ದೇವೇಗೌಡ, ಸಿದ್ದರಾಮಯ್ಯ ರಾಜಕೀಯ ಸನ್ಯಾಸತ್ವ ಸ್ವೀಕರಿಸಲಿ: ಮುರಳೀಧರ ರಾವ್
ಬೆಂಗಳೂರು, ಜೂನ್ 5: ಸನ್ಯಾಸಿಯಾಗಬೇಕಿದ್ದವರು ದೇಶದ ಪ್ರಧಾನಿ ಆಗಿದ್ದಾರೆ. ಪ್ರಧಾನಿ ಆಗುವ ಕನಸು ಕಾಣುತ್ತಿದ್ದವರು ಸನ್ಯಾಸ ಸ್ವೀಕರಿಸುವುದು ಒಳ್ಳೆಯದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ ರಾವ್ ಅವರು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗಾಂಧಿ ಅವರನ್ನು ಲೇವಡಿ ಮಾಡಿದರು.
ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗುವ ಕನಸು ಕಂಡಿದ್ದರು. ಆದರೆ, ಅದನ್ನು ಜನರು ತಿರಸ್ಕರಿಸಿದ್ದಾರೆ. ಈಗ ರಾಹುಲ್ ಗಾಂಧಿ ಅವರಿಗೆ ಯಾವದೇ ಕೆಲಸ ಇಲ್ಲ. ಐದು ವರ್ಷಗಳ ಕಾಲ ಅವರು ನಿರಾತಂಕವಾಗಿ ನಿದ್ದೆ ಮಾಡಲಿ ಎಂದು ಅಣಕಿಸಿದರು.
ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಅವರು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಸೇರುವಂತೆ ಬಹಿರಂಗವಾಗಿ ಆಹ್ವಾನ ನೀಡಿದರು. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದರೆ ಏನಾಗುತ್ತದೆ ಎನ್ನುವುದಕ್ಕೆ ಉಮೇಶ್ ಜಾಧವ್ ಉದಾಹರಣೆ ಎಂದು, ಕಾಂಗ್ರೆಸ್ನಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಿ ಸಂಸತ್ಗೆ ಆಯ್ಕೆಯಾದ ಉಮೇಶ್ ಜಾಧವ್ ಹೆದರು ಉಲ್ಲೇಖಿಸಿ ಹೇಳಿದರು.
ವಿಧಾನಸಭೆ ಚುನಾವಣೆಯಿಂದ ಈವರೆಗೂ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಅದರ ಪರಿಣಾಮವನ್ನು ಕಾಂಗ್ರೆಸ್ ಈಗ ಅನುಭವಿಸಬೇಕಿದೆ ಎಂದು ಮುರಳೀಧರ ರಾವ್ ಕಿಡಿಕಾರಿದರು.
ಕಾಂಗ್ರೆಸ್ಗೆ 125 ವರ್ಷಗಳ ಇತಿಹಾಸವಿದೆ. ಆದರೆ ಅದು ಕಳೆದ ಲೋಕಸಭೆ ಚುನಾವಣೆಯಲ್ಲಿ ಮತ್ತು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಕೂಡ ವಿರೋಧಪಕ್ಷದ ಸ್ಥಾನ ಗಳಿಸಲು ಅಗತ್ಯವಿರುವ ಸಂಖ್ಯಾಬಲವನ್ನು ಸಾಧಿಸುವಲ್ಲಿ ವಿಫಲವಾಗಿದೆ. ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎನ್ನುವುದಕ್ಕೆ ಇದಕ್ಕಿಂತ ಬೇರೆ ನಿದರ್ಶನ ಬೇಕಿಲ್ಲ ಎಂದರು.












Click it and Unblock the Notifications