ಬೆಂಗಳೂರು: ಮಳೆಯಿಂದಾಗಿ ಧರೆಗುರುಳಿದ ವಿದ್ಯುತ್ ಕಂಬಗಳು- ಬೆಸ್ಕಾಂ ಸಿಬ್ಬಂದಿಗಳು ಹೈರಾಣ
ಇವುಗಳನ್ನು ಮಳೆಯ ಮಧ್ಯೆ ಸರಿಪಡಿಸಲು ಬೆಸ್ಕಾಂ ಸಿಬ್ಬಂದಿ ಹೈರಾಣಾಗಿದ್ದಾರೆ. ಮಾತ್ರವಲ್ಲದೇ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದ್ದು, ಸುಮಾರು 500ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿರೋ ಬಗ್ಗೆ ಮಾಹಿತಿ ಸಿಕ್ಕಿದೆ.
ಬೊಮ್ಮನಹಳ್ಳಿ, ಜಯನಗರ ವ್ಯಾಪ್ತಿಯಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗಿದ್ದು, ಬೆಂಗಳೂರಿನಲ್ಲಿ ಒಟ್ಟು 30 ಟ್ರಾನ್ಸ್ಫಾರ್ಮರ್ಗಳು ಡ್ಯಾಮೇಜ್ ಆಗಿವೆ ಅಂತಾ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮಾಹಿತಿ ನೀಡಿದ್ದಾರೆ. ಇನ್ನೂ ಹವಾಮಾನ ಇಲಾಖೆಯಿಂದ ಮಳೆ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಅಸಾನಿ ಚಂಡಮಾರುತದ ಎಫೆಕ್ಟ್ ಮುಂದುವರೆಯಲಿದೆ ಎನ್ನಲಾಗ್ತಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ತುಂತುರು ಮಳೆಯಾಗಿದೆ. ಚಂಡಮಾರುತದ ಪರಿಣಾಮ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾತ್ರವಲ್ಲದೇ 'ಅಸಾನಿ ಚಂಡಮಾರುತ'ದಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಭಾನುವಾರದಿಂದ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆ ಅಗಲಿದ್ದು, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಆಂಧ್ರದ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ರಕ್ಷಣಾ ತಂಡಗಳು ಸಮುದ್ರ ತೀರದಲ್ಲಿ ಸಜ್ಜಾಗಿದೆ ನಿಂತಿವೆ.

ಚಂಡಮಾರುತದ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಈಗಾಗಲೇ ಮಳೆಯಾಗ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ತುಂತುರು ಮಳೆಯಾಗ್ತಿದೆ. ಇಂದೂ ಕೂಡ ಮೋಡ ಮುಸುಕಿದ ವಾತಾವರಣ ಇರಲಿದ್ದು, ಮಳೆ ಮುಂದುವರಿಯಲಿದೆ. ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.












Click it and Unblock the Notifications