ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರ; ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 17ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಯಾರು ಕೂಡ ಹಾಳು ಮಾಡಬಾರದು ಎಂದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಹಾಗೂ ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸರ್ವಸಂಗ ಪರಿತ್ಯಾಗಿಗಳು, ಸಂತರು, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಮಾಡುತ್ತಿರುವ ಪೂಜ್ಯರು ಕೇಸರಿ ವಸ್ತ್ರಗಳನ್ನು ಧರಿಸುತ್ತಾರೆ. ಆದರೆ ಬಿಜೆಪಿ, ಆರ್ಎಸ್ಎಸ್ ಮತ್ತಿತರ ಸಹ ಸಂಘಟನೆಗಳು ಕೇಸರಿ ಬಾವುಟವನ್ನು ಇಟ್ಟುಕೊಂಡೇ ಹೋರಾಟ ಮಾಡುತ್ತಿವೆ ಎಂದು ಕಿಡಿಕಾರಿದರು.
"ಜನರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಹಾಗೂ ಕಲಾಪವನ್ನು ಹಾಳು ಮಾಡುತ್ತಿರುವವರನ್ನು ಕೂಡಲೇ ಸದನದಿಂದ ಹೊರಹಾಕಬೇಕು. ಸರ್ಕಾರಕ್ಕೆ ಕಲಾಪ ನಡೆಸುವ ಶಕ್ತಿ ಇಲ್ಲದಿದ್ದರೆ ಅನಿರ್ದಿಷ್ಟಾವಧಿಗೆ ಮುಂದೂಡಿ," ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯ ಮಾಡಿದರು.
ಗುರುವಾರದ ವಿಧಾನಸಭೆ ಕಲಾಪವನ್ನು ಸಭಾಧ್ಯಕ್ಷರು ಮುಂದೂಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕಲಾಪವನ್ನು ಹಾಳು ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
"ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಹಾಗೂ ರೈತರು, ಕಾರ್ಮಿಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಚರ್ಚೆ ಮಾಡುವುದು ಬಿಟ್ಟು, ಕೇಸರಿ ಬಾವುಟದ ವಿಷಯ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳು ಮಾಡಿದರು. ಸಚಿವರೊಬ್ಬರ ರಾಜೀನಾಮೆ ಪಡೆಯಬೇಕು ಎಂಬುದನ್ನೇ ಪ್ರತಿಷ್ಠೆ ಮಾಡಿಕೊಂಡು ಜನರ ನಿರೀಕ್ಷೆಗಳನ್ನು ಅವಹೇಳನ ಮಾಡುತ್ತಿದ್ದಾರೆ," ಎಂದು ಮಾಜಿ ಸಿಎಂ ಎಚ್ಡಿಕೆ ಗುಡುಗಿದರು.

"ಹತ್ತು ನಿಮಿಷ ಧರಣಿ ಮಾಡುವುದು, ಆಮೇಲೆ ಸದನವನ್ನು ಮುಂದಕ್ಕೆ ಹಾಕುವುದು, ಕಲಾಪ ನಡೆಸುವ ರೀತಿ ಇದಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನವನ್ನು ಕರೆದಿದ್ದೀರಿ. ಸರಕಾರಕ್ಕೆ ಸದನವನ್ನು ಸಕ್ರಮವಾಗಿ ನಡೆಸುವ ಶಕ್ತಿ ಮತ್ತು ಬದ್ಧತೆ ಇಲ್ಲದಿದ್ದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ. ಸುಖಾಸುಮ್ಮನೆ ದಿನಕ್ಕೆ 1.5 ರಿಂದ 2 ಕೋಟಿ ರೂಪಾಯಿಯಷ್ಟು ಜನರ ತೆರಿಗೆಯನ್ನು ಯಾಕೆ ಪೋಲು ಮಾಡುತ್ತೀರಿ. ಕೇವಲ ಟಿಎ, ಡಿಎ ಪಡೆಯಲು ಕಲಾಪ ನಡೆಸಬೇಡಿ," ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಂಘರ್ಷದ ವಾತಾವರಣ ಸೃಷ್ಟಿ
"ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದ ಶಿಕ್ಷಣ ವ್ಯವಸ್ಥೆ ಹಾಳಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಮಕ್ಕಳು ಹೊಡೆದಾಡಿಕೊಳ್ಳುವ ಸನ್ನಿವೇಶ ಉಂಟಾಗಿದೆ. ಈ ವಿಷಯವನ್ನು ಸದನದಲ್ಲಿ ಚರ್ಚೆ ನಡೆಸಬೇಕಿತ್ತು," ಎಂದು ಹರಿಹಾಯ್ದರು.
"ಬೇಸಿಗೆ ಬರುವುದಕ್ಕೆ ಮುನ್ನವೇ ರಾಜ್ಯದಲ್ಲಿ ದಿನಕ್ಕೆ ಎರಡೂವರೆ ಗಂಟೆ ಕಾಲ ಲೋಡ್ ಶೆಡ್ಡಿಂಗ್ ಶುರುವಾಗಿದೆ. ವಿದ್ಯುತ್ ಕಡಿತದಿಂದ ರೈತರು ಬೆಳೆಗಳಿಗೆ ರಾತ್ರಿ ಹೊತ್ತು ನೀರು ಹರಿಸಬೇಕಾದ ಕಷ್ಟದ ಸ್ಥಿತಿ ಎದುರಾಗಿದೆ. ಆಡಳಿತಾರೂಢ ಪಕ್ಷಕ್ಕೆ ಮತ್ತು ಅಧಿಕೃತ ವಿರೋಧ ಪಕ್ಷಕ್ಕೆ ಇದರ ಬಗ್ಗೆ ಕಾಳಜಿ ಇಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಕಲಾಪವನ್ನು ಹಾಳು ಮಾಡಿ ಜನರ ನಿರೀಕ್ಷೆಗಳನ್ನು ಕಾಲ ಕಸದಂತೆ ನೋಡುತ್ತಿವೆ. ಈ ವಿಷಯಗಳನ್ನು ಪ್ರಸ್ತಾಪ ಮಾಡಲು ಉದ್ದೇಶಿಸಿದ್ದೆ. ಆದರೆ ಅವಕಾಶ ಸಿಗಲಿಲ್ಲ," ಎಂದು ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದರು.

ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎನ್ನುವುದು ಆರ್ಎಸ್ಎಸ್ ಮತ್ತಿತರ ಸಂಘಟನೆಗಳ ಮಹದಾಸೆ. ಅವರ ಅಜೆಂಡಾ ಕೂಡ ಅದೇ. ಆ ಹಿನ್ನೆಲೆಯೊಳಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರು ಮುಂದೊಂದು ದಿನ ಕೆಂಪುಕೋಟೆ ಮೇಲೂ ಕೇಸರಿ ಬಾವುಟವನ್ನು ಯಾರಾದರೂ ಹಾರಿಸಬಹುದು ಎಂದು ಹೇಳಿದ್ದರು. ನಾನೇ ಹಾರಿಸುತ್ತೇನೆ ಎಂದು ಅವರೇನೂ ಹೇಳಿಲ್ಲ. ಹೀಗಿದ್ದರೂ ಕಾಂಗ್ರೆಸ್ ಪ್ರತಿಷ್ಠೆಗೆ ಬಿದ್ದು, ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಸೇರಿದಂತೆ ದಕ್ಷಿಣದ ಎಲ್ಲ ರಾಜ್ಯಗಳಲ್ಲಿಯೂ ಧ್ವಜಸ್ತಂಭಗಳನ್ನು ನೆಡುವ, ಅವುಗಳಲ್ಲಿ ತಮ್ಮ ಸಂಘಟನೆಗಳ ಬಾವುಟ ಹಾರಿಸುವುದು ಇದೆ. ನಮ್ಮಲ್ಲೂ ಕನ್ನಡ ಸಂಘಟನೆಗಳು ಕನ್ನಡ ಬಾವುಟವನ್ನು ಹಾರಿಸುತ್ತವೆ. ತಮಿಳುನಾಡಿನಲ್ಲಿಯೂ ಇಂಥ ದೃಶ್ಯಗಳನ್ನು ಕಾಣಬಹುದು. ಖಾಲಿ ಇರುವ ಧ್ವಜಸ್ತಂಭಗಳಲ್ಲಿ ಕೇಸರಿ ಬಾವುಟ ಹಾರಿಸುವುದನ್ನು ನೋಡಿದ್ದೇವೆ. ಈ ವಿಷಯವನ್ನು ದೊಡ್ಡದು ಮಾಡಿ ಸದನದ ಕಲಾಪವನ್ನು ಹಾಳು ಮಾಡುವುದು ಎಷ್ಟು ಸರಿ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಎರಡೂ ರಾಷ್ಟ್ರೀಯ ಪಕ್ಷಗಳು ಜನರ ಹಿತ ಮರೆತು ವರ್ತಿಸುತ್ತಿದ್ದು, ಇದನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.












Click it and Unblock the Notifications