ಬೆಂಗಳೂರಲ್ಲಿ ಇನ್ನೂ ಕೆಲವು ದಿನ ಮಳೆ ಮುಂದುವರೆಯಲಿದೆ
ಬೆಂಗಳೂರು, ಸೆಪ್ಟೆಂಬರ್ 21: ಉದ್ಯಾನ ನಗರಿ ಬೆಂಗಳೂರಿನ ವಾತಾವರಣ ತಂಪಾಗಿದೆ. ಮೋಡ ಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಆಗಾಗ ಕೆಲವು ಬಡಾವಣೆಗಳಲ್ಲಿ ಮಳೆಯೂ ಬರುತ್ತಿದೆ. ಇನ್ನೂ ಕೆಲವು ದಿನ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು, ಉಡುಪಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗಿಯೇ ಇದೆ. ಬೆಂಗಳೂರು ನಗರದಲ್ಲಿ ಆಗಾಗ ಕೆಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಆದರೆ, ತಂಪಾದ ಗಾಳಿ ಬೀಸುತ್ತಿದೆ.
ಶನಿವಾರ ಮತ್ತು ಭಾನುವಾರ ಬೆಂಗಳೂರಿನಲ್ಲಿ ಮಳೆಯಾಗಿದೆ. ಬಿಬಿಎಂಪಿ ನಿಯಂತ್ರಣ ಕೊಠಡಿಗೆ
ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಬಗ್ಗೆ ದೂರುಗಳು ಬಂದಿವೆ. ಮಳೆ ಸಂಬಂಧಿತ ಯಾವುದೇ ಸಮಸ್ಯೆಗಳನ್ನು ಎದುರಿಸಲು ಬಿಬಿಎಂಪಿ ಸಜ್ಜಾಗಿದೆ.
ಮುಂಗಾರು ಚುರುಕಾಗಿರುವುದರಿಂದ ಈ ಬಾರಿ ನೈಋತ್ಯ ಮುಂಗಾರು ಅವಧಿ ಹೆಚ್ಚಾಗಲಿದೆ. ಅಂದರೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಕ್ಟೋಬರ್ 15ರ ತನಕ ಮಳೆಯಾಗಲಿದೆ. ಸರ್ಕಾರದ ಲೆಕ್ಕದ ಪ್ರಕಾರ ಜೂನ್ 1 ರಿಂದ ಸೆಪ್ಟೆಂಬರ್ 30ರ ತನಕ ಮುಂಗಾರು ಮಳೆ ಸುರಿಯಬೇಕು.

ಮಳೆಗೆ ಕಾರಣವೇನು?
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವಂತ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಬೆಂಗಳೂರು, ಉಡುಪಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಹೇಳಿದೆ. ಕೆಲವು ಭಾಗದಲ್ಲಿ ಭಾರಿ ಮಳೆಯಾದರೆ ಉಳಿದ ಕಡೆ ಸಾಧಾರಣ ಮಳೆಯಾಗುತ್ತಿದೆ.

ಬೆಂಗಳೂರಲ್ಲಿ ಮಳೆ
ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಬಿಬಿಎಂಪಿ ನಿಯಂತ್ರಣ ಕೊಠಡಿಗೆ ಹಲವಾರು ಕರೆಗಳು ಬಂದಿವೆ. ಇಂದಿರಾ ನಗರ ಬಿಎಂಟಿಸಿ ಡಿಪೋದಲ್ಲಿ 27.5, ವಿಜ್ಞಾನ ನಗರದಲ್ಲಿ 22.5, ಶಿವಾಜಿನಗರದಲ್ಲಿ 22, ಕೊಟ್ಟಿಗೆಪಾಳ್ಯದಲ್ಲಿ 20 ಮಿ. ಮೀ.ಮಳೆಯಾಗಿದೆ.

ಮಳೆಯ ಮುನ್ಸೂಚನೆ
ಸೆಪ್ಟೆಂಬರ್ 23ರ ತನಕ ಏಳು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಗಾರು ಬಿರುಸುಗೊಂಡಿರುವುದರಿಂದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
Recommended Video

ಮೀನುಗಾರರಿಗೆ ಎಚ್ಚರಿಕೆ
ಕರಾವಳಿ ಭಾಗದಲ್ಲಿ ಗಂಟೆಗೆ 55 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿಯೂ 48 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.












Click it and Unblock the Notifications