ಪ್ರಿಯಾಂಕ್ ಖರ್ಗೆಗೆ ಕಲ್ಯಾಣ ರಾಜ್ಯದ ಅಭಿವೃದ್ಧಿ ಬೇಕಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು, ಸೆಪ್ಟೆಂಬರ್ 18: ''ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5,000 ಕೋಟಿ ರೂ. ಅನುದಾನ ಘೋಷಿಸಿದ್ದನ್ನು ಅವರು ಸ್ವಾಗತಿಸಬೇಕು. ಬದಲಾಗಿ ಅವರು ವಿರೋಧಿಸುತ್ತಿರುವುದು ಏಕೆ? ಎಂದು ಅರ್ಥವಾಗುತ್ತಿಲ್ಲ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶನಿವಾರದಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಒದಗಿಸುವುದಾಗಿ ತಿಳಿಸಿದ್ದೇನೆ. ಕಳೆದ ವರ್ಷ 3,000 ಕೋಟಿ ರೂ. ಅನುದಾನ ಘೋಷಿಸಿದ್ದೆ. ಅದನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಬೇಕಾಗಿತ್ತು. ಹಾಗೇ ಮಾಡದೇ ಅವರು ವಿರೋಧಿಸಿರುವುದು ನೋಡಿದರೆ, ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಸದಾ ಹಿಂದುಳಿದಿರಲಿ. ಅಲ್ಲಿ ಅಭಿವೃದ್ಧಿ ಬೇಡ ಎಂದು ಅವರು ಇಚ್ಛಿಸಿದ್ದಾರೆಯೇ? ಬೊಮ್ಮಾಯಿ ಪ್ರಶ್ನಿಸಿದರು.
ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಮುಂದಾದಾಗ ಎಲ್ಲರೂ ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಇದರಲ್ಲಿ ರಾಜಕಾರಣದ ಮಾತಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಲ್ಲದಕ್ಕೂ ರಾಜಕಾರಣ ಸಲ್ಲದು
ಬಳ್ಳಾರಿಯ ವಿಮ್ಸ್ ಘಟನೆಗೆ ಸಚಿವ ಡಾ. ಸುಧಾಕರ್ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕರ್ನಾಟಕ ಖಾಸಗಿ ವೈದ್ಯರ ಮಸೂದೆಯನ್ನು ಮಂಡಿಸಿತ್ತು. ಇದನ್ನು ವಿರೋಧಿಸಿ, ರಾಜ್ಯದಾದ್ಯಂತ ಖಾಸಗಿ ವೈದ್ಯರು 5 ದಿನಗಳ ಕಾಲ ಮುಷ್ಕರ ನಡೆಸಿದ್ದರಿಂದ ಸುಮಾರು 80 ಜನರು ಮೃತಪಟ್ಟರು. ಅಂದು ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ದಾರಾ? ಎಂದು ಮುಖ್ಯಮಂತ್ರಿ ತಿರುಗೇಟು ನೀಡಿದರು. ಕಾಂಗ್ರೆಸ್ ಎಲ್ಲದರಲ್ಲೂ ರಾಜಕಾರಣ ಮಾಡುತ್ತದೆ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ವ್ಯವಸ್ಥಿತ ಷಡ್ಯಂತ್ರ
ತೆಲಂಗಾಣದಲ್ಲಿಯೂ ಶೇ.40 ಸರ್ಕಾರ ಎಂಬ ಫ್ಲೆಕ್ಸ್ ಅಳವಡಿಸಿರುವ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಇದೊಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ?. ಇದನ್ನು ಖಾಸಗಿಯವರು ಮಾಡಿದ್ದಾರೋ ಅಥವಾ ಸರ್ಕಾರ ಹಾಕಿರುವುದೋ ನನಗೆ ಗೊತ್ತಿಲ್ಲ. ಇಂತಹ ಬೆಳವಣಿಗೆಗಳು ಉಭಯ ರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.












Click it and Unblock the Notifications