PSI ನೇಮಕಾತಿ ಅಕ್ರಮ ಪ್ರಕರಣ: ಅಮೃತ್ ಪೌಲ್ ಮತ್ತೆ ಪೊಲೀಸ್ ಕಸ್ಟಡಿಗೆ
ಬೆಂಗಳೂರು, ಸೆ.5: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪೌಲ್ ಮತ್ತೆ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ.
ನಗರದ ಎಸಿಎಂಎಂ ನ್ಯಾಯಾಲಯ ಸೋಮವಾರ ಅವರನ್ನು ಮತ್ತೆ ಎಂಟು ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡುವಂತೆ ಆದೇಶ ನೀಡಿದೆ.
ಸಿಐಡಿಯ ಡಿವೈಎಸ್ಪಿ ಶಿವಕುಮಾರ್ ಅವರ ಮನವಿ ಪುರಸ್ಕರಿಸಿದ ಬೆಂಗಳೂರಿನ ಒಂದನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯವು ಅಮೃತ್ ಪೌಲ್ ಅವರನ್ನು ಸೆ.5ರಿಂದ 13ರವರೆಗೆ ತನಿಖೆಗಾಗಿ ಸಿಐಡಿ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ.
ಮತ್ತಷ್ಟು ತನಿಖೆ: ಪ್ರಕರಣದಲ್ಲಿ ಏಳನೇ ಆರೋಪಿಯಾಗಿರುವ ಅಮೃತ್ ಪೌಲ್ ಅವರು ಲಕ್ಷಾಂತರ ರೂಪಾಯಿ ಪಡೆದು ಅಕ್ರಮ ಎಸಗಿರುವ ಸಾಧ್ಯತೆಯಿದೆ. ಕೃತ್ಯ ಎಸಗಲು ಪೌಲ್ ಅವರು ಬಳಸಿರಬಹುದಾದ ಮೊಬೈಲ್ ಸಿಮ್ ಕಾರ್ಡ್ಗಳ ಬಗ್ಗೆ ವಿಚಾರಣೆ ನಡೆಸಬೇಕಿದೆ ಪೌಲ್ ಅವರು ಹೊಂದಿರುವ ಬ್ಯಾಂಕ್ ಖಾತೆಗಳ ವಿವರ ಕಲೆ ಹಾಕಿ, ಹಣದ ವರ್ಗಾವಣೆ ಕುರಿತು ತನಿಖೆ ನಡೆಸಬೇಕಿದೆ ಎಂದು ನ್ಯಾಯಾಲಯ ಹೇಳಿದೆ.
ಆರೋಪಿಯ ಊರಿಗೆ ಭೇಟಿ ನೀಡಿ ಸಾಕ್ಷ್ಯಾಧಾರ ಸಂಗ್ರಹಿಸಬೇಕಿದೆ. ಆದ್ದರಿಂದ ಅವರನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಐಡಿ ಕೋರಿತ್ತು. ಆದರೆ, ಪೌಲ್ ಅವರನ್ನು ಎಂಟು ದಿನಗಳ ಕಾಲ ಸಿಐಡಿ ಪೊಲೀಸ್ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿತು.
ಪ್ರಕರಣದ ಹಿನ್ನೆಲೆ: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ಆ ಪ್ರಕರಣದಲ್ಲಿ ಅಮೃತ್ ಪಾಲ್ ಅವರು ಏಳನೇ ಆರೋಪಿಗಳಾಗಿದ್ದಾರೆ. ಇನ್ನೂ ಇದೇ ಪ್ರಕರಣ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದಂತೆ 2022ರ ಜು.4ರಂದು ಬಂಧಿತರಾಗಿದ್ದ ಪೌಲ್ ಅವರು ಜು.14ರವರೆಗೆ ಪೊಲೀಸ್ ವಶದಲ್ಲಿದ್ದರು.
ಆ ನಂತರ ಅವರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿತ್ತು. ಈ ಪ್ರಕರಣದಲ್ಲಿ 24ನೇ ಆರೋಪಿಯಾಗಿರುವ ಪೌಲ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಎಸಿಎಂಎಂ ಮತ್ತು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿವೆ. ಹಾಗಾಗಿ ಅವರು ಜೈಲಿನಲ್ಲಿಯೇ ಕಾಲದೂಡುತ್ತಿದ್ದಾರೆ.