ಅಜ್ಞಾತ ಸ್ಥಳಕ್ಕೆ ತೆರಳಿದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ
Recommended Video
ಬೆಂಗಳೂರು, ಜುಲೈ 09 : ಮಾಜಿ ಸಚಿವ, ಬಿ.ಟಿ.ಎಂ.ಕ್ಷೇತ್ರದ ಶಾಸಕ ರಾಮಲಿಂಗಾ ರೆಡ್ಡಿ ಮನವೊಲಿಸಲು ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಯಾವ ನಾಯಕರನ್ನು ಭೇಟಿ ಮಾಡಲು ಇಚ್ಚಿಸದ ಅವರು ಅಜ್ಞಾತ ಸ್ಥಳಕ್ಕೆ ತೆರಳಿದರು.
ರಾಜೀನಾಮೆ ನೀಡಿರುವ ಶಾಸಕರ ಪೈಕಿ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಆದರೆ, ರಾಮಲಿಂಗಾ ರೆಡ್ಡಿ ಅವರನ್ನು ಅನರ್ಹಗೊಳಿಸುವಂತೆ ಮನವಿ ಮಾಡಿಲ್ಲ.
ದೆಹಲಿಯಿಂದ ಗುಲಾಂ ನಬಿ ಆಜಾದ್, ಬಿ.ಕೆ.ಹರಿಪ್ರಸಾದ್ ಅವರು ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದು ಅತೃಪ್ತ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಆದರೆ, ಯಾರನ್ನೂ ಭೇಟಿಯಾಗಲು ಬಯಸದ ರಾಮಲಿಂಗಾ ರೆಡ್ಡಿ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
'ರಾಮಲಿಂಗಾ ರೆಡ್ಡಿ ಅವರ ತೀರ್ಮಾನಕ್ಕೆ ನಾನು ಬದ್ಧ' ಎಂದು ಜಯನಗರ ಕ್ಷೇತ್ರದ ಶಾಸಕಿ, ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸೌಮ್ಯಾ ರೆಡ್ಡಿ ಅವರು ನೀಡಿಲ್ಲ. ಇಂದು ಬೆಳಗ್ಗೆ ನಡೆದ ಸಿಎಲ್ಪಿ ಸಭೆಯಲ್ಲಿಯೂ ಅವರು ಪಾಲ್ಗೊಂಡಿದ್ದರು..

ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ
ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನಲ್ಲಿಯೇ ಇದ್ದಾರೆ. ಇತರ ಶಾಸಕರ ಜೊತೆ ಮುಂಬೈಗೆ ತೆರಳಿಲ್ಲ. ಮಂಗಳವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ನಾನು ಇನ್ನೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ' ಎಂದು ಸ್ಪಷ್ಟಪಡಿಸಿದರು.

ಅನರ್ಹತೆಗೆ ಮನವಿ ಮಾಡಿಲ್ಲ
ಕೆಪಿಸಿಸಿ ರಾಜೀನಾಮೆ ನೀಡಿದ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ಗೆ ದೂರು ನೀಡಿದೆ. ಆದರೆ, ರಾಮಲಿಂಗಾ ರೆಡ್ಡಿ ಅವರನ್ನು ಅನರ್ಹ ಮಾಡುವಂತೆ ಮನವಿ ಮಾಡಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, 'ರಾಮಲಿಂಗಾ ರೆಡ್ಡಿ ಅವರು ಪಕ್ಷದ ವಿರುದ್ಧವಾಗಿ ನಡೆದಿಲ್ಲ. ಅವರೊಂದಿಗೆ ಮಾತುಕತೆ ನಡೆಸಲಾಗುತ್ತದೆ' ಎಂದು ಹೇಳಿದರು.

ಕಡೆಗಣಿಸಿರುವುದು ಸರಿಯಲ್ಲ
ಮಂಗಳವಾರ ಸಿಎಲ್ಪಿ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸೌಮ್ಯಾ ರೆಡ್ಡಿ ಅವರು, 'ನನ್ನ ತಂದೆ ರಾಮಲಿಂಗಾ ರೆಡ್ಡಿ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರನ್ನು ಕಡೆಗಣಿಸಿರುವುದು ಸರಿಯಲ್ಲ. ತಂದೆ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ' ಎಂದು ಹೇಳಿದರು.

ಅಜ್ಞಾತ ಸ್ಥಳಕ್ಕೆ ರಾಮಲಿಂಗಾ ರೆಡ್ಡಿ
ಮಂಗಳವಾರ ಬೆಳಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ರಾಮಲಿಂಗಾ ರೆಡ್ಡಿ ಅವರು ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ತಮಿಳುನಾಡು ರಸ್ತೆಯಲ್ಲಿರುವ ತೋಟದ ಮನೆಗೆ ತೆರಳಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ, ಅವರು ಎಲ್ಲಿದ್ದಾರೆ? ಎಂಬುದು ಖಚಿತವಾಗಿಲ್ಲ.












Click it and Unblock the Notifications