ವಾರಾಂತ್ಯವರೆಗೂ ಬೆಂಗಳೂರಲ್ಲಿ ಮಳೆ ಮುಂದುವರೆಯುವ ಸಾಧ್ಯತೆ
ಬೆಂಗಳೂರು, ಏಪ್ರಿಲ್ 25: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಂಗಳವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದೆ. ರಾಜಧಾನಿಯ ಹಲವೆಡೆ ಮರಗಳು ಧರೆಗುರುಳಿದ್ದು, ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಹಾಸನ ಜಿಲ್ಲೆಯ ಅರಕಲಗೋಡಿನಲ್ಲಿ ಜೋರು ಮಳೆಯಾಗಿದ್ದು, ಬಿರುಗಾಳಿಗೆ ಮರಗಳು ಉರುಳಿವೆ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಕೊಡಗಿನಲ್ಲಿ ಉತ್ತಮ ಮಳೆಯಾಗಿದೆ. ಏ.28ರವರೆಗೂ ಚಿತ್ರದುರ್ಗ, ದಾವಣಗೆರೆ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಬರುವ ಸಾಧ್ಯತೆಗಳಿವೆ. ಬುಧವಾರ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಗರದಲ್ಲಿ ಮಂಗಳವಾರ ಮಧ್ಯಾಹನದವರೆಗೆ ಮೋಡ ಕವಿದ ವಾತಾವರಣವಿದ್ದು, ಸಂಜೆ ಮಳೆಯಾಗಿದೆ. ನಗರ ಪ್ರದೇಶದಲ್ಲಿ 3.8 ಮಿ.ಮೀ ಮತ್ತು ವಿಮಾನ ನಿಲ್ದಾಣ ಪ್ರದೇಶದಲ್ಲಿ 6.8ಮಿ.ಮೀ ಮಳೆಯಾಗಿದೆ. ಮಾ.1ರಿಂದ ಏ.24ರವರೆಗೆ ನಗರದಲ್ಲಿ ಸರಾಸರಿ 96 ಮಿ.ಮೀ ಮಳೆ ದಾಖಲಾಗಿದೆ.

ಬೆಂಗಳೂರು ನಗರದಲ್ಲಿ ಬುಧವಾರ ಗರಿಷ್ಠ 34ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್ ನಲ್ಲಿ ಗರಿಷ್ಠ 33.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21ಡಿಗ್ರಿ ಸೆಲ್ಸಿಯಸ್, ಎಚ್ಎಎಲ್ ನಲ್ಲಿ ಗರಿಷ್ಠ 33.5ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬುಧವಾರ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಉಂಟಾಗಲಿದ್ದು ಸಂಜೆ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications