ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು, ಸೆಪ್ಟೆಂಬರ್ 11 : ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ 3 ದಿನಗಳ ಕಾಲ ಮುಂದೂಡಿದೆ. ಬೆಂಗಳೂರಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿ ಬಂಧಿಸಿದ್ದಾರೆ.
ಶುಕ್ರವಾರ ಬೆಂಗಳೂರಿನ ವಿಶೇಷ ಎನ್ಡಿಪಿಎಸ್ ಕೋರ್ಟ್ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಸಿಸಿಬಿ ಪೊಲೀಸರಿಗೆ ನೋಟಿಸ್ ಜಾರಿಗಳಿಸಿದ ನ್ಯಾಯಾಲಯ ಸೆ.15ರಂದು ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿತು.

ನಟಿ ರಾಗಿಣಿ ದ್ವಿವೇದಿ ಪರ ವಕೀಲರು ತುರ್ತಾಗಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು. ಕೋರ್ಟ್ ಮನವಿಯನ್ನು ತಳ್ಳಿ ಹಾಕಿತು, ಅರ್ಜಿಯ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿತು.
ಪೊಲೀಸರ ವಶದಲ್ಲಿ ರಾಗಿಣಿ : ಆಗಸ್ಟ್ 4ರ ಶುಕ್ರವಾರ ಸಿಸಿಬಿ ಪೊಲೀಸರು ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ಬಳಿಕ ಅವರನ್ನು ವಶಕ್ಕೆ ಪಡೆದುಕೊಂಡು ಸಿಸಿಬಿ ಕಚೇರಿಗೆ ಕರೆ ತಂದಿದ್ದರು. ಅಂದು ಸಂಜೆ ಅವರನ್ನು ಬಂಧಿಸಿ 3 ದಿನಗಳ ಕಾಲ ವಶಕ್ಕೆ ಪಡೆದಿದ್ದರು.
ಸೆಪ್ಟೆಂಬರ್ 7ರಂದು ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸಲಾಗಿತ್ತು. ಕೋರ್ಟ್ 5 ದಿನಗಳ ಕಾಲ ಮತ್ತೆ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿತ್ತು. ಅವರು ಸದ್ಯ ಪೊಲೀಸರ ವಶದಲ್ಲಿಯೇ ಇದ್ದಾರೆ.
ನಟಿ ರಾಗಿಣಿ ಸೇರಿದಂತೆ ಡ್ರಗ್ಸ್ ಪೂರೈಕೆ ಪ್ರಕರಣದಲ್ಲಿ ಬಂಧಿತಾಗಿರುವ 6 ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಳ್ಳಲಿದೆ. ಪೊಲೀಸರು ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.












Click it and Unblock the Notifications