CJP: ಬೆಂಗಳೂರಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಅಬ್ಬರ: ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್ ಭಾಗಿ
ಬೆಂಗಳೂರು: ದೇಶದ ಶಿಕ್ಷಣ ಕ್ಷೇತ್ರದಲ್ಲಿನ ಸಾಲು ಸಾಲು ವೈಫಲ್ಯಗಳು ಹಾಗೂ ನೀಟ್ (NEET) ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಸಿಲಿಕಾನ್ ಸಿಟಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಆಯೋಜಿಸಿರುವ ಈ ದೇಶವ್ಯಾಪಿ ಅಭಿಯಾನದ ಧರಣಿಯಲ್ಲಿ ಖ್ಯಾತ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಅವರು ಭಾಗವಹಿಸಿದ್ದಾರೆ. ಪ್ರಕಾಶ್ ರಾಜ್ ಅವರ ಎಂಟ್ರಿಯಿಂದಾಗಿ ಈ ಪ್ರತಿಭಟನಾ ಕಣ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ಹೋರಾಟಕ್ಕೆ ಕಾರಣಗಳು
ದೇಶದ ಶಿಕ್ಷಣ ವ್ಯವಸ್ಥೆಯು ಸಂಪೂರ್ಣವಾಗಿ ಹಳ್ಳ ಹಿಡಿದಿದೆ ಎಂದು ಆರೋಪಿಸಿರುವ ಪ್ರತಿಭಟನಾಕಾರರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ರಾಷ್ಟ್ರಮಟ್ಟದ ಪ್ರತಿಷ್ಠಿತ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸರಣಿ ರೂಪದಲ್ಲಿ ಸೋರಿಕೆಯಾಗುತ್ತಿರುವುದು ಮತ್ತು ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯವನ್ನು ಅಂಧಕಾರಕ್ಕೆ ದೂಡಿದೆ. ನೀಟ್ ಪರೀಕ್ಷೆಯ ಗೊಂದಲ ಹಾಗೂ ಅಕ್ರಮಗಳಿಂದ ಮನನೊಂದು ಇತ್ತೀಚಿನ ದಿನಗಳಲ್ಲಿ ಹಲವು ವೈದ್ಯಕೀಯ ಸೀಟು ಆಕಾಂಕ್ಷಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಾವುಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯದ ಬೇಜವಾಬ್ದಾರಿತನವೇ ಕಾರಣ ಎಂದು ಆಕ್ರೋಶ ಹೊರಹಾಕಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜಮಾಯಿಸಿರುವ 'ಕಾಕ್ರೋಚ್ ಜನತಾ ಪಾರ್ಟಿ'ಯ ನೂರಾರು ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಹೋರಾಟಕ್ಕೆ ನಟ ಪ್ರಕಾಶ್ ರಾಜ್ ಸಾಥ್ ನೀಡಿದ್ದಾರೆ. ಸದ್ಯ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನಾಕಾರರ ಸರಣಿ ಭಾಷಣಗಳು ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಧರಣಿ ಮುಂದುವರಿದಿದೆ. ಪ್ರಕಾಶ್ ರಾಜ್ ಅವರ ಉಪಸ್ಥಿತಿಯು ಸಾರ್ವಜನಿಕರು ಮತ್ತು ಮಾಧ್ಯಮಗಳ ಗಮನವನ್ನು ಈ ಪ್ರತಿಭಟನೆಯತ್ತ ದೊಡ್ಡ ಮಟ್ಟದಲ್ಲಿ ಸೆಳೆಯುವಂತೆ ಮಾಡಿದೆ.
"ನನ್ನ ಧ್ವನಿ ವಿದ್ಯಾರ್ಥಿಗಳ ಪರ" ಎಂದ ಪ್ರಕಾಶ್ ರಾಜ್
ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನವೇ ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿದ್ದ ನಟ ಪ್ರಕಾಶ್ ರಾಜ್, ಈ ಹೋರಾಟಕ್ಕೆ ತಮಗಿರುವ ಬದ್ಧತೆಯನ್ನು ವ್ಯಕ್ತಪಡಿಸಿದ್ದರು. "ಈ ಅತ್ಯಂತ ಪ್ರಮುಖವಾದ ಹಾಗೂ ಶಾಂತಿಯುತವಾದ ಪ್ರತಿಭಟನೆಗೆ ಬೆಂಬಲ ನೀಡಲು ನಾನು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದೇನೆ. ಶಿಕ್ಷಣ ಕ್ಷೇತ್ರದ ವೈಫಲ್ಯಗಳ ಬಗ್ಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಮತ್ತು ನಮ್ಮ ಧ್ವನಿಯನ್ನು ಎತ್ತಲು ದಯವಿಟ್ಟು ನೀವೆಲ್ಲರೂ ನಮ್ಮೊಂದಿಗೆ ಕೈಜೋಡಿಸಿ" ಎಂದು ಬರೆದುಕೊಂಡು ತಮ್ಮ ಪ್ರಸಿದ್ಧ ಹ್ಯಾಶ್ಟ್ಯಾಗ್ #justasking (ಕೇವಲ ಪ್ರಶ್ನಿಸುತ್ತಿದ್ದೇನೆ) ಮೂಲಕ ಸಾರ್ವಜನಿಕರಿಗೆ ಕರೆ ನೀಡಿದ್ದರು. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ವ್ಯವಸ್ಥೆಯ ವಿರುದ್ಧ ಪ್ರಕಾಶ್ ರಾಜ್ ಅವರು ಪ್ರವಾಸ ಕೈಗೊಂಡು ನೇರವಾಗಿ ಪ್ರತಿಭಟನಾ ಕಣಕ್ಕೆ ಧುಮುಕಿರುವುದು ಈಗ ಹೋರಾಟದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ.
Namma Bengaluru defying the rain!
— Abhijeet Dipke (@abhijeet_dipke) June 14, 2026
Dharmendra Pradhan must resign! pic.twitter.com/kI4qksHs5J












Click it and Unblock the Notifications