ಕಾಂಗ್ರೆಸ್ ಅಭ್ಯರ್ಥಿಯಾಗಿ ರಮೇಶ್ ಬಾಬು ನಾಮಪತ್ರ ಸಲ್ಲಿಕೆ!
ಬೆಂಗಳೂರು, ಅ. 07: ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಬಾಬು ನಾಮಪತ್ರ ಸಲ್ಲಿಸಿದ್ದಾರೆ. ಇತ್ತೀಚಿಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ರಮೇಶ್ ಬಾಬು ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು "ಬಿ" ಫಾರಂ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಮಾಜಿ ಸಚಿವ ಯು.ಟಿ. ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಹಾಜರಿದ್ದರು.
ನಂತರ ಡಿ.ಕೆ. ಶಿವಕುಮಾರ್ ಹಾಗೂ ಡಾ. ಜಿ. ಪರಮೇಶ್ವರ್ ಅವರ ಸಮ್ಮುಖದಲ್ಲಿ ರಮೇಶ್ ಬಾಬು ಅವರು ಆಗ್ನೇಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಂತಿನಗರದ ಪ್ರಾದೇಶಿಕ ಆಯುಕ್ತ ಹಾಗೂ ಚುನಾವಣಾಧಿಕಾರಿ ನವೀನ್ ಕುಮಾರ್ ಸಿಂಗ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಹಿಂದೆ ಒಂದು ಬಾರಿ ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಗೆಲವು ಸಾಧಿಸಿದ್ದರು. ಆದರೆ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಅದೇ ಕ್ಷೇತ್ರದಿಂದ ತೂಪಲ್ಲಿ ಚೌಡರೆಡ್ಡಿ ಅವರಿಗೆ ಟಿಕೆಟ್ ಕೊಡಲಾಗಿತ್ತು. ಆ ಚುನಾವಣೆಯಲ್ಲಿ ಗೆಲವು ಸಾಧಿಸಿ ಚೌಡರೆಡ್ಡಿ ಅವರು ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು. ಹೀಗಾಗಿ ರಮೇಶ್ ಬಾಬು ಅವರು ಕ್ಷೇತ್ರ ವಂಚಿತರಾಗಿದ್ದರು.
ಈ ಸಲವೂ ಜೆಡಿಎಸ್ ಪಕ್ಷದಿಂದ ರಮೇಶ್ ಬಾಬು ಅವರು ಸ್ಪರ್ಧೆ ಮಾಡಲು ಪ್ರಯತ್ನಿಸಿದ್ದರು. ಆದರೆ ಜೆಡಿಎಸ್ ಹಾಲಿ ವಿಧಾನ ಪರಿಷತ್ ಸದಸ್ಯರಾಗಿ ನಿವೃತ್ತಯಾಗಿದ್ದ ತೂಪಲ್ಲಿ ಚೌಡರೆಡ್ಡಿ ಅವರಿಗೆ ಟಿಕೆಟ್ ಕೊಟ್ಟಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಮೇಶ್ ಬಾಬು ಅವರು ಇದೀಗ ಸ್ಪರ್ಧೆ ಮಾಡಿದ್ದಾರೆ.