ಉತ್ತರ ಕನ್ನಡ ಉದ್ವಿಗ್ನ, ಸಿಎಂ ಭೇಟಿ ಮಾಡಿದ ರಾಮಲಿಂಗಾ ರೆಡ್ಡಿ
Recommended Video

ಬೆಂಗಳೂರು, ಡಿಸೆಂಬರ್ 12: ಪರೇಶ್ ಮೇಸ್ತಾ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿನ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಉತ್ತರ ಕನ್ನಡದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ಬಗ್ಗೆ ಕೆಲ ಹೊತ್ತು ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ, "ಇದು ಉದ್ದೇಶ ಪೂರ್ವಕವಾದ ಗಲಾಟೆ. ಬಿಜೆಪಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಪ್ರಯತ್ನಿಸುತ್ತಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯದೆಲ್ಲಡೆ ಪ್ರತಿಭಟನೆ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದೆರಡು ತಿಂಗಳಲ್ಲಿ ಬಿಜೆಪಿ ಎಂಟು ಪ್ರತಿಭಟನೆಗಳನ್ನು ಮಾಡಿದ್ದು, ಕಾನೂನು ಹದಿಗೆಡಿಸಲು ಯತ್ನಿಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಉತ್ತರ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥತಿ ನಿರ್ಮಾಣವಾಗಿದ್ದರಿಂದ ಬಗ್ಗೆ ಮಾತನಾಡಲು ಇಂದು (ಮಂಗಳವಾರ) ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಕರೆದಿರುವುದಾಗಿ ರಾಮಲಿಂಗಾ ರೆಡ್ಡಿ ತಿಳಿಸಿದರು.
ಡಿಸೆಂಬರ್ 6ರಂದು, ಬಾಬ್ರಿ ಮಸೀದಿ ಧ್ವಂಸವಾದ 25ನೇ ವರ್ಷದ ದಿನದಂದು, 21 ವರ್ಷದ ಯುವಕರ ಪರೇಶ್ ಮೇಸ್ತಾ ನಿಗೂಢವಾಗಿ ಕಾಣೆಯಾಗಿ ಬಳಿಕ ಶವವಾಗಿ ಪತ್ತೆಯಾಗಿದ್ದ. ಇದೊಂದು ಸಂಚಿನ ಕೊಲೆಯಾಗಿದ್ದು, ತನಿಖೆಗಾಗಿ ಇದನ್ನು ಸಿಬಿಐಗೆ ವಹಿಸಬೇಕೆಂದು ಎಂದು ಹಿಂದೂಪರ ಸಂಘಟನೆಗಳು ಕುಮಟಾ, ಶಿರಸಿ ಬಂದ್ ಗೆ ಕರೆ ನೀಡಿ ಉಗ್ರ ಪ್ರತಿಭಟನೆ ಮಾಡುತ್ತಿವೆ.
ಮಂಗಳವಾರ ಶಿರಸಿ ಬಂದ್ ಹಿಂಸಾತ್ಮಕಕ್ಕೆ ತಿರುಗಿದ್ದು, ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠಿ ಚಾರ್ಜ್ ನಡೆಸಿದರು. ಇದರಿಂದ ಹಲವರಿಗೆ ಗಾಯಗಳಾಗಿವೆ.












Click it and Unblock the Notifications