ನೈಟ್ ಕರ್ಫ್ಯೂ; ಬೆಂಗಳೂರಿಗರಿಗೆ ಪೊಲೀಸ್ ಆಯುಕ್ತರ ಎಚ್ಚರಿಕೆ
ಬೆಂಗಳೂರು, ಡಿಸೆಂಬರ್ 24: ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಹಾಗೂ ಹೊಸ ವರ್ಷಾಚರಣೆಯಲ್ಲಿ ಜನ ಸೇರುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಡಿ.24ರಿಂದ ಜ.2ರವೆಗೂ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಲಾಗಿದ್ದು, ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ರಾತ್ರಿ 11 ರಿಂದ ಬೆಳಗ್ಗೆ ಐದು ಗಂಟೆವರೆಗೂ ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೋವಿಡ್ ಕುರಿತು ಸರ್ಕಾರದ ಸೂಚನೆಗಳನ್ನು ಪಾಲಿಸುವುದು ಕಡ್ಡಾಯ. ನಿಯಮ ಉಲ್ಲಂಘನೆ ಕಂಡುಬಂದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆಯೂ ರಾತ್ರಿ ಕರ್ಫ್ಯೂಗೆ ಪೊಲೀಸ್ ಸಿಬ್ಬಂದಿ ಸಿದ್ಧಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.
ರಾತ್ರಿ ಹೊತ್ತು ಅನವಶ್ಯಕವಾಗಿ ಓಡಾಡುವುದಕ್ಕೆ ಕಡಿವಾಣ ಹಾಕಿ. ಬೈಕ್ ನಲ್ಲಿ ಸುಖಾಸುಮ್ಮನೆ ಓಡಾಡಿದರೆ NDMA ಸೆಕ್ಷನ್ 188 ಅಡಿಯಲ್ಲಿ ಬೈಕ್ ಜಪ್ತಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕರ್ಫ್ಯೂಗೆ ಬೆಂಗಳೂರಿನ ಜನರು ಸಹಕರಿಸಬೇಕು. ರಾತ್ರಿ ಪಾಳಿಗಳಲ್ಲಿ ಕೆಲಸ ಮಾಡುವವರು ಗುರುತಿನ ಚೀಟಿಯನ್ನು ತೋರಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.

ಬೈಯಪ್ಪನಹಳ್ಳಿಯಲ್ಲಿ ಒಂದು ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪೊಲೀಸರು ಡ್ರಗ್ಸ್ ಜಾಲದ ಬೇಟೆಯನ್ನು ಮುಂದುವರೆಸಿದ್ದಾರೆ. ಡಾರ್ಕ್ ನೆಟ್ ಮೂಲಕ ಆರೋಪಿಗಳು ಡ್ರಗ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದುದು ಗಮನಕ್ಕೆ ಬಂದಿದೆ ಎಂದಿದ್ದಾರೆ. ನಗರದಲ್ಲಿನ ಅಪರಾಧ ಪ್ರಕರಣಗಳ ಕುರಿತು ಮಾಹಿತಿ ಹಂಚಿಕೊಂಡ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನಗರದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಎಲ್ಲಾರೂ ಲಾಕ್ ಡೌನ್ ಸಮಯದಲ್ಲಿ ಮನೆಯೊಳಗೇ ಇದ್ದರು. ಇದು ಕೂಡ ಅಪರಾಧ ಪ್ರಕರಣಗಳ ಇಳಿಕೆಗೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ.












Click it and Unblock the Notifications