ಆರ್. ಆರ್. ನಗರ ಚುನಾವಣೆ; ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಎಫ್ಐಆರ್
ಬೆಂಗಳೂರು, ಅಕ್ಟೋಬರ್ 27: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಬಿರುಸಿನಿಂದ ನಡೆಯುತ್ತಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ.
ಮತಗಳನ್ನು ಸೆಳೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ನ್ಯಾಯಾಲಯದ ಆದೇಶದ ಅನ್ವಯ ಎರಡೂ ಪಕ್ಷದ ಅಭ್ಯರ್ಥಿಗಳ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ನೀಡಿದ್ದ ದೂರಿನ ಆಧಾರದ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಜೆಪಿಗೆ ಮತ ಹಾಕಿದರೆ 5 ಸಾವಿರ ರೂ. ನೀಡುವುದಾಗಿ ಆಮಿಷವೊಡ್ಡಲಾಗಿದೆ ಎಂಬುದು ದೂರು.

ಬಿಜೆಪಿ ಕಾರ್ಯಕರ್ತ ಪುನೀತ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದರೆ ಹಣ ನೀಡುವುದಾಗಿ ಆಮಿಷವೊಡ್ಡಿದ್ದಾರೆ, ಮತದಾರರ ಗುರುತಿನ ಚೀಟಿ ಸಂಗ್ರಹ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು.
ಯಶವಂತಪುರ ಪೊಲೀಸರು ಮೊದಲು ಎರಡೂ ದೂರುಗಳ ಆಧಾರದ ಮೇಲೆ ಎನ್ಸಿಆರ್ ದಾಖಲು ಮಾಡಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಎಫ್ಐಆರ್ ದಾಖಲಿಸಿದ್ದಾರೆ. ಆರ್. ಆರ್. ನಗರದಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ನಿಂದ ಹೆಚ್. ಕುಸುಮಾ, ಜೆಡಿಎಸ್ನಿಂದ ಕೃಷ್ಣಮೂರ್ತಿ ಅವರು ಅಭ್ಯರ್ಥಿಗಳಾಗಿದ್ದಾರೆ.












Click it and Unblock the Notifications