ಆರ್. ಆರ್. ನಗರ ಚುನಾವಣೆ; ಪ್ರಚಾರಕ್ಕೆ ಬಂದ ಕೇಂದ್ರ ಸಚಿವರು!
ಬೆಂಗಳೂರು, ಅಕ್ಟೋಬರ್ 26: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣದಲ್ಲಿ ಪ್ರಚಾರ ಬಿರುಸಿನಿಂದ ಸಾಗಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಸಚಿವರು ಆಗಮಿಸಿದ್ದಾರೆ. ನವೆಂಬರ್ 3ರಂದು ಮತದಾನ ನಡೆಯಲಿದೆ.
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಸೋಮವಾರ ಆರ್. ಆರ್. ನಗರ ವ್ಯಾಪ್ತಿಯಲ್ಲಿ ಉಪ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಜ್ಞಾನ ಭಾರತಿ ಬಡಾವಣೆ, ಪಾಪರೆಡ್ಡಿ ಪಾಳ್ಯ ಸೇರಿದಂತೆ ವಿವಿಧ ಕಡೆ ಅವರು ಪ್ರಚಾರ ನಡೆಸಿದರು.
ವಿಜಯದಶಮಿಯಂದು ಸಹ ಪ್ರಚಾರಕ್ಕೆ ಬಿಡುವು ನೀಡದೆ ಬಿಜೆಪಿ ನಾಯಕರು ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮತ ಕೇಳುತ್ತಿದ್ದಾರೆ. "ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಯಡಿಯೂರಪ್ಪ ಅವರ ಜನಪರ ಆಡಳಿತವು ಮುನಿರತ್ನ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ" ಎಂದು ಸದಾನಂದ ಗೌಡ ಹೇಳಿದರು.

"ಕ್ಷೇತ್ರದಲ್ಲಿ ಪಕ್ಷದ ಪರ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಈ ಸ್ಥಾನವನ್ನು ದಾಖಲೆ ಅಂತರದಿಂದ ಗೆಲ್ಲಲಿದ್ದೇವೆ. ಹೇಳಿಕೊಳ್ಳಲು ಏನೂ ಸಾಧನೆ ಇಲ್ಲದ ವಿರೋಧಿಗಳು ಕೀಳು ಜಾತಿ ರಾಜಕಾರಣಕ್ಕಿಳಿದಿದ್ದು ಜನ ಅವರಿಗೆಲ್ಲ ತಕ್ಕ ಪಾಠ ಕಲಿಸುವುದು ನಿಶ್ಚಿತ" ಎಂದು ಸದಾನಂದ ಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ ಸೇರಿದಂತೆ ವಿವಿಧ ಬಿಜೆಪಿ ನಾಯಕರು ರಾಜರಾಜೇಶ್ವರಿ ನಗರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಅಕ್ಟೋಬರ್ 31ರಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮುನಿರತ್ನ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಒಟ್ಟು 16 ಅಭ್ಯರ್ಥಿಗಳು ಆರ್. ಆರ್. ನಗರ ಉಪ ಚುನಾವಣೆ ಕಣದಲ್ಲಿದ್ದಾರೆ. ಪ್ರಮುಖವಾದ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ನಿಂದ ಹೆಚ್. ಕುಸುಮಾ ಮತ್ತು ಜೆಡಿಎಸ್ನಿಂದ ವಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ. ನವೆಂಬರ್ 3ರಂದು ಮತದಾನ ನಡೆಯಲಿದೆ.
ಆರ್. ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಕರ್ನಾಟಕದ ಬಿಜೆಪಿ ಸರ್ಕಾರದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಆದರೆ, ಆಡಳಿತ ನಡೆಸುತ್ತಿರುವ ಪಕ್ಷದ ಅಭ್ಯರ್ಥಿಗಳು ಗೆದ್ದರೆ ಸರ್ಕಾರದ ವರ್ಚಸ್ಸು ಹೆಚ್ಚಲಿದೆ. ಇದರಿಂದಾಗಿ ಬಿಜೆಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.











Click it and Unblock the Notifications