ಬೆಂಗಳೂರಿನ ಜನರಿಗೆ ಖಡಕ್ ಎಚ್ಚರಿಕೆ ನೀಡಿದ ಬಿಬಿಎಂಪಿ
ಬೆಂಗಳೂರು, ಸೆಪ್ಟೆಂಬರ್ 28: ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಭಾನುವಾರ ದಿಢೀರ್ ಹೆಚ್ಚಾಗಿದೆ. ಕರ್ನಾಟಕದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವುದು ಬೆಂಗಳೂರು ನಗರ ಜಿಲ್ಲೆಯಲ್ಲಿ. ಅಕ್ಟೋಬರ್ ತಿಂಗಳಿನಲ್ಲಿಯೂ ನಗರದಲ್ಲಿ ಸೋಂಕು ಹೆಚ್ಚಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ. ಇದಕ್ಕಾಗಿ ಹಲವು ನಿಯಮಗಳನ್ನು ಕಠಿಣಗೊಳಿಸಲಾಗುತ್ತದೆ. ಇದಕ್ಕಾಗಿ ಪೊಲೀಸರ ಸಹಕಾರವನ್ನು ಸಹ ಪಡೆಯಲಾಗುತ್ತದೆ.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮುಂತಾದವುಗಳನ್ನು ಹಲವಾರು ಜನರು ಮರೆತಿದ್ದಾರೆ. ಕೋವಿಡ್ನಿಂದ ರಕ್ಷಣೆ ಪಡೆಯಲು ಇರುವ ನಿಯಮಗಳನ್ನು ಪಾಲನೆ ಮಾಡದೇ ಸಂಚಾರ ನಡೆಸುತ್ತಿದ್ದಾರೆ. ಇಂತಹ ಜನರಿಗೆ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ.

ಬಿಬಿಎಂಪಿ ಅಧಿಕಾರಿಗಳ ಪ್ರಕಾರ ನಗರದ ಜನರು ಸಾಮಾಜಿಕ ಅಂತರ ಪಾಲನೆ ಮಾಡುವುದನ್ನು ಮರೆತಿದ್ದಾರೆ. ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದನ್ನು ಪಾಲಿಕೆ ಕಡಿಮೆ ಮಾಡಿದೆ. ಈಗ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ, ಬಿಬಿಎಂಪಿ ಪುನಃ ಕಠಿಣ ನಿಯಮ ಜಾರಿಗೆ ತರಲಿದೆ.
ಮಾಸ್ಕ್ ಧರಿಸದವರು, ಸಾಮಾಜಿಕ ಅಂತ ಕಾಪಾಡದವರಿಗೆ ದಂಡ ಹಾಕುವುದಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಬಿಎಂಪಿ ಪೊಲೀಸರಿಗೆ ಸಹ ದಂಡ ಹಾಕುವ ಅಧಿಕಾರವನ್ನು ನೀಡಲಿದೆ.
ಬಿಬಿಎಂಪಿಯ 192 ವಾರ್ಡ್ಗಳ ಮಾರ್ಷಲ್ಗಳು ಕಸದ ಸಮಸ್ಯೆ ಬಗ್ಗೆ ಗಮನ ಹರಿಸಿದ್ದರಿಂದ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವುದು ಕಡಿಮೆಯಾಗಿದೆ. ಈ ವಾರದಿಂದಲೇ ದಂಡ ಹಾಕುವ ಪ್ರಕ್ರಿಯೆ ಆರಂಭಿಸಲಾಗುತ್ತದೆ. ಪ್ರತಿ ಪೊಲೀಸ್ ಠಾಣೆಗೆ ದಂಡ ಸಂಗ್ರಹ ಮಾಡಲು ಯಂತ್ರವನ್ನು ನೀಡಲಾಗುತ್ತಿದೆ.












Click it and Unblock the Notifications