನಡೆದಿದೆ. ಘಟನೆ ನಡೆದು 20ಕ್ಕೂ ಅಧಿಕ ಗಂಟೆಯಾಗಿದ್ದರೂ ಪ್ರಮುಖ ಆರೋಪಿಯ ಸುಳಿವು ಸಿಕ್ಕಿಲ್ಲವೇಕೆ ಎಂದು ಬಿಜೆಪಿ, ಎಎಪಿ ಆಗ್ರಹಿಸಿದೆ.
ತಪ್ಪಿತಸ್ಥರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಘಟನೆ ನಡೆದು 19 ಗಂಟೆ ಕಳೆದರೂ ನಲಪಾಡ್ ಹ್ಯಾರಿಸ್ನನ್ನು ಬಂಧಿಸದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.












Click it and Unblock the Notifications