ವಿಜಯೇಂದ್ರಗೆ ಸಚಿವ ಸ್ಥಾನ ಸಿಗದಂತೆ ಪಂಚೆ ಎತ್ತಿಕಟ್ಟಿ ನಿಂತು ಸಂತೋಷ ಪಡುತ್ತಿರುವವರು ಯಾರು?
ಬೆಂಗಳೂರು,ಜು.12: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬಿಎಸ್ ಯಡಿಯೂರಪ್ಪ ವಿರುದ್ಧ ಪಿತೂರಿ ನಡೆಸಿ ಅವರನ್ನು ಮುಖ್ಯಮಂತ್ರಿ ಗಾದಿಯಿಂದ ಕೆಳಗಿಳಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಬಿ.ಎಸ್.ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಯಾರ ಷಡ್ಯಂತ್ರದಿಂದ?, ನೀವೂ ಇದರಲ್ಲಿ ಭಾಗಿಯಾಲ್ಲವೇ?'ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಪ್ರಲ್ಹಾದ್ ಜೋಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಸಿದ್ದರಾಮೋತ್ಸವ ಎಂದು ಎಂದು ಜೋಶಿ ಟೀಕಿಸಿದ್ದರು.
ನಾಲ್ಕು ದಶಕಗಳ ಕಾಲ ರಕ್ತ, ಬೆವರು ಸುರಿಸಿ ಬಿಜೆಪಿ ಪಕ್ಷವನ್ನು ಬಿ.ಎಸ್.ಯಡಿಯೂರಪ್ಪ ಅವರು ಕಟ್ಟಿದರು. ಈಗ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಿದವರು ಯಾರು? ಯಾರ ಷಡ್ಯಂತ್ರದಿಂದ ಅವರನ್ನು ಜೈಲಿಗೆ ಕಳುಹಿಸಲಾಗಿದೆ. ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಬಯಸಿದ್ದರು. ಅವರಿಗೆ ಮುಖ್ಯಮಂತ್ರಿ ಆಸೆ ತೋರಿಸಿದ್ದು ಯಾರು? ಅಂತಿಮವಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದವರು ಯಾರು?" ಎಂದು ಪ್ರಲ್ಹಾದ್ ಜೋಶಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಯತ್ನಾಳ್ ಆರೋಪ ಸುರಿಮಳೆ ಯಾರ ಕುಮ್ಮಕ್ಕಿನಿಂದ
ಕೊನೆಗೆ ಬಿಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಕೈಗೆ ಬಂದಂತೆ ಮುಖ್ಯಮಂತ್ರಿ ಮಾಡಿ ಬೆಂಕಿ ಬಿದ್ದದ್ದು ಯಾರ ಹೊಟ್ಟೆಗೆ ಪ್ರಲ್ಹಾದ್ ಜೋಶಿ ಅವರೇ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿದಿನ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ವಿಜಯೇಂದ್ರರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿರುವುದು ಯಾರ ಕುಮ್ಮಕ್ಕಿನಿಂದ? ಪಕ್ಷದ ಹಿರಿಯ ನಾಯಕನ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಶಾಸಕರ ವಿರುದ್ದ ಕ್ರಮಕೈಗೊಳ್ಳದಂತೆ ತಡೆಯುತ್ತಿರುವ ಕೈಗಳು ಯಾರದ್ದು ಪ್ರಲ್ಹಾದ್ ಜೋಶಿ ಅವರೇ ಎಂದು ಸಿದ್ದು ವಾಗ್ದಾಳಿ ನಡೆಸಿದ್ದಾರೆ.

ಹಗರಣಗಳಲ್ಲಿ ಹೆಸರಿನ ಸಂಚು ಯಾರದು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಗ ವಿಜಯೇಂದ್ರನವರಿಗೆ ಸಚಿವ ಸ್ಥಾನ ಸಿಗದಂತೆ ಮಾಡಲು ಪಂಚೆ ಎತ್ತಿಕಟ್ಟಿ ನಿಂತು ಸಂತೋಷ ಪಡುತ್ತಿರುವವರು ಯಾರು? ಆ ಸಂತೋಷದಲ್ಲಿ ಭಾಗಿಯಾಗಿರುವವರು ಯಾರು? ಹಗರಣಗಳಲ್ಲಿ ಅವರ ಹೆಸರನ್ನು ಸೋರಿಬಿಡುತ್ತಿರುವ ಸಂಚು ಯಾರದ್ದು ಪ್ರಲ್ಹಾದ್ ಜೋಶಿ ಅವರೇ ಎಂದು ಟ್ವಿಟ್ಟರ್ನಲ್ಲಿ ಸಿದ್ದು ಟೀಕೆ ಮಾಡಿದ್ದಾರೆ.

ಶೆಟ್ಟರ್, ಅರವಿಂದ ಬೆಲ್ಲದ ಅವರ ಆಸೆಗೆ ತಣ್ಣೀರು
ಲಿಂಗಾಯತರನ್ನು, ಲಿಂಗಾಯತ ಮಠದ ಸ್ವಾಮಿಗಳನ್ನು ಓಲೈಸುತ್ತಾ ಪಕ್ಷ ಕಟ್ಟಿ ಈಗ ಪಕ್ಷದಲ್ಲಿರುವ ಒಬ್ಬೊಬ್ಬ ಲಿಂಗಾಯತರನ್ನು ಮೂಲೆ ಗುಂಪು ಮಾಡುತ್ತಿರುವುದು ಯಾರ ಕಾರಸ್ತಾನ? ಮುಖ್ಯಮಂತ್ರಿ ಸ್ಥಾನದ ಕನಸಿನಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಶಾಸಕ ಅರವಿಂದ ಬೆಲ್ಲದ ಅವರ ಆಸೆಗೆ ತಣ್ಣೀರೆರಚಿದ್ದು ಯಾರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಬಗ್ಗೆ ಮಾತನಾಡುವುದು ತಮಾಷೆಯಾಗಿದೆ
ಮೊದಲ ಅಧಿಕಾರಾವಧಿಯಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಮಾಡಿದ್ದ ಬಿಜೆಪಿ, 2ನೇ ಅವಧಿಯ ವರ್ಷ ಮುಗಿಯುವಷ್ಟರಲ್ಲಿ ಮೊದಲನೆಯವರನ್ನು ಪದಚ್ಯುತಿಗೊಳಿಸಿ 2ನೇ ಮುಖ್ಯಮಂತ್ರಿಯನ್ನು ಮಾಡಿತ್ತು. ಈಗ ಎರಡನೆಯವರನ್ನೂ ಇಳಿಸಿ ಮೂರನೆಯವರನ್ನು ಕೂರಿಸಲು ಹೊರಟಿರುವ ನೀವು ಕಾಂಗ್ರೆಸ್ ಭಿನ್ನಮತದ ಬಗ್ಗೆ ಮಾತನಾಡುವುದು ತಮಾಷೆಯಾಗಿದೆ ಪ್ರಹ್ಲಾದ್ ಜೋಶಿ ಅವರೇ ಎಂದು ಸಿದ್ದು ತಿವಿದಿದ್ದಾರೆ.

ಆಪರೇಷನ್ ಕಮಲದ ಹೊಲಸು ದಂಧೆ
ಸಾಧನೆಯ ಬಲದಿಂದ ಬಹುಮತ ಗಳಿಸಿ ಅಧಿಕಾರಕ್ಕೆ ಬರುವುದು ನಿಮ್ಮ ಹಣೆಯಲ್ಲಿ ಬರೆದಿಲ್ಲ. ನಿಮ್ಮದೇನಿದ್ದರೂ ಆಪರೇಷನ್ ಕಮಲದ ಹೊಲಸು ದಂಧೆ. ಎದುರಿಗಿದ್ದವರ ಊಟದೆಲೆಯ ಮೇಲಿನ ಸತ್ತ ನೊಣವನ್ನು ಹುಡುಕುವ ಚಾಳಿ ಬಿಡಿ, ನಿಮ್ಮ ಊಟದ ಎಲೆಯಲ್ಲಿ ಸತ್ತು ಬಿದ್ದಿರುವ ಆನೆಯನ್ನು ನೋಡಿ ಪ್ರಲ್ಹಾದ್ ಜೋಶಿ ಅವರೇ ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.












Click it and Unblock the Notifications