ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ 15 ದಿನ ಗಡುವು ನೀಡಿದ ಹೈಕೋರ್ಟ್
ಬೆಂಗಳೂರು ಮಾ.15. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ ಕೇಂದ್ರ ಭಾಗ( ಸಿಬಿಡಿ)ಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು/ದುರಸ್ತಿ ಮಾಡಲು ಹೈಕೋರ್ಟ್ ಮತ್ತೆ ಬಿಬಿಎಂಪಿಗೆ 15 ದಿನಗಳ ಗಡುವು ನೀಡಿದೆ.
ಅಲ್ಲದೆ, ಆಧುನಿಕ ತಂತ್ರಜ್ಞಾನ ಬಳಸಿ ಸಮರೋಪಾದಿಯಲ್ಲಿ ಗುಂಡಿ ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಆದೇಶಿಸಿದೆ.
ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು.

ಕಳೆದ ವಿಚಾರಣೆ ವೇಳೆ ನ್ಯಾಯಾಲಯ ನೀಡಿದ್ದ ನಿರ್ದೇಶದನಂತೆ ರಸ್ತೆಗುಂಡಿ ಸಮಸ್ಯೆಗೆ ಪರಿಹಾರಕ್ಕೆ ಪೈಥಾನ್ ಯಂತ್ರ ಬಳಕೆ ಕುರಿತು ಬಿಬಿಎಂಪಿ ನ್ಯಾಯಾಲಯಕ್ಕೆ ಕ್ರಿಯಾ ಯೋಜನೆಯ ವರದಿಯನ್ನು ಸಲ್ಲಿಸಿತ್ತು.
ಆ ವರದಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಶೇಷವಾಗಿ ನಗರದ ಕೇಂದ್ರ ಭಾಗದಲ್ಲಿ(ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ )ನಲ್ಲಿ ಪೈಥಾನ್ ಸೇರಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.
ಅದನ್ನು ಪರಿಶೀಲಿಸಿದ ನ್ಯಾಯಪೀಠ ಮತ್ತೆ ಇಂಜಿನಿಯರ್ಗಳ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ಇನ್ನು ನ್ಯಾಯಾಲಯ ವಿಳಂಬವನ್ನು ಸಹಿಸುವುದಿಲ್ಲ, ಗುಂಡಿ ಮುಚ್ಚುವ ಕಾರ್ಯವನ್ನು ಸಮರೋಪಾದಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೈಗೊಳ್ಳಬೇಕು. ಹದಿನೈದು ದಿನಗಳಲ್ಲಿ ಸಿಬಿಡಿ ಪ್ರದೇಶದಲ್ಲಿ ಯಾವೊಂದು ಗುಂಡಿಯೂ ಇರದಂತೆ ನೋಡಿಕೊಳ್ಳಬೇಕು, ಆ ಕುರಿತು ಕಾಮಗಾರಿಯ ವಿವರಗಳನ್ನು ಒಳಗೊಂಡ ವರದಿಯನ್ನು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.
ಅಶ್ವಿನ್ ಸಾವು ವಿಚಾರ ಪ್ರಸ್ತಾಪ; ಈ ಮಧ್ಯೆ, ಬೆಂಗಳೂರು ನಗರದಲ್ಲಿ ಸೋಮವಾರ ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬಲಿಯಾದ ಅಶ್ವಿನ್ ವಿಚಾರವೂ ವಿಚಾರಣೆ ವೇಳೆ ನ್ಯಾಯಾಲಯದಲ್ಲಿ ಪ್ರಸ್ತಾಪಿಸಲ್ಪಟ್ಟಿತ್ತು.
ವಕೀಲರು ವಿಚಾರ ಪ್ರಸ್ತಾಪಿಸಿದ್ದಕ್ಕೆ ಸಿಜೆ ಬೇಸರ ವ್ಯಕ್ತಪಡಿಸಿದರು ಮತ್ತು ಬೆಂಗಳೂರು ನಗರದ ಕೆಟ್ಟ ರಸ್ತೆಗಳಿಂದಾಗಿ ಯಾರಾದರೂ ಸಾವನ್ನಪ್ಪಿದರು ಎಂಬ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಓದಿದಾಗ ನಮಗೆ ನಿಜಕ್ಕೂ 'ತಪ್ಪಿತಸ್ಥ' ಭಾವನೆ ಮೂಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ನ್ಯಾಯಾಲಯಗಳ ಸರಣಿ ನಿರ್ದೇಶನಗಳ ಹೊರತಾಗಿಯೂ ಪರಿಸ್ಥಿತಿ ಸುಧಾರಿಸುತ್ತಿಲ್ಲ, ಇದು ನಿಜಕ್ಕೂ ನೋವಿನ ಸಂಗತಿ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿತು.
ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ; ಕಳೆದ ವಿಚಾರಣೆ ವೇಳೆ ನ್ಯಾಯಪೀಠ "ರಸ್ತೆ ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ, ಬಿಬಿಎಂಪಿ ಏಕೆ ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಿಲ್ಲ. ಉದ್ದೇಶಪೂರ್ವಕವಾಗಿ ಬಿಬಿಎಂಪಿ ಇಂಜಿನಿಯರ್ಗಳು ಹೀಗೆ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ. ಹಾಗಾಗಿ ಬಿಬಿಎಂಪಿ ಇಂಜಿನಿಯರ್ಗಳನ್ನೇ ಬದಲಿಸಲು ಸರ್ಕಾರಕ್ಕೆ ಆದೇಶ ನೀಡುತ್ತವೆ'' ಎಂದು ಎಚ್ಚರಿಕೆ ನೀಡಿತ್ತು.
ಆಗ ನ್ಯಾಯಪೀಠ, ರಸ್ತೆ ಗುಂಡಿ ಮುಚ್ಚಲು ಉತ್ತಮ ತಂತ್ರಜ್ಞಾನ ಬಳಸಿ, ಬರೀ ಕಣ್ಣೊರೆಸುವ ತಂತ್ರ ಇಲ್ಲಿ ನಡೆಯುವುದಿಲ್ಲ ಎಂದಿದ್ದ ನ್ಯಾಯಪೀಠ, ಸುದೀರ್ಘ ಬಾಳಿಕೆಯ ರಸ್ತೆಗಳನ್ನು ನಿರ್ಮಿಸದಿದ್ದರೆ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ ನೀಡಿತು.
Recommended Video
ಇಂಜಿನಿಯರ್ಗೆ ಕ್ಲಾಸ್: ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಇಂಜಿನಿಯರ್ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕ್ಲಾಸ್ ತೆಗೆದುಕೊಂಡಿತು.












Click it and Unblock the Notifications