ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಿ : ಆಸ್ಪತ್ರೆಯ ಮನವಿ
ಬೆಂಗಳೂರು, ಜನವರಿ 25 : ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಿ ಎಂದು ಬಿಬಿಎಂಪಿಗೆ ಮನವಿ ಮಾಡಲಾಗಿದೆ. ಆಸ್ಪತ್ರೆ ಆವರಣದಲ್ಲಿ ಕ್ಯಾಂಟೀನ್ ಆರಂಭವಾಗಿ ಒಂದು ವರ್ಷ ಕಳೆದಿದೆ.
ಕಿದ್ವಾಯಿ ಆಸ್ಪತ್ರೆಯ ಆಡಳಿತ ಮಂಡಳಿ ಜಾಗದ ಕೊರತೆ ಕಾರಣ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಿ ಎಂದು ಬಿಬಿಎಂಪಿಗೆ ಮನವಿ ಮಾಡಿದೆ. ಆಸ್ಪತ್ರೆ ಸಿದ್ದಾಪುರ ವಾರ್ಡ್ ವ್ಯಾಪ್ತಿಗೆ ಸೇರಿದ್ದು 2018ರ ಜನವರಿ 26ರಂದು ಕ್ಯಾಂಟೀನ್ ಉದ್ಘಾಟನೆಯಾಗಿದೆ.

ಆಸ್ಪತ್ರೆಗೆ ಸೇರಿದ 3 ಸಾವಿರ ಚದರ ಅಡಿ ಜಾಗದಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಈಗ ಆಸ್ಪತ್ರೆ ಆವರಣದಲ್ಲಿ ಜಾಗದ ಕೊರತೆ ಎದುರಾಗಿದೆ. ಇದರಿಂದಾಗಿ ವಾಹನಗಳ ಸಂಚಾರ ಸೇರಿದಂತೆ ಆಸ್ಪತ್ರೆ ಚಟುವಟಿಕೆಗೆ ತೊಂದರೆ ಉಂಟಾಗಿದೆ.
ಆಸ್ಪತ್ರೆ ತನ್ನದೇ ಆದ ಕ್ಯಾಂಟೀನ್ ಹೊಂದಿದ್ದು, ಒಂದು ಸಾವಿರ ಜನರಿಗೆ ಆಹಾರ ಒದಗಿಸುತ್ತಿದೆ. ಅಲ್ಲದೇ 1500 ಮಂದಿಗೆ ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಟ್ರಸ್ಟ್ ವತಿಯಿಂದ ಮೊಬೈಲ್ ಕ್ಯಾಂಟೀನ್ ಮೂಲಕ ಆಹಾರ ವಿತರಣೆ ಮಾಡಲಾಗುತ್ತಿದೆ.
ಆದ್ದರಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆಗತ್ಯತೆ ಇಲ್ಲ ಎಂದು ಆಡಳಿತ ಮಂಡಳಿ ಹೇಳಿದೆ. ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಿದರೆ ಆಸ್ಪತ್ರೆ ಚಟುವಟಿಕೆಗಳಿಗೆ ಸಹಾಯಕವಾಗಲಿದೆ ಎಂದು ತಿಳಿಸಲಾಗಿದೆ.












Click it and Unblock the Notifications