ಗುರುವಾರ ಮುನಿರತ್ನ ಪರವಾಗಿ ನಟ ದರ್ಶನ್ ಪ್ರಚಾರ
ಬೆಂಗಳೂರು, ಅಕ್ಟೋಬರ್ 28 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ನವೆಂಬರ್ 3ರಂದು ಆರ್. ಆರ್. ನಗರ ಉಪ ಚುನಾವಣೆ ನಡೆಯಲಿದ್ದು, ಬಹಿರಂಗ ಪ್ರಚಾರ ಭಾನುವಾರ ಅಂತ್ಯವಾಗಲಿದೆ. ಆದ್ದರಿಂದ, ವಿವಿಧ ರಾಜಕೀಯ ಪಕ್ಷಗಳು ಪ್ರಚಾರವನ್ನು ಬಿರುಸಿನಿಂದ ನಡೆಸುತ್ತಿವೆ.
ನಟ ದರ್ಶನ್ ಆರ್. ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಗುರುವಾರ ಪ್ರಚಾರ ನಡೆಸಲಿದ್ದಾರೆ. ದರ್ಶನ್ ಸಹ ಆರ್. ಆರ್. ನಗರ ವಿಧಾನಸಭಾ ಕ್ಷೇತ್ರದ ಮತದಾರರು. ನಿರ್ಮಾಪಕ ಮುನಿರತ್ನ ಮತ್ತು ನಟ ದರ್ಶನ್ ಉತ್ತಮ ಸ್ನೇಹಿತರು.

ಗುರುವಾರ ನಟ ದರ್ಶನ್ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸುವ ಮೂಲಕ ದರ್ಶನ್ ಮತಯಾಚನೆ ಮಾಡಲಿದ್ದಾರೆ. ದರ್ಶನ್ ಜೊತೆ ಇತರ ಕೆಲವು ನಟ-ನಟಿಯರು ಪ್ರಚಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ನಟ ದರ್ಶನ್ಗೆ ಎಲ್ಲಾ ಪಕ್ಷದಲ್ಲಿಯೂ ಸ್ನೇಹಿತರಿದ್ದಾರೆ. ಲೋಕಸಭೆ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅವರು ಪಕ್ಷಬೇಧವಿಲ್ಲದೇ ಸ್ನೇಹಿತರ ಪರವಾಗಿ ಪ್ರಚಾರವನ್ನು ನಡೆಸುತ್ತಾರೆ.
ಆರ್. ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ನಿಂದ ಹೆಚ್. ಕುಸುಮಾ ಮತ್ತು ಜೆಡಿಎಸ್ನಿಂದ ಕೃಷ್ಣಮೂರ್ತಿ ಅಭ್ಯರ್ಥಿಗಳು. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, 10ರಂದು ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications