ರಾಹುಲ್ ಗಾಂಧಿ ನಿರ್ಧಾರ ಆಘಾತ ಉಂಟು ಮಾಡಿದೆ: ಪರಮೇಶ್ವರ್
ಬೆಂಗಳೂರು, ಜುಲೈ 4: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ರಾಹುಲ್ ಗಾಂಧಿ ಅವರ ನಿರ್ಧಾರ ನಮಗೆ ಆಘಾತ ಉಂಟುಮಾಡಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯ ಫಲಿತಾಂಶದಿಂದ ರಾಹುಲ್ ಗಾಂಧಿ ಅವರಿಗೆ ಸಹಜವಾಗಿಯೇ ಬೇಸರವಾಗಿರುತ್ತದೆ. ಈ ಕಾರಣದಿಂದ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು.
ಬಿಜೆಪಿ, ಆರೆಸ್ಸೆಸ್ ವಿರುದ್ಧ 10 ಪಟ್ಟು ಉತ್ಸಾಹದೊಂದಿಗೆ ಹೋರಾಡುತ್ತೇನೆ: ರಾಹುಲ್ ಗಾಂಧಿ
ಈಗ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಕುರಿತು ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆಯೋ ಕಾದು ನೋಡಬೇಕಿದೆ. ನಾನು ಮುಂದಿನ ವಾರ ದೆಹಲಿಗೆ ಹೋಗಲಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.
ರಿವರ್ಸ್ ಆಪರೇಷನ್ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದ ಬಗ್ಗೆ ದಿನೇಶ್ ಗುಂಡೂರಾವ್ ಅವರನ್ನೇ ಕೇಳಿ. ಅವರು ಕೆಪಿಸಿಸಿ ಅಧ್ಯಕ್ಷರಲ್ಲವೇ. ಅವರು ಹೇಳಿದರೆ ಒಂದು ಅರ್ಥ ಇರುತ್ತದೆ ಎಂದರು.
ನಿಜವಾದ ಅಪಾಯ ಮುಂದಿದೆ: ವಿದಾಯದ ಪತ್ರದಲ್ಲಿ ರಾಹುಲ್ ಗಾಂಧಿ ಕಳವಳ
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸ ಮುಗಿಸಿ ಬಂದ ಬಳಿಕ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿ ರಾಜ್ಯದ ಬಿಕ್ಕಟ್ಟಿನ ಬಗ್ಗೆ ಚರ್ಚಿಸುತ್ತೇವೆ. ಈ ಮೊದಲು ಜಂಟಿ ಶಾಸಕಾಂಗ ಸಭೆ ನಡೆಸುವ ಕುರಿತು ಉದ್ದೇಶಿಸಲಾಗಿತ್ತು. ಆದರೆ ಸಿಎಲ್ಪಿಯಲ್ಲಿ ಶಾಸಕರು ಎಲ್ಲ ಸಮಸ್ಯೆಗಳನ್ನು ಹೇಳಿಕೊಳ್ಳಲು ಆಗುವುದಿಲ್ಲ. ಹೀಗಾಗಿ ಪ್ರತ್ಯೇಕ ಮಾತುಕತೆ ನಡೆಸುತ್ತೇವೆ ಎಂದು ಹೇಳಿದರು.