ಬೆಂಗಳೂರಲ್ಲಿ ಮಳೆ ಅವಾಂತರ: ಮರ ಬಿದ್ದು 3 ವರ್ಷದ ಮಗು ಸಾವು, ಆಕ್ರೋಶ!
ಬೆಂಗಳೂರಿನಲ್ಲಿ ಶನಿವಾರ ಮಳೆಯಾಗಿದ್ದು. ಒಂದೇ ಮಳೆಗೆ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಒಂದೇ ಮಳೆಗೆ ಬೆಂಗಳೂರಿನಲ್ಲಿ ಪುಟ್ಟ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಶನಿವಾರ ಸುರಿದ ಮಳೆಯಿಂದಾಗಿ ಮರ ಬಿದ್ದು ಮಗು ಸಾವನ್ನಪ್ಪಿದೆ. ಹೌದು ನಗರದಲ್ಲಿ ಒಂದೇ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದೆ. 30ಕ್ಕೂ ಹೆಚ್ಚು ಮರಗಳು ಹಾಗೂ 42 ರೆಂಬೆ/ಕೊಂಬೆಗಳು ಧರೆಗುರುಳಿವೆ. 3 ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಬೈಕ್ ಸವಾರರೊಬ್ಬರು ಗಾಯಗೊಂಡಿದ್ದಾರೆ.
ಬೆಂಗಳೂರಿನ ಪೂರ್ವ ವಲಯದ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಮಳೆಯಲ್ಲಿ ಸತ್ಯ ಎನ್ನುವವರು ರಕ್ಷಾ ಎಂಬ 3 ವರ್ಷದ ಮಗುವಿನ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಮರ ಬಿದ್ದಿದೆ. ಕೂಡಲೇ ಮಗುವನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ರಕ್ಷಾ ಎನ್ನುವ ಮಗುವಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಸತ್ಯ ಎನ್ನುವವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯಲ್ಲಿ ಪೂರ್ವ ವಲಯ ಜಂಟಿ ಆಯುಕ್ತ ಸರೋಜ, ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್.ಜಿ ಸ್ವಾಮಿ ಹಾಗೂ ಅರಣ್ಯ ವಿಭಾಗ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ಬಿಬಿಎಂಪಿ ಹೇಳಿದೆ. ಸಣ್ಣ ಮಳೆಗೆ ಈ ರೀತಿ ಅವಾಂತರ ಸೃಷ್ಟಿಯಾಗಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ ಶನಿವಾರ ಸುರಿದಿರುವ ಮಳೆಯಿಂದಾಗಿ ಮರೆಗಳು ಧರೆಗುರುಳಿವೆ. ಒಂದೇ ಮಳೆಗೆ ಬೆಂಗಳೂರಿನಲ್ಲಿ 30ಕ್ಕೂ ಹೆಚ್ಚು ಮರಗಳು ಹಾಗೂ 42 ರೆಂಬೆ/ಕೊಂಬೆಗಳು ಧರೆಗುರುಳಿದ್ದು, ಅರಣ್ಯ ವಿಭಾಗದ ಸಿಬ್ಬಂದಿ ತೆರವು ಕಾರ್ಯಾಚರಣೆಯನ್ನು ಶುರುಮಾಡಿದ್ದಾರೆ. ಇದರಿಂದ ಬೆಂಗಳೂರಿನ ಹಲವು ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಹಾಗೂ ಪಾದಚಾರಿಗಳು ಓಡಾಡುವುದಕ್ಕೂ ಕಷ್ಟವಾಗುವ ಪರಿಸ್ಥಿತಿ ಇದೆ.
ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಈ ಸಂಬಂಧ ಸಹಾಯವಾಣಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಯ ಹಿನ್ನೆಲೆ ಮೇಲ್ವಿಚಾರಣೆ ಮಾಡಲು ಸೂಚನೆ ನೀಡಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.
ನಗರದಲ್ಲಿ ಮಳೆ ಶುರುವಾಗಿದೆ. ಹೀಗಾಗಿ ಎಲ್ಲಾ ವಲಯ ಆಯುಕ್ತರು ಮೇಲ್ವಿಚಾರಣೆ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದ್ದಾರೆ. ರಸ್ತೆ ಮೂಲಭೂತ ಸೌಕರ್ಯ ಮತ್ತು ಬೃಹತ್ ರಾಜಕಾಲುವೆ ವಿಭಾಗದ ಎಂಜಿನಿಯರ್ಗಳು ಹಾಗೂ ಅರಣ್ಯ ವಿಭಾಗದ ಸಿಬ್ಬಂದಿ, ತಕ್ಷಣವೇ ಪರಿಶೀಲನೆ ನಡೆಸಬೇಕು. ರಸ್ತೆಗಳಲ್ಲಿ ನೀರು ನಿಂತಿರುವ ಹಾಗೂ ಮರ, ಮರದ ಕೊಂಬೆಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.
ವಾರ್ಡ್ ರಸ್ತೆಗಳು ಮತ್ತು ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛವಾಗಿಡಬೇಕು. ಮಳೆಯಿಂದ ಸಮಸ್ಯೆಯಾಗಿರುವ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಇರುವ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಲಾಗಿದೆ. ಬೆಂಗಳೂರಿನ ಎಲ್ಲಾ 8 ವಲಯಗಳ ನಿಯಂತ್ರಣ ಕೊಠಡಿಗಳು ಸರಿಯಾಗಿ ಕೆಲಸ ಮಾಡಬೇಕು. ಸಾರ್ವಜನಿಕರಿಂದ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಿ ಸಮಸ್ಯೆಯನ್ನು ಬಗೆಹರಿಸಲು ಸೂಚಿಸಲಾಗಿದೆ.
ನಗರದಲ್ಲಿ ಸುರಿದ ಮಳೆಗೆ ಪಾಲಿಕೆ ಕ್ರಮ: ಬಿಬಿಎಂಪಿ ವ್ಯಾಪ್ತಿಯಲ್ಲಿ ಸುರಿದ ಜೋರು ಮಳೆಯಿಂದ ರಸ್ತೆಯಲ್ಲಿ ನಿಂತಿರುವ ನೀರು, ಧರೆಗುರುಳಿದ ಮರಗಳು, ರೆಂಬೆ ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಹೇಳಿದ್ದಾರಾದರೂ, ನಗರದಲ್ಲಿ ಸಮಸ್ಯೆ ಮುಂದುವರಿದಿದೆ.
1533ಕ್ಕೆ ಕರೆ ಮಾಡಿ: ನಗರದಲ್ಲಿ ಮಳೆಯಿಂದ ಏನಾದರು ಸಮಸ್ಯೆಯಾಗಿದ್ದರೆ ಕೂಡಲೇ ಪಾಲಿಕೆಯ ಸಹಾಯವಾಣಿ ಸಂಖ್ಯೆ 1533ಕ್ಕೆ ಕರೆ ಮಾಡಿ ದೂರು ನೀಡಬಹುದು. ಇದರ ಜೊತೆಗೆ ಪಾಲಿಕೆ 8 ವಲಯಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದಾಗಿದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.












Click it and Unblock the Notifications