ಸರ್ಕಾರಿ ಶಾಲಾ ಕೊಠಡಿ ನಿರ್ಮಾಣ: 'ವಿವೇಕ' ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು, ನವೆಂಬರ್ 15: ಕರ್ನಾಟಕದಲ್ಲಿನ ರಾಜ್ಯ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಒಟ್ಟು ಸುಮಾರು 7,601 ಕೊಠಡಿಗಳ ನಿರ್ಮಿಸಲು ಸರ್ಕಾರ ಉದ್ದೇಶಿಸಿದ್ದು, ಕೊಠಡಿ ನಿರ್ಮಾಣದ 'ವಿವೇಕ' ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಚಾಲನೆ ನೀಡಿದರು.
ಸೋಮವಾರ ಮಲ್ಲೇಶ್ವರದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತ್ತೀಕೆರೆ ಸರ್ಕಾರಿ ಮಾದರಿ ಶಾಲೆಯಲ್ಲಿ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವರು, ಮತ್ತೀಕೆರೆಯ ಈ ಶಾಲೆಗೆ ಹೆಚ್ಚುವರಿಯಾಗಿ ಇನ್ನೂ ನಾಲ್ಕು ಕೊಠಡಿಗಳನ್ನು ನಿರ್ಮಿಸಿಕೊಡಲಾಗುವುದು ಎಂದರು.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳನ್ನೂ ಮೀರಿಸುವಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಅದರಲ್ಲೂ ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಚಾಲನೆ ಪಡೆದ 'ಮಲ್ಲೇಶ್ವರಂ ಶಾಲಾ ಮಾದರಿ'ಯು ಇಡೀ ರಾಜ್ಯದಲ್ಲಿಯೇ ಗಮನ ಸೆಳೆಯುವಂತಿದೆ. ಅದೇ ರೀತಿಯಲ್ಲಿ ಇನ್ನಿತರ ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ಜೊತೆಗೆ ಮೂಲಸೌಕರ್ಯಗಳು ಇನ್ನಷ್ಟು ಅಭಿವೃದ್ಧಿಗೊಳ್ಳಲಿವೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಿಗೆ ಬರುವ ಮಕ್ಕಳಿಗೆ ಕಲಿಕೆ ಚೆನ್ನಾಗಿರಲು ಹಾಗೂ ಡಿಜಿಟಲ್ ಶಿಕ್ಷಣಕ್ಕೆ ಪೂರಕವಾದ ಲ್ಯಾಪ್ಟಾಪ್, ಟ್ಯಾಬ್ ಮುಂತಾದ ಪರಿಕರಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಶಾಲೆಯ ಮಕ್ಕಳಲ್ಲೂ ದೊಡ್ಡ ದೊಡ್ಡ ಕನಸುಗಳು ಇರುತ್ತವೆ. ಅವೆಲ್ಲವುಗಳನ್ನು ನನಸು ಮಾಡಿಕೊಳ್ಳುವಂತಹ ರಚನಾತ್ಮಕ ವಾತಾವರಣ ಇಲ್ಲಿದೆ ಎಂದು ತಿಳಿಸಿದರು.
75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದಲ್ಲಿ 750 ಸರಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲು ಸರ್ಕಾರ ಈಗಾಗಲೇ ನಿರ್ಧರಿಸಿ ಕಾರ್ಯೋನ್ಮುಖವಾಗಿದೆ. ಇದರ ಜತೆಗೆ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮತ್ತು ದುರಸ್ತಿಗೆ 250 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ ಎಂದು ಅಶ್ವಥ್ ವಿವರಿಸಿದರು.
8,000 ಶಾಲಾ ಕೊಠಡಿಗಳ ನಿರ್ಮಾಣ ಇದೇ ಮೊದಲು
ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದಂತೆ ಮುಂದಿನ ಒಂದು ವರ್ಷದಲ್ಲಿ ಒಟ್ಟು ಸುಮಾರು 8,000 ಶಾಲಾ ಕೊಠಡಿಗಳ ನಿರ್ಮಾಣಗೊಳ್ಳಲಿವೆ. ಇದರೊಂದಿಗೆ 4,000 ಹೊಸ ಅಂಗನವಾಡಿಗಳನ್ನು ನಿರ್ಮಿಸಲಿದ್ದು, ಈ ಯೋಜನೆಗೆ ಅನುದಾನ ಮೀಸಲಿಡಲಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು.
ಒಂದೇ ವರ್ಷದ ಅವಧಿಯಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಶಾಲಾ ಕೊಠಡಿಗಳ ನಿರ್ಮಾಣದ ಯೋಜನೆ ಯಾವ ಸರ್ಕಾರದ ಅವಧಿಯಲ್ಲೂ ಆಗಿರಲಿಲ್ಲ, ಇದೇ ಮೊದಲು ಎನ್ನಲಾಗುತ್ತಿದೆ. ಜೊತೆಗೆ ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಕಟ್ಟಡ ಸೇರಿದಂತೆ ಅಗತ್ಯ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮುಂದಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಲ್ಲೇಶ್ವರ ಬಿಇಒ ಉಮಾದೇವಿ,ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಅಧಿಕಾರಿಗಳು, ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತಿರರು ಉಪಸ್ಥಿತರಿದ್ದರು.