ಜಾರಕಿಹೊಳಿ ಸಿಡಿ ಪ್ರಕರಣ: ಶಂಕಿತರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು, ಮೇ. 31: ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಶಂಕಿತ ಆರೋಪಿಗಳು ಸಲ್ಲಿಸಿರುವ ಅರ್ಜಿಯನ್ನು ಸಿಟಿ ಸಿವಿಲ್ ನ್ಯಾಯಾಲಯ ಜೂನ್ 2 ಕ್ಕೆ ಮುಂದೂಡಿದೆ. ಆಶ್ಲೀಲ ಸಿಡಿ ಬೆಳಕಿಗೆ ಬಂದ ಬೆನ್ನಲ್ಲೇ ಪರಾರಿಯಾಗಿರುವ ಶಂಕಿತ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ನಿರೀಕ್ಷಣಾ ಜಮೀನು ಕೋರಿ ಮೇ. 24 ರಂದು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸುವಂತೆ ಸದಾಶಿವನಗರ ಠಾಣೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಈ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿರುವ ಕಾರಣದಿಂದ ಎಸ್ಐಟಿ ಅಧಿಕಾರಿಗಳೇ ಮೇ. 29 ರಂದು ಆಕ್ಷೇಪಣೆ ಸಲ್ಲಿಸಬೇಕಿತ್ತು. ಕೊರೊನಾ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿತ್ತು. ಇಂದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸಲು ಎರಡು ದಿನ ಕಾಲಾವಕಾಶ ನೀಡಿದೆ. ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಅಧಿಕಾರಿಗಳು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಅರ್ಜಿಯನ್ನು ಜು. 2 ಕ್ಕೆ ಮುಂದೂಡಿ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ.
ಸಿಡಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನೀಡಿದ್ದ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆಗೆ ಒಳಪಟ್ಟಿದ್ದರು. ಈ ವೇಳೆ ನಾನು ಆ ಯುವತಿಯೊಂದಿಗೆ ಸಂಪರ್ಕ ಹೊಂದಿರುವುದು ನಿಜ. ಅದು ಸಹಮತದ ಲೈಂಗಿಕ ಕ್ರಿಯೆ. ನನ್ನನ್ನು ಮುಗಿಸುವ ಉದ್ದೇಶದಿಂದಲೇ ಸಿಡಿ ತಯಾರಿಸಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಮಹತ್ವದ ಟ್ವಿಸ್ಟ್ ಕೊಟ್ಟಿದ್ದರು. ಹೇಳಿಕೆಗೆ ಪೂರಕವಾಗಿ ಎಸ್ಐಟಿ ಅಧಿಕಾರಿಗಳು ಮಹತ್ವದ ಸಾಕ್ಷಿ, ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. ಹೈಕೋರ್ಟ್ ಗೆ ತನಿಖಾ ವರದಿ ಸಲ್ಲಿಕೆ ಸಂಬಂಧ ವಿಚಾರಣೆ ಇಂದು ನಡೆದ ಬೆನ್ನಲ್ಲೇ ಎರಡು ದಿನ ಕಾಲಾವಕಾಶ ಕೋರಲಾಗಿದೆ.
ರಮೇಶ್ ಜಾರಕಿಹೊಳಿ ಸಿಡಿ ಹೊರ ಬರುತ್ತಿದ್ದಂತೆ ಶಂಕಿತ ನರೇಶ್ ಮತ್ತು ಶ್ರವಣ್ ತಲೆ ಮರೆಸಿಕೊಂಡು ನಾನಾ ಕಡೆ ತಿರುಗಾಡುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಇಬ್ಬರ ಪಾತ್ರ ಇರುವ ಬಗ್ಗೆ ಸಿಸಿಟಿವಿ ದೃಶ್ಯಗಳು ಹಾಗೂ ಹಲವು ಸಾಕ್ಷಗಳು ಲಭ್ಯವಾಗಿವೆ. ಹೀಗಾಗಿ ಇವರಿಗೆ ಜಾಮೀನು ನೀಡದಂತೆ ಎಸ್ಐಟಿ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.