ಪೌರತ್ವ ಮಸೂದೆ ವಿರೋಧಿಸಿ ಬೆಂಗಳೂರಲ್ಲಿ ಪ್ರತಿಭಟನೆ
ಬೆಂಗಳೂರು, ಡಿಸೆಂಬರ್ 11: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ರಾಜಧಾನಿ ಬೆಂಗಳೂರಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಹಾಗೂ ಮುಸ್ಲಿಂ ಸಂಘಟನೆಗಳು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಅಲ್ಲದೇ ಬೆಂಗಳೂರು ನಗರದ ಪುರಭವನದ ಬಳಿ ಮುಸ್ಲಿಂ ಸಂಘಟನೆಗಳಿಂದಲೂ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಾಯಿತು. ವಿವಿಧ ಮುಸ್ಲಿಂ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಕೇಂದ್ರದಿಂದ ಸಂವಿಧಾನ ವಿರೋಧಿ ಕೆಲಸ
ಪೌರತ್ವ ಮಸೂದೆ ತಿದ್ದುಪಡಿ ಜಾರಿಗೆ ತರುವುದು ಬೇಡ, ಈ ಕಾಯ್ದೆಯನ್ನು ರದ್ದುಪಡಿಸಿ ಎಂದು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ದೇಶದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ, ಕೇಂದ್ರ ಸರ್ಕಾರ ಮುಸ್ಲಿಂರನ್ನು ಟಾರ್ಗೆಟ್ ಮಾಡುತ್ತಿದೆ. ಇದು ಸಂವಿಧಾನ ವಿರೋಧಿ ಕೆಲಸ ಎಂದು ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ "ಪೌರತ್ವ ಮಸೂದೆಯನ್ನು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ, ಅಕ್ರಮ ವಲಸಿಗರ ಹೆಸರಲ್ಲಿ ವಂಚನೆ ಮಾಡುವ ಮಸೂದೆಯ ವಿರುದ್ದ ನಮ್ಮ ಪ್ರತಿಭಟನೆ ಎಂದು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು.

ಜಾತ್ಯಾತೀತ ಪಕ್ಷಗಳಿಂದ ವಿರೋಧ
ಈ ಪೌರತ್ವ ಮಸೂದೆಯನ್ನು ಜಾರಿಗೊಳಿಸುವುದರ ಮೂಲಕ ಮುಸ್ಲಿಂರನ್ನು ದೇಶದಿಂದ ಹೊರಹಾಕುವ ಪಯತ್ನ ನಡೆದಿದೆ ಎಂದು ಟೀಕಿಸಿದರು. ಅಂತಹ ಕಾಯ್ದೆ ನಮಗೆ ಬೇಡ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ಬಿಜೆಪಿ ಪಕ್ಷ ಮತ್ತು ಕೇಂದ್ರ ಸರ್ಕಾರ ಸಂವಿಧಾನದ ಮೇಲೆ ಆಕ್ರಮಣ ಮಾಡುತ್ತಿದೆ. ಪೌರತ್ವದ ಹೆಸರಲ್ಲಿ ಒಂದು ನಿರ್ದಿಷ್ಟ ಸಮುದಾಯದ ವಿರುದ್ದ ಮಸಲತ್ತು ನಡೆಸಿ, ಅವರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಂವಿಧಾನಕ್ಕೆ ಧಕ್ಕೆ ತರುತ್ತಿದ್ದಾರೆ. ಇದನ್ನು ಜಾತ್ಯಾತೀತ ಪಕ್ಷಗಳು ಒಪ್ಪಿಕೊಳ್ಳುವ ಮಾತೇ ಇಲ್ಲ, ಕಾಂಗ್ರೆಸ್ ಪಕ್ಷ ಇದನ್ನು ಬಲವಾಗಿ ವಿರೋಧಿಸುತ್ತದೆ ಎಂದು ಈಶ್ವರ್ ಖಂಡ್ರೆ ಗುಡುಗಿದರು.

ಪೊಲೀಸರಿಂದ ಅನುಮತಿ ಪಡೆಯದೇ ಪ್ರತಿಭಟನೆ
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪೌರತ್ವ ಮಸೂದೆ ಕಾಯ್ದೆಯನ್ನು ವಿರೋಧ ವ್ಯಕ್ತಪಡಿಸಿ ಮುಸ್ಲಿಂ ಸಂಘಟನೆಗಳೂ ಪ್ರತಿಭಟನೆ ನಡೆಸಿದರು. ನಗರದ ಟೌನ್ ಹಾಲ್ ಎದುರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ಪೊಲೀಸರಿಂದ ಮುಂಚಿತವಾಗಿ ಅನುಮತಿ ಪಡೆಯದೇ ಹಲವು ಮುಸ್ಲಿಂ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಸಿದ್ದವು. ದೇಶದ ನೈತಿಕ, ಸಾಂವಿಧಾನಿಕ ಸ್ಪೂರ್ತಿ ಮತ್ತು ಜಾತ್ಯಾತೀತ ಪರಂಪರೆಗಳಿಗೆ ವಿರುದ್ದವಾದ ಮಸೂದೆ ಮಂಡಿಸಲಾಗುತ್ತಿದೆ, ಕೂಡಲೇ ಇದನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.

ಮರುಪರಿಶೀಲಿಸಲು ಒತ್ತಾಯ
ಸಂವಿಧಾನದ ಪರಿಚ್ಛೇದ 14 ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳ ಉಲ್ಲಂಘನೆಯಾಗಿದೆ, ಮುಸ್ಲಿಂರನ್ನು ಬಲಿಪಶು ಮಾಡುವ ಹುನ್ನಾರ ಅಡಗಿದೆ ಎಂದು ಮುಸ್ಲಿಂ ಮುಖಂಡರು ಅಭಿಪ್ರಾಯಪಟ್ಟರು.
ಈ ಕಾಯ್ದೆಯನ್ನು ರಾತ್ರೋರಾತ್ರಿ ಲೋಕಸಭೆಯಲ್ಲಿ ಅಂಗೀಕಾರ ಮಾಡಿದ್ದಾರೆ, ರಾಜ್ಯಸಭೆಯಲ್ಲಿ ಅಂಗೀಕಾರ ಮಾಡಲು ಬಿಡಬಾರದು ಎಂದು ಒತ್ತಾಯಿಸಿದರು. ಈ ಬಗ್ಗೆ ನಾವು ರಾಜ್ಯಪಾಲರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಮಾಡುತ್ತೇವೆ. ಈ ಪೌರತ್ವ ಮಸೂದೆಯನ್ನು ಮರುಪರಿಶೀಲನೆ ಮಾಡಲು ಕೋರುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದರು.












Click it and Unblock the Notifications