ಪ್ರಾಪರ್ಟಿ ಟ್ಯಾಕ್ಸ್ & ಇ - ಖಾತಾ: ಮಹತ್ವದ ಸೂಚನೆ ನೀಡಿದ ಜಿಬಿಎ ಕಮೀಷನರ್ ಮಹೇಶ್ವರ್ ರಾವ್
E-Khata Updates: ಬೆಂಗಳೂರಿನಲ್ಲಿ ಪ್ರಾಪರ್ಟಿ ಟ್ಯಾಕ್ಸ್ ಹಾಗೂ ಇ ಖಾತಾಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮಹತ್ವದ ಅಪ್ಡೇಟ್ಸ್ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇ-ಖಾತಾಗೆ ಸ್ವೀಕೃತವಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಇ-ಖಾತಾ ವಿತರಣೆ, ಬಿ-ಖಾತಾ ದಿಂದ ಎ-ಖಾತಾ ಪರಿವರ್ತನೆ ಹಾಗೂ ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಇಂದು ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇ-ಖಾತಾ ದೂರುಗಳಿಗಾಗಿ ಪ್ರತ್ಯೇಕ ದೂರವಾಣಿ ಸಂಖ್ಯೆಯಾದ 9480683035 ಇದೆ. ಅದಕ್ಕೆ ಬರುವ ದೂರುಗಳನ್ನು ಕಾಲಮಿತಿಯೊಳಗಾಗಿ ಇತ್ಯರ್ಥಪಡಿಸಲು ಸೂಚನೆ ನೀಡಿದ್ದಾರೆ.

ಇ-ಖಾತಾ ಸಹಾಯವಾಣಿ ಸಂಖ್ಯೆಗೆ ಬರುವ ದೂರುಗಳನ್ನು ಪ್ರತ್ಯೇಕವಾಗಿ ಮೇಲ್ವಿಚಾರಣೆ ಮಾಡಬೇಕು. ತಿರಸ್ಕೃತವಾಗಿರುವ ಇ-ಖಾತಾ ಅರ್ಜಿಗಳನ್ನು ಯಾವ ಕಾರಣಕ್ಕಾಗಿ ತಿರಸ್ಕರಿಸಲಾಗಿದೆ ಎಂಬುದನ್ನು ಪರಿಶೀಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದ್ದಾರೆ. ನಗರದಲ್ಲಿ ಹೊಸ ಇ-ಖಾತಾಗಾಗಿ ಬಂದಿರುವ ಅರ್ಜಿಗಳು ಹಾಗೂ ಬಿ-ಖಾತಾ ದಿಂದ ಎ-ಖಾತಾ ಪರಿವರ್ತನೆಗೆ ಬಂದಿರುವಂತಹ ಅರ್ಜಿಗಳನ್ನು ಕೂಡಲೆ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು. ಇದರಿಂದ ಪಾಲಿಕೆಗೆ ಆದಾಯ ಹೆಚ್ಚಾಗಲಿದೆ ಎಂದು ಸೂಚನೆ ಕೊಟ್ಟಿದ್ದಾರೆ.
ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು ಮಾತನಾಡಿ, ಇ-ಖಾತಾಗೆ ಸಂಬಂಧಿಸಿದಂತೆ ದೂರವಾಣಿ ಸಂಖ್ಯೆಗೆ ಪ್ರತಿನಿತ್ಯ ಸುಮಾರು 1000 ಕರೆಗಳು ಬರುತ್ತಿದ್ದು, ಅವುಗಳನ್ನು ಟ್ರ್ಯಾಕ್ ಮಾಡಿ ಇರುವ ಸಮಸ್ಯೆ ಬಗೆಹರಿಸಿ ಆದ್ಯತೆಮೇರೆಗೆ ವಿಲೇವಾರಿ ಮಾಡುವ ಕೆಲಸ ಮಾಡಲಾಗುತ್ತಿದೆ. ಸರಿಯಾದ ಕಾರಣಗಳಿಲ್ಲದೆ ಇ-ಖಾತಾ ಅರ್ಜಿಗಳನ್ನು ತಿರಸ್ಕರಿಸುವಂತಿಲ್ಲ. ಈ ಸಂಬಂಧ ಯಾವ ಕಾರಣಗಳಿಗಾಗಿ ತಿರಸ್ಕರಿಸಿದ್ದಾರೆ ಎಂಬುದನ್ನು ಪರಿಶೀಲಿಸಿ ಪಾಲಿಕೆವಾರು ಆ ಮಾಹಿತಿಯನ್ನು ನೀಡಲು ಕ್ರಮ ವಹಿಸಲಾಗುವುದು. ಅದರ ಅನುಸಾರ ಬಾಕಿಯಿರುವ ಇ-ಖಾತಾಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೆ ಸಹಕಾರಿಯಾಗಲಿದೆ ಎಂದಿದ್ದಾರೆ.
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಯಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರನ್ನು ಪತ್ತೆ ಮಾಡಿ ವಾಣಿಜ್ಯ ಸ್ವತ್ತುಗಳಿಗೆ ಸೀಲ್ ಮಾಡಿ ಬಾಕಿ ತೆರಿಗೆ ವಸೂಲಿ ಮಾಡಲಾಗುತ್ತಿದೆ. ಜೊತೆಗೆ ಪರಿಷ್ಕರಣೆ ಪ್ರಕರಣಗಳನ್ನು ಕೂಡಾ ಪರಿಶೀಲಿಸಿ ಆಸ್ತಿ ತೆರಿಗೆ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ಮಾತನಾಡಿ, ನಮ್ಮ ಪಾಲಿಕೆಯಲ್ಲಿ ಇ-ಖಾತಾಗಾಗಿ ಬಂದಂತಹ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಸರಿಯಾದ ಕಾರಣಗಳಿಲ್ಲದೆ ಅರ್ಜಿಗಳನ್ನು ತಿರಸ್ಕರಿಸಿದಂತಹ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿಮಾಡಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೇ ಇ ಖಾತಾಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆಯೂ ಇದೇ ಸಂದರ್ಭದಲ್ಲಿ ಸೂಚನೆ ನೀಡಲಾಗಿದೆ.
ಈ ವೇಳೆ ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್, ರಮೇಶ್ ಕೆ.ಎನ್, ಡಾ. ರಾಜೇಂದ್ರ ಕೆ.ವಿ, ಅಪರ ಆಯುಕ್ತರಾದ ದಲ್ಜಿತ್ ಕುಮಾರ್, ಕಂದಾಯ ವಿಭಾಗದ ಅಪರ ಆಯುಕ್ತರುಗಳು, ಜಂಟಿ ಆಯುಕ್ತರು ಸೇರಿದಂತೆ ಮತ್ತಿತರ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.












Click it and Unblock the Notifications