ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ನಾಮಪತ್ರ ವಾಪಸ್!
ಬೆಂಗಳೂರು, ಅಕ್ಟೋಬರ್ 20: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣ ಅಂತಿಮಗೊಂಡಿದೆ. ಮುನಿರತ್ನ ಹೆಸರಿನ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈಗ ಪಕ್ಷೇತರ ಅಭ್ಯರ್ಥಿ ಮುನಿರತ್ನ ನಾಮಪತ್ರ ವಾಪಸ್ ಪಡೆದಿದ್ದಾರೆ.
ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 19 ಕೊನೆಯ ದಿನವಾಗಿತ್ತು. ಕ್ಷೇತ್ರದಲ್ಲಿ ನಾಲ್ವರು ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ ಪಡೆದಿದ್ದು, ಕಣದಲ್ಲಿ 16 ಅಭ್ಯರ್ಥಿಗಳು ಉಳಿದಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮುನಿರತ್ನ, ಮುನಿರತ್ನಮ್ಮ, ಸಿ. ಆನಂದ್ ಮತ್ತು ಆರ್. ಕುಮಾರ್ ನಾಮಪತ್ರಗಳನ್ನು ವಾಪಸ್ ಪಡೆದಿದ್ದಾರೆ. ಇದರಿಂದಾಗಿ ಕಣದಲ್ಲಿ ಒಬ್ಬರೇ ಮುನಿರತ್ನ ಉಳಿದಿದ್ದಾರೆ.

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ. ಇದೇ ಹೆಸರಿನ ಪಕ್ಷೇತರ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ಅವರು ನಾಮಪತ್ರ ವಾಪಸ್ ಪಡೆದರು.
ಕ್ಷೇತ್ರದಲ್ಲಿ ಪ್ರಮುಖವಾಗಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ನಿಂದ ಹೆಚ್. ಕುಸುಮಾ ಮತ್ತು ಜೆಡಿಎಸ್ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ.
ನವೆಂಬರ್ 3ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಆರ್. ಆರ್. ನಗರದಲ್ಲಿ ಮತದಾನ ನಡೆಯಲಿದೆ. ಮತಯಂತ್ರಗಳನ್ನು ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಇಡಲಾಗುತ್ತದೆ. ನವೆಂಬರ್ 10ರಂದು ಅಲ್ಲಿಯೇ ಮತ ಎಣಿಕೆ ನಡೆಯಲಿದೆ.
ಮತದಾನಕ್ಕಾಗಿ ಒಟ್ಟು 678 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಕ್ಷೇತ್ರದಲ್ಲಿ ಒಟ್ಟು4,62,201 ಮತದಾರರು ಇದ್ದಾರೆ. ಇವರಲ್ಲಿ ಪುರುಷರು 2,41,0498, ಮಹಿಳೆಯರು 2,21,073 ಮತ್ತು ಇತರೆ 79.
ಈ ಹಿಂದೆ ನಡೆದ ಮತದಾನದ ಆಧಾರದ ಮೇಲೆ ಕ್ಷೇತ್ರದ 79 ಮತಗಟ್ಟೆಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. 2043 ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕಾಗಿ ನಿಯೋಜನೆ ಮಾಡಲಾಗಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕಣಕ್ಕೆ ಇಳಿದಿದ್ದ ಮುನಿರತ್ನ ಗೆಲುವು ಸಾಧಿಸಿದ್ದರು. ಶಾಸಕ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದರಿಂದ ಉಪ ಚುನಾವಣೆ ಎದುರಾಗಿದೆ. ಅವರು ಈಗ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ.
ನವೆಂಬರ್ 3ರಂದು ಬೆಂಗಳೂರಿನ ಆರ್. ಆರ್. ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ. ಯಾರಿಗೆ ಗೆಲುವು ಸಿಗಲಿದೆ? ಎಂದು ಕಾದು ನೋಡಬೇಕಿದೆ.












Click it and Unblock the Notifications