Accident: ಟಿಪ್ಪರ್ ಡಿಕ್ಕಿ, ಗರ್ಭಿಣಿ ಸಾವು- ಹೊಟ್ಟೆಯಿಂದ ಹೊರಬಂದ ಮಗು!
ಬೆಂಗಳೂರು ಆಗಸ್ಟ್ 6: ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಟಿಪ್ಪರ್ ಲಾರಿ ಡಿಕ್ಕಿಯಾಗಿ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದು ಹೊಟ್ಟೆಯಿಂದ ಮಗು ಹೊರಬಂದಿದೆ.
ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ 30 ವರ್ಷದ ಸಿಂಚನ ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ.
ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಎಡೇಹಳ್ಳಿ ಗೇಟ್ ಬಳಿ ಸಿಂಚನಾ ಹಾಗೂ ಮಂಜುನಾಥ್ ದಂಪತಿ ಬೈಕ್ನಲ್ಲಿ ತೆರಳುತ್ತಿದ್ದರು. ಲಾರಿ ಮತ್ತು ಬಸ್ ಚಾಲಕ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಗ್ವಾದ ವೇಳೆ, ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದ್ದ ಮಂಜುನಾಥ್ ಬೈಕ್ಗೆ ಲಾರಿ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ಮಂಜುನಾಥ್ ಪತ್ನಿ ಸಿಂಚನ ಸಾವನ್ನಪ್ಪಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ.
ಸಿಂಚನಾಗೆ ಬರುವ ಆಗಸ್ಟ್ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸೂಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್ನಲ್ಲಿ ದಾಬಸ್ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಮರಳಿ ತಮ್ಮೂರು ತೋಟನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.
ತಕ್ಷಣ ಸಿಂಚನಾ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಎಮಟು ತಿಂಗಳ ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ವಿಲ ವಿಲ ಒದ್ದಾಡಿ ಪ್ರಾಣಬಿಟ್ಟಿದೆ. ಈ ಘಟನೆಯಿಂದ ಮನುಕುಲವೇ ಕಣ್ಣೀರು ಹಾಕಿದೆ.













Click it and Unblock the Notifications