'ಕಾಲ್ತುಳಿತ ಕೇಸ್ ಸಮಗ್ರ ತನಿಖೆ, ರಾಷ್ಟ್ರೀಯ ಮಾನವ ಹಕ್ಕು ಆಯೋಗ ಮಧ್ಯಪ್ರವೇಶ ಕೋರಿ ಪತ್ರ'
ಬೆಂಗಳೂರು, ಜೂನ್ 12: ರಾಜಧಾನಿ ಬೆಂಗಳೂರು ಐಟಿ ಕೇಂದ್ರವಾಗಿ ಗುರುತಿಸಿಕೊಂಡಿದೆ. ತನ್ನ ಕೊಡುಗೆಯಿಂದ ಗುರುತಿಸಿಕೊಂಡಿದ್ದ ಮಹಾನಗರ ಇದೀಗ RCB ವಿಜಯೋತ್ಸವ ವೇಳೆ ಕಾಲ್ತುಳಿತದಿಂದ ಸಾಕಷ್ಟು ಸುದ್ದಿಯಾಗಿದೆ. ಇದೇ ವಿಚಾರವನ್ನು ವಿಪಕ್ಷಗಳು ಗಾಳವಾಗಿ ಬಳಸಿಕೊಂಡಿದ್ದಾರೆ. ಇದೀಗ ವಿಪಕ್ಷ ನಾಯಕ ಆರ್.ಅಶೋಕ್ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಅನಾಹುತ ತಡೆಯಬಹುದಾದ ದುರಂತವಾಗಿತ್ತು. ಜನಸಂದಣಿ ನಿರ್ವಹಣೆ, ಭದ್ರತೆ ಮತ್ತು ಅಗತ್ಯ ಸೌಲಭ್ಯಗಳಲ್ಲಿನ ಸ್ಪಷ್ಟ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ಹೊಣೆಗಾರಿಕೆ ಸ್ಥಾಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತುರ್ತು ಮಧ್ಯಸ್ಥಿಕೆ ವಹಿಸಬೇಕೆಂದು ಕೋರಿ ಪತ್ರ ಬರೆದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪತ್ರವನ್ನ ಪೋಸ್ಟ್ ಮಾಡಿದ್ದಾರೆ. ಹಾಗಾದರೆ ಪತ್ರದಲ್ಲಿ ಏನಿದೆ?

ಸಂತ್ರಸ್ತರಿಗೆ ನ್ಯಾಯ ಒದಗಿಸುವುದು ಮತ್ತು ಇಂತಹ ಘಟನೆಗಳು ಮುಂದೆಂದೂ ಮರುಕಳಿಸದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಸಂವೇದನಾರಹಿತ, ಬೇಜವಾಬ್ದಾರಿ ಧೋರಣೆ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಧ್ಯ ಪ್ರವೇಶ ಅನಿವಾರ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಯುವಜನರು ಮೃತಪಟ್ಟಿದ್ದಾರೆ. 75 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಜನರ ಸುರಕ್ಷತೆಯ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಹಾಗೂ ಈ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬುದು ಕಂಡುಬಂದಿದೆ ಎಂದು ಆರ್.ಅಶೋಕ ಪತ್ರದಲ್ಲಿ ದೂರಿದ್ದಾರೆ.

RCB, KSCA ಪಾತ್ರ ಇದೆ: ಆರ್.ಅಶೋಕ್
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 35 ಸಾವಿರ ಜನರು ಹೋಗಬಹುದು. ಆದರೆ ಉಚಿತ ಪಾಸ್ ಹಾಗೂ ತಪ್ಪಾದ ಘೋಷಣೆ/ಪ್ರಕಟಣೆಗಳಿಂದಾಗಿ ಅತ್ಯಧಿಕ ಸಂಖ್ಯೆಯಲ್ಲಿ ಜನರು ಬಂದು ಕ್ರೀಡಾಂಗಣಕ್ಕೆ ನುಗ್ಗಿದ್ದಾರೆ. ಇಂತಹ ಬೃಹತ್ ಕಾರ್ಯಕ್ರಮದಲ್ಲಿ ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಕೂಡ ಇತ್ತು. ಆಂಬ್ಯುಲೆನ್ಸ್, ಪ್ರಾಥಮಿಕ ಚಿಕಿತ್ಸಾ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ತಪ್ಪಿನಲ್ಲಿ ಆರ್ಸಿಬಿ, ಡಿಎನ್ಎ ಹಾಗೂ ಕ್ರಿಕೆಟ್ ಅಸೋಸಿಯೇಶನ್ನ ಪಾತ್ರವೂ ಇದೆ ಎಂದಿದ್ದಾರೆ.
ಈ ಪ್ರಕರಣದಲ್ಲಿ FIR ದಾಖಲಾಗಿದೆ ಹಾಗೂ ತನಿಖೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಹಾಗೂ ಸರ್ಕಾರಿ ಸಂಸ್ಥೆಗಳು ಯಾವುದೇ ಸಿದ್ಧತೆ ಮಾಡಿಕೊಳ್ಳದಿರುವುದು ಗೊತ್ತಾಗಿದೆ. ಕಾರ್ಯಕ್ರಮಕ್ಕೆ ಬಂದವರಲ್ಲಿ ಹೆಚ್ಚಿನವರು ಯುವಜನರೇ ಆಗಿದ್ದಾರೆ. ಅವರ ಸುರಕ್ಷತೆ ಹಾಗೂ ಬದುಕುವ ಹಕ್ಕನ್ನು ಕಿತ್ತುಕೊಂಡಂತಾಗಿದೆ. ಆದ್ದರಿಂದ ಈ ದುರಂತವನ್ನು ಸ್ವಯಂ ಪ್ರೇರಿತವಾಗಿ ದೂರಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರ್.ಅಶೋಕ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮಗಳಿಗೆ ಮಾರ್ಗಸೂಚಿ ಬೇಕು
ಸರ್ಕಾರದ ಇಲಾಖೆಗಳು, ಅಧಿಕಾರಿಗಳು ಹಾಗೂ ಖಾಸಗಿ ಸಂಸ್ಥೆಗಳ ಜವಾಬ್ದಾರಿ ಹಾಗೂ ಪಾತ್ರದ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ತನಿಖೆ ಮಾಡಬೇಕಿದೆ. ತಪ್ಪು ಯಾರದ್ದು ಎಂದು ಪತ್ತೆ ಮಾಡಿ, ಹೊಣೆಗಾರಿಕೆಯನ್ನು ಗುರುತಿಸಿ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕಿದೆ. ಹಾಗೆಯೇ ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಕ್ರಮ ವಹಿಸಲು, ಸಾರ್ವಜನಿಕ ಕಾರ್ಯಕ್ರಮಗಳಿಗೆ ಸೂಕ್ತವಾದ ನಿಯಮ ಅಥವಾ ಮಾರ್ಗಸೂಚಿಯನ್ನು ನೀಡಬೇಕಿದೆ. ಈಗಾಗಲೇ ಸರ್ಕಾರದಿಂದ ತನಿಖೆ ನಡೆಯುತ್ತಿದ್ದರೂ, ಅದು ಪಾರದರ್ಶಕವಾಗಿರಲು, ಆಯೋಗದಿಂದ ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಬೇಕಿದೆ. ಹೀಗಾದರೆ ಮಾತ್ರ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.
ಇದು ನಿಜಕ್ಕೂ ತಡೆಯಬಹುದಾದ ದುರಂತರವಾಗಿತ್ತು. ಈಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಧ್ಯಪ್ರವೇಶದಿಂದಾಗಿ ನೊಂದ ಕುಟುಂಬಗಳಿಗೆ ನ್ಯಾಯ ಸಿಗುವುದರ ಜೊತೆಗೆ, ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬಹುದು ಎಂದು ಅವರು ಪತ್ರ ಮುಖೇನ ಕೋರಿದ್ದಾರೆ.












Click it and Unblock the Notifications