ಕರ್ನಾಟಕ ಚುನಾವಣೆ; 'ಕೈ' ಹಿಡಿದ ಜೆಡಿಎಸ್ ನಾಯಕ ಪ್ರಭಾಕರ ರೆಡ್ಡಿ!
ಬೆಂಗಳೂರು, ಏಪ್ರಿಲ್ 27; ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನದ ದಿನಾಂಕ ಹತ್ತಿರವಾಗುತ್ತಿದ್ದರೂ ಪಕ್ಷಾಂತರ ಪರ್ವ ಮುಂದುವರೆದಿದೆ. ಜೆಡಿಎಸ್ನ ಇಬ್ಬರು ನಾಯಕರು ಗುರುವಾರ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.
ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಬೆಂಗಳೂರಿನ ಜೆಡಿಎಸ್ ನಾಯಕ ಪ್ರಭಾಕರ ರೆಡ್ಡಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು. ಎಚ್. ಡಿ. ಕುಮಾರಸ್ವಾಮಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೂ ಆಗಿರುವ ಪ್ರಭಾಕರ ರೆಡ್ಡಿ ಕಾಂಗ್ರೆಸ್ ಸೇರ್ಪಡೆ ಅಚ್ಚರಿಗೆ ಕಾರಣವಾಗಿದೆ.

2018ರ ಚುನಾವಣೆಯಲ್ಲಿ ಪ್ರಭಾಕರ ರೆಡ್ಡಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಿಜೆಪಿಯ ಎಂ. ಕೃಷ್ಣಪ್ಪ ವಿರುದ್ಧ ಸೋಲು ಕಂಡಿದ್ದರು. ಚುನಾವಣೆಯಲ್ಲಿ 36,164 ಮತಗಳನ್ನು ಪಡೆದು ಮೂರನೇ ಸ್ಥಾನವನ್ನು ಪಡೆದಿದ್ದರು. 2013ರ ಚುನಾವಣೆಯಲ್ಲಿ 72,045 ಮತಗಳನ್ನು ಪಡೆದು ಸೋಲು ಕಂಡಿದ್ದರು.
ಈ ಬಾರಿಯ ಸಹ ಪ್ರಭಾಕರ ರೆಡ್ಡಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷ ಹೆಚ್. ಪಿ. ರಾಜಗೋಪಾಲ ರೆಡ್ಡಿಗೆ ಟಿಕೆಟ್ ನೀಡಿತ್ತು. ಇದರಿಂದಾಗಿ ಅಸಮಾಧಾನಗೊಂಡ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿ. ಕೆ. ಶಿವಕುಮಾರ್ ಹೇಳಿಕೆ; ನಾರಾಯಣ ಗೌಡ, ಪ್ರಭಾಕರ ರೆಡ್ಡಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಡಿ. ಕೆ. ಶಿವಕುಮಾರ್, "ಇಲ್ಲಿ ಹೊಸಬರು, ಹಳಬರು ಎಂಬ ಪ್ರಶ್ನೆಯೇ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ. 78 ಲಕ್ಷ ಸದಸ್ಯರು ಕಾಂಗ್ರೆಸ್ನಲ್ಲಿದ್ದು, ಗ್ಯಾರಂಟಿ ಯೋಜನೆ ಕಾರ್ಡ್ ಮನೆ ಮನೆ ತಲುಪುತ್ತಿದೆ. ಸಮೀಕ್ಷೆಗಳೂ ಕಾಂಗ್ರೆಸ್ ಪರವಾಗಿದ್ದು, ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತದಿಂದ ಸರ್ಕಾರ ರಚನೆ ಮಾಡಲಿದೆ" ಎಂದರು.
ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿರುವ ಪ್ರಭಾಕರ ರೆಡ್ಡಿ, "ಕ್ಷೇತ್ರದ ಅಭಿವೃದ್ಧಿಗಾಗಿ ಜನರಪರ ಕಾಳಜಿಯನ್ನು ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇನೆ. ಯಾವುದೇ ಷರತ್ತು ಹಾಕದೇ ಬೇಷರತ್ ಆಗಿ ಪಕ್ಷ ಸೇರುವ ಮೂಲಕ ಬೆಂಬಲ ನೀಡಿದ್ದೇನೆ" ಎಂದು ಹೇಳಿದ್ದಾರೆ.
ಬುಧವಾರ ಪ್ರಭಾಕರ ರೆಡ್ಡಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ. ಕೆ. ಸುರೇಶ್ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಕೆ. ರಮೇಶ್ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಗುರುವಾರ ಅವರು ಕಾಂಗ್ರೆಸ್ ಸೇರಿದ್ದಾರೆ.
ಐಟಿ ದಾಳಿ ನಡೆದಿತ್ತು; ಪ್ರಭಾಕರ ರೆಡ್ಡಿ ಈ ಬಾರಿಯ ಚುನಾವಣೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಎಂದೇ ಹೆಸರಿಸಲಾಗಿತ್ತು. ಫೆಬ್ರವರಿ ತಿಂಗಳಿನಲ್ಲಿ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು. ಮೈಲಸಂದ್ರದಲ್ಲಿರುವ ರೆಡ್ಡಿ ಅವರ ಮನೆ, ಕಚೇರಿ, ಕೋಣನಕುಂಟೆ, ದೊಮ್ಮಲೂರುಗಳಲ್ಲಿ ಇರುವ ಅವರ ಆಸ್ತಿ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಲಾಗಿತ್ತು.
2021ರಲ್ಲಿ ಆರ್. ಆರ್. ನಗರದ ನಿವಾಸದಲ್ಲಿ ಪ್ರಭಾಕರ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಆಗ ವಿಡಿಯೋ ಬಿಡುಗಡೆ ಮಾಡಿದ್ದ ಅವರು, "ನನಗೆ ಕೋವಿಡ್ ಸೋಂಕು ತಗುಲಿತ್ತು. ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಶ್ವಾಸಕೋಶ ಮತ್ತು ಗಂಟಲಿನ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಸ್ಪಷ್ಟನೆ ನೀಡಿದ್ದರು.
ವಿಧಾನಸಭಾ ಚುನಾವಣೆಗ ಎರಡು ವರ್ಷ ಬಾಕಿ ಇರುವಾಗಲೇ ಪ್ರಭಾಕರ ರೆಡ್ಡಿ ಬೆಂಗಳೂರು ದಕ್ಷಿಣದ ಅಭ್ಯರ್ಥಿ ಎಂಬ ಸುದ್ದಿ ಹಬ್ಬಿತ್ತು. ಆದರೆ ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದ ಎಚ್. ಪಿ. ರಾಜಗೋಪಾಲ ರೆಡ್ಡಿಗೆ ಜೆಡಿಎಸ್ ಈ ಬಾರಿಯ ಚುನಾವಣೆ ಟಿಕೆಟ್ ನೀಡಿದೆ.
ಎಚ್. ಪಿ. ರಾಜಗೋಪಾಲ ರೆಡ್ಡಿ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರು ಟಿಕೆಟ್ ಕೈತಪ್ಪಿದ ಬಳಿಕ ಪತ್ನಿ ಸುಷ್ಮಾ ರೆಡ್ಡಿ ಜೊತೆ ಜೆಡಿಎಸ್ ಸೇರಿದ್ದರು. ಸುಷ್ಮಾ ಸಹ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು.












Click it and Unblock the Notifications