ಪ್ರವೀಣ್ ಹತ್ಯೆ: ಸರಕಾರಕ್ಕೆ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ
ಬೆಂಗಳೂರು, ಜುಲೈ, 28: ಪ್ರವೀಣ್ ಹತ್ಯೆಗೆ ಸಂಬಂಧಿಸಿದತೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ ಮುಕ್ತ ಹಾಗೂ ಪಾರದರ್ಶಕವಾಗಿ ತನಿಖೆ ಆಗಬೇಕು. ಇದುವರೆಗೂ ಆಗಿರುವ ಕೋಮುಗಲಭೆ ಹಾಗೂ ಕೋಮು ಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ಹಾಗೂ ಸಮಾಜದಲ್ಲಿ ಕೋಮು ವಿಷಬೀಜ ಬಿತ್ತುತ್ತಿರುವ ಎಲ್ಲಾ ಸಮುದಾಯಗಳ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸರ್ಕಾರಕ್ಕೆ 3 ಆಗ್ರಹಿಸಿದರು.
ಬಿಜೆಪಿ ಸರ್ಕಾರ ತನ್ನ ಒಂದು ವರ್ಷದ ಸಾಧನೆಯ ಜನೋತ್ಸವ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ. ಪ್ರವೀಣ್ ಅವರ ಸಾವಿನಿಂದ ತೀವ್ರವಾಗಿ ಮನನೊಂದು ಈ ಕಾರ್ಯಕ್ರಮ ಮಾಡಲು ಮನಸ್ಸು ಒಪ್ಪುತ್ತಿಲ್ಲ ಎಂಬ ಕಾರಣ ಕೊಟ್ಟು ರದ್ದು ಮಾಡಲಾಗಿದೆ. ಪ್ರವೀಣ್ ಅವರ ಹತ್ಯೆಯಾಗಿದ್ದು ಜುಲೈ 23ರಂದು, ಮುಖ್ಯಮಂತ್ರಿಗಳ ಮನಸ್ಸು ಕರಗಿದ್ದು ಜುಲೈ 28ರಂದು ಬೆಳಗಿನ ಜಾವ 12:30ಕ್ಕೆ. ಜನರು ಆಕ್ರೋಶವನ್ನು ಹೊರಹಾಕುತ್ತಿದ್ದಂತೆ ಜನೋತ್ಸವ ಕಾರ್ಯಕ್ರಮ ರದ್ದಾಗಿದೆ. ಅವರಿಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದಿದ್ದರೆ, ಗುಪ್ತಚರ ಇಲಾಖೆ ಮಾಹಿತಿ ಪಡೆದು 27ರಂದು ಕಾರ್ಯಕ್ರಮವನ್ನು ರದ್ದು ಮಾಡಬಹುದಿತ್ತು.
ಸಚಿವರಾದ ಸುನಿಲ್ ಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕಾರ್ಯಕರ್ತರು, ಸಾರ್ವಜನಿಕರು ದಿಗ್ಬಂಧನ ಹಾಕಿದಾಗ ಸರ್ಕಾರಕ್ಕೆ ಜ್ಞಾನೋದಯವಾಗಿದೆ. ಬಿಜೆಪಿ ಯುವ ಮೋರ್ಚಾ ಹಾಗೂ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ನೀಡಲು ಮುಂದಾದಾಗ ಅವರಿಗೆ ಮನವರಿಕೆ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ಗೃಹ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ. ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದಾದರೆ ಬಿಜೆಪಿ ಸರ್ಕಾರ ಇರಬೇಕೇ ಎಂದು ಜನ ಆಕ್ರೋಶದಿಂದ ಮಾತನಾಡಿದಾಗ ಅವರು ಎಚ್ಚೆತ್ತುಕೊಂಡಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಕಾನೂನು ವ್ಯವಸ್ಥೆ
ಸರ್ಕಾರ ಅನುಕಂಪ ಹೆಸರಲ್ಲಿ ಯಾರ ಮೇಲೆ ಗೂಬೆಕೂರಿಸಲು ಪ್ರಯತ್ನಿಸುತ್ತಿದೆ? ಪ್ರವೀಣ್ ಅವರ ಪತ್ನಿಯೇ ಈ ಸರ್ಕಾರದಿಂದ ಯಾರಿಗೂ ನ್ಯಾಯ ಸಿಗುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಇನ್ನಾದರೂ ತನ್ನ ವೈಫಲ್ಯವನ್ನು ಒಪ್ಪಿಕೊಳ್ಳಬೇಕು. ಈ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು

ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಗೃಹ ಸಚಿವರೇ ತಮ್ಮ ಇಲಾಖೆಗೆ ಮರ್ಯಾದೆ ನೀಡದಿದ್ದಾಗ ಬೇರೆಯವರು ಹೇಗೆ ಮಾರ್ಯಾದೆ ನೀಡಲು ಸಾಧ್ಯ? ಗೃಹ ಸಚಿವಾಲಯ ಅತ್ಯಂತ ಭ್ರಷ್ಟ ಇಲಾಖೆ ಎಂದು ಅವರೇ ಹೇಳಿದರು. ಪೊಲೀಸರು ಎಂಜಲು ಕಾಸು ತಿಂದು ನಾಯಿತರ ಬಿದ್ದಿರುತ್ತಾರೆ ಎಂದು ಗೃಹ ಸಚಿವರು ಹೇಳಿಕೆ ನೀಡಿದ್ದರು. ಬೆಂಗಳೂರು ಕಮಿಷನರ್ ಸುಳ್ಳು ಹೇಳುತ್ತಾರೆಂದು ಶಾಸಕರು ಟೀಕೆ ಮಾಡಿದಾಗ ಗೃಹ ಸಚಿವರ ಆರಗ ಜ್ಞಾನೇಂದ್ರ ಸುಮ್ಮನೆ ಇದ್ದರು. ಸರ್ಕಾರದ ದುರಾಡಳಿತ ಬಗ್ಗೆ ಟೀಕೆ ಮಾಡಿದರೆ ಕಾಂಗ್ರೆಸ್ ನವರೇ ರೇಪ್ ಮಾಡುತ್ತಿದ್ದಾರೆ ಎಂಬ ಬೇಜವಾಬ್ದಾರಿ ಹೇಳಿಕೆ ನೀಡುತ್ತಾರೆ. ಇದೇ ಕಾರಣಕ್ಕೆ ಬಿಜೆಪಿ ಶಾಸಕರಾದ ಯತ್ನಾಳ್ ಅವರು ಕರ್ನಾಟಕಕ್ಕೆ ಬಲಿಷ್ಠವಾದ ಗೃಹ ಸಚಿವರು ಬೇಕು ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸುರಿಮಳೆ
ಆಳಂದದಲ್ಲಿ ಕೋಮುಗಲಭೆ ಆಗುವ ಸಾಧ್ಯತೆ ಇತ್ತು. ಇದೇ ಮುಖ್ಯಮಂತ್ರಿ, ಗೃಹ ಸಚಿವರು ಸೆಕ್ಷನ್ 144 ಜಾರಿ ಮಾಡಿದ್ದರು. ಆದರೆ ಬಿಜೆಪಿಯ ಸಂಸದರಾದ ಉಮೇಶ್ ಜಾಧವ್ ಅವರು ಇದನ್ನು ಉಲ್ಲಂಘನೆ ಮಾಡಿದ್ದರು. ಇವರಿಗೆ ಸೆಕ್ಷನ್ 144 ಉಲ್ಲಂಘನೆ ಮಾಡಲು ಅವಕಾಶ ಕೊಟ್ಟವರು ಯಾರು? ನಿಮ್ಮ ಆದೇಶಕ್ಕೆ ನಿಮ್ಮದೇ ನಾಯಕರು ಕಿಮ್ಮತ್ತು ನೀಡುತ್ತಿಲ್ಲ. ಶಿವಮೊಗ್ಗ ಬಿಜೆಪಿಯ ಕೇಂದ್ರ ಸ್ಥಾನವಾದರೂ ಹರ್ಷ ಕೊಲೆ ಪ್ರಕರಣದಲ್ಲಿ ಸರ್ಕಾರ ಸೆಕ್ಷನ್ 144 ಜಾರಿ ಮಾಡಿತ್ತು. ಅದನ್ನು ಉಲ್ಲಂಘನೆ ಮಾಡಿದ್ದು, ಸಚಿವರಾಗಿದ್ದ ಈಶ್ವರಪ್ಪ ಹಾಗೂ ಸಂಸದರಾಗಿದ್ದ ರಾಘವೇಂದ್ರ ಅವರು. ಅವರೇ ಪಕ್ಷದ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಎಂದರೆ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಎಷ್ಟು ಬೆಲೆ ನೀಡುತ್ತಿದ್ದಾರೆ ಎಂದು ತಿಳಿಯುತ್ತದೆ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
ಈಗಲೂ ಕೂಡ ದಕ್ಷಿಣ ಕನ್ನಡದಲ್ಲಿ ಸೆಕ್ಷನ್ 144 ಜಾರಿಯಾಗಿದ್ದು, ಪ್ರವೀಣ್ ಹತ್ಯೆಗೆ ನ್ಯಾಯ ಕೊಡಿಸಲು ಬಿಜೆಪಿ ನಾಯಕರು ಯಾಕೆ ಹೋಗುತ್ತಿಲ್ಲ? ಹರ್ಷ ಹತ್ಯೆಗೆ ನ್ಯಾಯ ಕೊಡಿಸಲು ಇರುವ ಕಾಳಜಿ ಪ್ರವೀಣ್ ಹತ್ಯೆಗೆ ನ್ಯಾಯ ಕೊಡಿಸಲು ಯಾಕೆ ಮುಂದೆ ಬರುತ್ತಿಲ್ಲ? ಅಲ್ಲಿ ಒಂದು ನ್ಯಾಯ, ಇಲ್ಲಿ ಒಂದು ನ್ಯಾಯ ಯಾಕೆ? ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದರು.

ತೇಜಸ್ವಿ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಕೇವಲ ಹೆಸರಿಗಷ್ಟೇ ತೇಜಸ್ವಿ. ಅವರು ಅವಿವೇಕದ ಪರಮಾವಧಿ. ಅವರು ನಿನ್ನೆ ನೀಡಿದ ಸಂದರ್ಶನದಲ್ಲಿ, ಹಿಂದೂ ಕಾರ್ಯಕರ್ತರ ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ ಇದು ನಿಲ್ಲುವುದು ಯಾವಾಗ? ಎಂದು ಪ್ರಶ್ನೆ ಕೇಳಿದ್ದಾರೆ. 8 ವರ್ಷ ಕೇಂದ್ರದಲ್ಲಿ ಮೋದಿ ಆಡಳಿತ ಹಾಗೂ ರಾಜ್ಯದಲ್ಲಿ 3 ವರ್ಷ ನಿಮ್ಮದೇ ಆಡಳಿತ ನಡೆದಿದೆ. ಆದರೂ ಕೂಡ ನೀವೇ ಹಿಂದೂಗಳ ಹತ್ಯೆ ಕಡಿಮೆಯಾಗಿಲ್ಲ ಎಂದು ಹೇಳುತ್ತಿದ್ದೀರಿ. ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವೇ ಎಂದು ತೇಜಸ್ವಿ ಅವರು ಅಮಾನವೀಯ ಹೇಳಿಕೆ ನೀಡಿದ್ದರು. ಎಲ್ಲರಿಗೂ ರಕ್ಷಣೆ ನೀಡಲು ಸಾಧ್ಯವಿಲ್ಲ ಆದರೆ ಜನಸಾಮಾನ್ಯರಲ್ಲಿ ಖಾಕಿ ಬಗ್ಗೆ ಗೌರವ ಇರುತ್ತದೆ. ಆದರೆ ನಿಮ್ಮ ಸರ್ಕಾರದಲ್ಲಿ ಖಾಕಿಗೆ ಗೌರವ ನೀಡುತ್ತಿಲ್ಲ. ಕಳ್ಳರನ್ನು ನೀವೇ ಸಾಕುತ್ತಿದ್ದೀರಿ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications