ಕೊರೊನಾ ಹೆಚ್ಚಳ; ಬೆಂಗಳೂರಿನಲ್ಲಿ ಏ.20ರವರೆಗೂ ನಿಷೇಧಾಜ್ಞೆ ಹೇರಿ ಕಮಲ್ ಪಂತ್ ಆದೇಶ
ಬೆಂಗಳೂರು, ಏಪ್ರಿಲ್ 7: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ನಗರದಾದ್ಯಂತ ಏಪ್ರಿಲ್ 20ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ 4,266 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು 4,55,025 ಪ್ರಕರಣಗಳು ದಾಖಲಾಗಿದ್ದು, 32,605 ಸಕ್ರಿಯ ಪ್ರಕರಣಗಳಿವೆ. 26 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಈ ಆದೇಶ ಹೊರಡಿಸಿರುವುದಾಗಿ ತಿಳಿಸಿದ್ದಾರೆ. ಯಾವ್ಯಾವುದರ ಮೇಲೆ ನಿಷೇಧವಿದೆ? ಮುಂದೆ ಓದಿ...

ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ
ನಿಷೇಧಾಜ್ಞೆ ಹೊರಡಿಸಿದ್ದು, ಈ ಸಮಯದಲ್ಲಿ ನಗರದಲ್ಲಿ ಯಾವುದೇ ಉದ್ದೇಶಕ್ಕೆ ಯಾವುದೇ ಸಂಘಟನೆಗಳು ಪ್ರತಿಭಟನೆ, ಧರಣಿ, ಮುಷ್ಕರ ನಡೆಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಆದರೆ ಇಂದಿನಿಂದಲೇ ಸಾರಿಗೆ ಮುಷ್ಕರ ಆರಂಭವಾಗಿದೆ.

ಕಾರ್ಯಕ್ರಮಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ
ಧಾರ್ಮಿಕ ಸ್ಥಳಗಳನ್ನು ಮುಚ್ಚುವುದಿಲ್ಲ. ಆದರೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕವಾಗಿ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಯಾವುದೇ ಕಾರ್ಯಕ್ರಮಗಳಲ್ಲಿ ಹೆಚ್ಚು ಜನರು ಸೇರುವಂತಿಲ್ಲ. ಈಜುಕೊಳ ಹಾಗೂ ಜಿಮ್ಗಳಲ್ಲಿ ಶೇ 50 ಮಂದಿಯೊಂದಿಗೆ ಕಾರ್ಯನಿರ್ವಹಿಸಬೇಕು. ಪಬ್, ಬಾರ್, ಕ್ಲಬ್ ಹಾಗೂ ರೆಸ್ಟೊರೆಂಟ್ಗಳಲ್ಲಿ ಶೇ 50ರಷ್ಟು ಮಂದಿಗೆ ಆಸನ ವ್ಯವಸ್ಥೆ ಇರಬೇಕು ಎಂದು ಸೂಚಿಸಲಾಗಿದೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ
ಮಾಲ್, ಮಾರುಕಟ್ಟೆ, ಕಿರಾಣಿ ಅಂಗಡಿಗಳು ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಥರ್ಮಲ್ ಸ್ಕೃಈನಿಂಗ್, ಸ್ಯಾನಿಟೈಸರ್ ಬಳಕೆ ಸೇರಿ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ನಿಯಮಗಳನ್ನು ಉಲ್ಲಂಘಿಸಿದರೆ ಅಂಥ ಮಳಿಗೆಗಳನ್ನು ಮುಚ್ಚಲಾಗುವುದು ಎಂದು ಎಚ್ಚರಿಸಿದ್ದಾರೆ.

ಎಚ್ಚರಿಕೆ ನೀಡಿದ ಕಮಲ್ ಪಂತ್
ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶದಲ್ಲಿ ಎಚ್ಚರಿಸಿದ್ದಾರೆ.