ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ?
Recommended Video
ಬೆಂಗಳೂರು, ಜನವರಿ 29 : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಂಡಿದ್ದಾರೆ?. ಈ ಬಾರಿಯಾದರೂ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು ಎಂದು ಪಕ್ಷ ತಂತ್ರ ರೂಪಿಸುತ್ತಿದೆ.
ಎಐಸಿಸಿ ಕಾರ್ಯದರ್ಶಿ ಹಾಗೂ ಬೆಂಗಳೂರು ವಿಭಾಗದ ಉಸ್ತುವಾರಿ ಯಶೋಮತಿ ಠಾಕೂರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದೆ. ಮಾಜಿ ಶಾಸಕ ಪ್ರಿಯಕೃಷ್ಣ ಅವರು ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸ್ಥೂಲ ಪರಿಚಯ
2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಪ್ರಿಯಕೃಷ್ಣ ಅವರು ಲೋಕಸಭೆಗೆ ಸ್ಪರ್ಧೆ ಮಾಡುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಸಾಧ್ಯತೆ ಇದೆ. ಆದರೆ, ಪ್ರಿಯಕೃಷ್ಣ ಸ್ಪರ್ಧೆಗೆ ಇನ್ನೂ ತಂದೆ ಎಂ.ಕೃಷ್ಣಪ್ಪ ಒಪ್ಪಿಗೆ ಕೊಟ್ಟಿಲ್ಲ.
ಅನಂತ್ ಕುಮಾರ್ ಇಲ್ಲದ ಬೆಂಗಳೂರು ದಕ್ಷಿಣಕ್ಕೆ ಉತ್ತರಾಧಿಕಾರಿ ಯಾರು?
ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಲೋಕಸಭಾ ಕ್ಷೇತ್ರ ಬೆಂಗಳೂರು ದಕ್ಷಿಣ. ನಗರದ ಪ್ರಖ್ಯಾತ ಬಡಾವಣೆಗಳನ್ನು ತನ್ನ ಒಡಲಲ್ಲಿ ಹೊಂದಿದೆ. 1994ರಿಂದ 2014ರ ತನಕ ಬಿಜೆಪಿ ಅಭ್ಯರ್ಥಿಗಳು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.
ಬೆಂಗಳೂರು ದಕ್ಷಿಣಕ್ಕೆ ತೇಜಸ್ವಿನಿ ಅನಂತ್ ಕುಮಾರ್ ಬಿಜೆಪಿ ಅಭ್ಯರ್ಥಿ?!
ಪ್ರಿಯಾಕೃಷ್ಣ ಹೆಸರು ಅಂತಿಮ?
ಎಐಸಿಸಿ ಕಾರ್ಯದರ್ಶಿ ಹಾಗೂ ಬೆಂಗಳೂರು ವಿಭಾಗದ ಉಸ್ತುವಾರಿ ಯಶೋಮತಿ ಠಾಕೂರ್ ಅವರು ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ. ಗ್ರಾಮಾಂತರ ಕ್ಷೇತ್ರಕ್ಕೆ ಹಾಲಿ ಸಂಸದ ಡಿ.ಕೆ.ಸುರೇಶ್ ಮತ್ತು ದಕ್ಷಿಣ ಕ್ಷೇತ್ರಕ್ಕೆ ಪ್ರಿಯಕೃಷ್ಣ ಅಭ್ಯರ್ಥಿಗಳು ಎಂಬುದು ಪಕ್ಷದ ಉನ್ನತ ಮೂಲಗಳ ಮಾಹಿತಿ.
ವಿಧಾನಸಭೆ ಚುನಾವಣೆಯಲ್ಲಿ ಸೋಲು
2013ರ ಚುನಾವಣೆಯಲ್ಲಿ ಗೋವಿಂದರಾಜನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಪ್ರಿಯಕೃಷ್ಣ ಅವರು 2018ರ ಚುನಾವಣೆಯಲ್ಲಿ ವಿ.ಸೋಮಣ್ಣ ವಿರುದ್ಧ ಸೋಲು ಅನುಭವಿಸಿದ್ದಾರೆ. 67,760 ಮತಗಳನ್ನು ಪ್ರಿಯಕೃಷ್ಣ ಪಡೆದರೆ. ಬಿಜೆಪಿಯ ವಿ.ಸೋಮಣ್ಣ 79,135 ಮತಗಳನ್ನು ಪಡೆದು ಜಯಗಳಿಸಿದರು.
ಬೆಂಗಳೂರು ದಕ್ಷಿಣದ ವ್ಯಾಪ್ತಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಗೋವಿಂದರಾಜನಗರ ಕ್ಷೇತ್ರವೂ ಒಳಪಡುತ್ತದೆ. ಮತ್ತೊಂದು ಕಡೆ ವಿಜಯನಗರ ಕ್ಷೇತ್ರದಲ್ಲಿ ಪ್ರಿಯಕೃಷ್ಣ ತಂದೆ ಎಂ.ಕೃಷ್ಣಪ್ಪ ಶಾಸಕರು. ಇಬ್ಬರು ಸಾಕಷ್ಟು ಪ್ರಭಾವವನ್ನು ಹೊಂದಿದ್ದಾರೆ. ಆದ್ದರಿಂದ, ಪ್ರಿಯಕೃಷ್ಣ ಅವರನ್ನು ಕಣಕ್ಕಿಳಿಸಿ ಕ್ಷೇತ್ರವನ್ನು ವಶಕ್ಕೆ ಪಡೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ.
ನಂದನ್ ನಿಲೇಕಣಿ ಸ್ಪರ್ಧೆ
2014ರ ಚುನಾವಣೆಯಲ್ಲಿ ನಂದನ್ ನಿಲೇಕಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಿಜೆಪಿಯ ಪ್ರಭಾವಿ ನಾಯಕ ದಿ.ಅನಂತ್ ಕುಮಾರ್ ವಿರುದ್ಧ ಕಣಕ್ಕಿಳಿದಿದ್ದ ಅವರು 405241 ಮತಗಳನ್ನು ಪಡೆದು ಸೋಲುಕಂಡಿದ್ದರು. ಆದರೆ, ಈ ಬಾರಿ ಅವರು ಕಣಕ್ಕಿಳಿಯುತ್ತಿಲ್ಲ. ಆದ್ದರಿಂದ, ಕಾಂಗ್ರೆಸ್ ಹೊಸ ಅಭ್ಯರ್ಥಿ ಕಣಕ್ಕಿಳಿಸುತ್ತಿದೆ.
ಎಂ.ಕೃಷ್ಣಪ್ಪ ಒಪ್ಪಿಗೆ ಕೊಟ್ಟಿಲ್ಲ
ಪ್ರಿಯಕೃಷ್ಣ ಸ್ಪರ್ಧೆಗೆ ಎಂ.ಕೃಷ್ಣಪ್ಪ ಅವರು ಇನ್ನೂ ಒಪ್ಪಿಗೆ ಕೊಟ್ಟಿಲ್ಲ. ಬಿಜೆಪಿ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅಥವ ಬೇರೆ ಪ್ರಭಾವಿ ನಾಯಕರನ್ನು ಕಣಕ್ಕಿಳಿಸಲಿದೆ. ಆದ್ದರಿಂದ, ಪ್ರಿಯಕೃಷ್ಣ ಸ್ಪರ್ಧೆ ಬೇಡ ಎಂದು ಎಂ.ಕೃಷ್ಣಪ್ಪ ಅವರು ಅಭಿಪ್ರಾಯಪಟ್ಟಿದ್ದಾರೆ.