ಮಳೆ ನೀರಿನಿಂದ ಸಂಕಷ್ಟ: ಬಿಬಿಎಂಪಿಗೆ ಹೈಕೋರ್ಟ್ ಕೊಟ್ಟ ಸಲಹೆಯೇನು?
ಬೆಂಗಳೂರು,ಸೆ.7: ನಗರದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ರಕ್ಷಣೆಗೆ ಬಿಬಿಎಂಪಿ ಕ್ರಮ ಕೈಗೊಳ್ಳದಿರುವುದಕ್ಕೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಅಲ್ಲದೆ, ಸಂಕಷ್ಟಕ್ಕೆ ಸಿಲುಕಿರುವವವರ ಸಮಸ್ಯೆ ಪರಿಹರಿಸಲು ತಕ್ಷಣವೇ ವಾರ್ಡ್ವಾರು ಕುಂದುಕೊರತೆ ಘಟಕ ಆರಂಭಿಸುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿದೆ. ಪ್ರತಿ ವಾರ್ಡ್ನ ಎಂಜಿನಿಯರ್ಗಳು ಆಯಾ ವಾರ್ಡ್ ನಿವಾಸಿಗಳ ಕುಂದುಕೊರತೆ ಆಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದೆ.
ಬೆಂಗಳೂರು ನಗರದ ರಸ್ತೆ ದುಸ್ಥಿತಿಯ ಬಗ್ಗೆ ಕೋರಮಂಗಲದ ವಿಜಯ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಹಿತಾಸಕ್ತಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಅರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ನಗರದಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ನೀರು ರಸ್ತೆ ಮೇಲೆ ತುಂಬಿಕೊಂಡಿರುವ ಮತ್ತು ಮನೆಗಳಿಗೆ ನೀರು ನುಗ್ಗಿರುವ ವಿಚಾರವನ್ನು ಪ್ರಸ್ತಾಪಿಸಿ ಬಿಬಿಎಂಪಿ ವಿರುದ್ಧ ನ್ಯಾಯಪೀಠ ಬೇಸರ ವ್ಯಕ್ತಪಡಿಸಿತು.

ಚರಂಡಿಗಳಲ್ಲೆಲ್ಲಾ ಕಸ: ನಗರದಲ್ಲಿ ಭಾರಿ ಮಳೆಯಾಗಿರುವುದನ್ನು ಅಲ್ಲಗಳೆಯುತ್ತಿಲ್ಲ. ಆದರೆ, ನೀರು ಚರಂಡಿಗೆ ಹೋಗುತ್ತಿಲ್ಲ. ಚರಂಡಿಗಳಲ್ಲಿ ಕಸ ತುಂಬಿಕೊಂಡಿದೆ. ನಗರದ ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವುದಕ್ಕೆ ಏನು ಮಾಡಿದ್ದೀರಿ? ಜನರು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ವಾರ್ಡ್ವಾರು ವಿಶೇಷ ವ್ಯವಸ್ಥೆ ಮಾಡಲಾಗಿದೆಯೇ? ಕುಂದುಕೊರತೆ ಪರಿಹಾರ ಕೇಂದ್ರ ಆರಂಭಿಸಲಾಗಿದೆಯೇ? ಎಂದು ಬಿಬಿಎಂಪಿಯನ್ನು ಪ್ರಶ್ನಿಸಿತು.
ಅದಕ್ಕೆ ಉತ್ತರಿಸಿದ ಬಿಬಿಎಂಪಿ ವಕೀಲರು, ಭಾರೀ ಮಳೆಯಿಂದ ರಸ್ತೆಯಲ್ಲಿ ನೀರು ತುಂಬಿದೆ. ಬಿಬಿಎಂಪಿ ಅಧಿಕಾರಿಗಳು ಹಗಲಿರುಳು ನಿರಂತರವಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ಸಮಸ್ಯೆ ಬಗೆಹರಿಸಲು ಎಲ್ಲಾ ಕ್ರಮಕೈಗೊಳ್ಳಲಾಗಿದೆ. ಸಂಬಂಧಪಟ್ಟ ಎಂಜಿನಿಯರ್ಗಳು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ವ್ಯಾಪಕ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ನಗರ ನಿವಾಸಿಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರತಿ ವಾರ್ಡ್ನಲ್ಲಿ ಕುಂದುಕೊರತೆ ಘಟಕ ಆರಂಭಿಸಬೇಕು. ಘಟಕದಲ್ಲಿ ಪ್ರತಿ ವಾರ್ಡ್ನ ಎಂಜಿನಿಯರ್ಗಳು ಇರಬೇಕು. ಅವರು ಆಯಾ ವಾರ್ಡ್ ನಿವಾಸಿಗಳು ಕುಂದುಕೊರತೆ ಆಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿಗೆ ನಿರ್ದೇಶಿಸಿತು.

ಅಲ್ಲದೆ, ಮುಂಗಾರು ಆರಂಭವಾಗುವುದಕ್ಕೂ ಮುನ್ನ ಬೆಂಗಳೂರಿನ ಕೆರೆಗಳಿಂದ ನೀರನ್ನು ಬಿಡುಗಡೆ ಮಾಡುವ ಸಂಬಂಧ ಕೆರೆಗಳಿಗೆ ತೂಬು ಗೇಟ್ಗಳನ್ನು ಅಳವಡಿಸುವ ಕುರಿತು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂಬುದಾಗಿ ಬಿಬಿಎಂಪಿ ವಕೀಲರು ತಿಳಿಸಿದ್ದಾರೆ. ಅದರಂತೆ ತೂಬು ಗೇಟ್ ಅಳವಡಿಸುವುದರಿಂದ ಕೆರೆಗಳು ಮುಂಗಾರಿನ ಸಂದರ್ಭದಲ್ಲಿ ತುಂಬಿ ಹರಿಯುವುದಿಲ್ಲ. ಆದ್ದರಿಂದ ತೂಬು ಗೇಟ್ಗಳನ್ನು ಅಳವಡಿಸುವ ಪ್ರಸ್ತಾವನೆ ಸಿದ್ಧವಾದ ಕೂಡಲೇ ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಬೇಕು ಎಂದು ನಿರ್ದೇಶಿಸಿದೆ.
ವರದಿ ಸಲ್ಲಿಸಲು ಆದೇಶ: ಹಾಗೆಯೇ, ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ಸಮಗ್ರವಾಗಿ ಕ್ರಮ ಕೈಗೊಳ್ಳಬೇಕು. ಜು.26ರ ನಂತರ ಈವರಗೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಿರುವುದಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಒಂದು ವಾರದಲ್ಲಿ ಸಲ್ಲಿಸಬೇಕು ಎಂದು ನ್ಯಾಯಪೀಠ ಬಿಬಿಎಂಪಿಗೆ ನಿರ್ದೇಶಿಸಿತು.
ಅಲ್ಲದೆ,2022ರ ಜು.26ರ ನಂತರ ಈವರಗೆ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಿರುವುದಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಬಿಬಿಎಂಪಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ಐಟಿ ಕಂಪನಿಗಳಿಗೆ ಭರವಸೆ: ಮಹದೇವಪುರದಲ್ಲೂ ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಕೆ-100 ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಈ ಭಾಗಕ್ಕೆ ಕಾವೇರಿ ಕುಡಿಯುವ ನೀರು ಪೂರೈಕೆಯ 5ನೇ ಹಂತದ ಮೂಲಕ ನೀರು ಸರಬರಾಜು ಮಾಡಲಾಗುವುದು. ರಾಜ್ಯದ 2ನೇ ಸ್ತರದ ನಗರಗಳತ್ತಲೂ ಗಮನ ಹರಿಸಲಾಗುವುದು. ಆದ್ದರಿಂದ ಯಾವುದೇ ಉದ್ಯಮಿಗಳು ಆತಂಕಕ್ಕೆ ಒಳಗಾಗುವುದು ಬೇಡ. ಸರ್ಕಾರವು ಐಟಿ-ಬಿಟಿ ಕಂಪನಿಗಳ ಅಹವಾಲುಗಳನ್ನು ಕೇಳಿ, ಅವುಗಳನ್ನು ಪರಿಹರಿಸಲೆಂದೇ ವಿಷನ್ ಗ್ರೂಪ್ಗಳನ್ನು ರಚಿಸಿದೆ. ಇದಕ್ಕೆ ಐಟಿ ಕಂಪನಿಗಳನ್ನು ನಡೆಸಿರುವವರನ್ನೇ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಸರ್ಕಾರದ ಸ್ಪಂದನಶೀಲತೆಗೆ ಇದಕ್ಕಿಂತ ನಿದರ್ಶನ ಬೇಕಾಗಿಲ್ಲ ಎಂದು ಐಟಿ ಬಿಟಿ ಸಚಿವ ಅಶ್ವಥ್ ನಾರಾಯಣ್ ಭರವಸೆ ನೀಡಿದ್ದಾರೆ.












Click it and Unblock the Notifications