ರಸ್ತೆಯಲ್ಲಿ ಮಂದಿರ, ಮಸೀದಿ ನಿರ್ಮಿಸಿದರೆ ಜನ ಸಂಚಾರದ ಕತೆ ಏನು?

ಬೆಂಗಳೂರು, ಜನವರಿ 12: ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿಕೊಂಡು ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಸಂಚಾರಕ್ಕೆ ಏನು ಮಾಡಬೇಕು? ಎಂದು ಕರ್ನಾಟಕ ಹೈಕೋರ್ಟ್‌ ಪ್ರಶ್ನಿಸಿದೆ. ಬೆಂಗಳೂರು ನಗರದ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಿಸಿರುವುದಕ್ಕೆ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಸುಂಕದಕಟ್ಟೆಯ ಸಿ. ಹೊನ್ನಯ್ಯ ಮತ್ತಿತರರು ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ .ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

Road Encroachment For Construction Of Temple HC Upset

ಅರ್ಜಿದಾರರ ಪರ ವಕೀಲರು, "ಸರ್ಕಾರಿ ರಸ್ತೆ ಒತ್ತುವರಿ ಮಾಡಿ ದೇವಸ್ಥಾನ ನಿರ್ಮಿಸುತ್ತಿರುವುದಲ್ಲದೇ ಓಡಾಟಕ್ಕೆ ರಸ್ತೆ ನಿರ್ಬಂಧಿಸಿದ್ದಾರೆ" ಎಂದು ಪೀಠದ ಗಮನಸೆಳೆದರು.

ಆಗ ನ್ಯಾಯಮೂರ್ತಿಗಳು, "ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ, ದೇವಾಲಯ ನಿರ್ಮಿಸಲಾಗಿದೆಯೇ?. ನಿಮ್ಮ (ಬಿಬಿಎಂಪಿ) ವರದಿ ಏನಿದೆ?. ಸಾರ್ವಜನಿಕ ರಸ್ತೆಯನ್ನು ದೇವಸ್ಥಾನ ಅಥವಾ ಬೇರೆ ಪೂಜಾ ಸ್ಥಳ ನಿರ್ಮಿಸಲು ಬಳಸಬಹುದು ಎಂಬುದಕ್ಕೆ ದಾಖಲೆ (ಮೆಟೀರಿಯಲ್) ಎಲ್ಲಿದೆ?. ನಿಮ್ಮ (ಬಿಬಿಎಂಪಿ) ಸ್ಟೋರಿ ನಮಗೆ ಬೇಕಿಲ್ಲ. ಸಾರ್ವಜನಿಕ ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸಲಾಗಿದೆಯೇ?, ಇಲ್ಲವೇ ಎಂಬುದಷ್ಟೇ ನಮಗೆ ಬೇಕು" ಎಂದು ಕೇಳಿತು.

ಜತೆಗೆ ನಾವು ಸಾರ್ವಜನಿಕ ಆಸ್ತಿಯ ರಕ್ಷಕರು. ಇದು ಖಾಸಗಿ ಆಸ್ತಿಯಲ್ಲ. ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೆ ಜನರು ಏನು ಮಾಡಬೇಕು? ಎಂದ ನ್ಯಾಯಾಲಯ ಕೊನೆಗೆ "ನ್ಯಾಯಾಲಯದ ನಿರ್ದೇಶನದ ಮೇರೆಗೆ ಬಿಬಿಎಂಪಿ ಅಫಿಡವಿಟ್ ಸಲ್ಲಿಸಿದ್ದು, ಅದರಲ್ಲಿ ದೇವಸ್ಥಾನ ನಿರ್ಮಿಸಲು ರಸ್ತೆ ಒತ್ತುವರಿ ಮಾಡಲಾಗಿದೆಯೇ ಅಥವಾ ಟ್ರಸ್ಟ್ ಸದಸ್ಯರು ಹೇಳುವಂತೆ ಹಲವು ವರ್ಷಗಳಿಂದ ಅಲ್ಲಿ ದೇವಸ್ಥಾನ ಇತ್ತೇ ಎಂಬುದನ್ನು ಉಲ್ಲೇಖಿಸಲು ವಿಫಲವಾಗಿದೆ" ಎಂದು ಆದೇಶದಲ್ಲಿ ದಾಖಲಿಸಿತು.

ವರದಿಗೆ ಸೂಚನೆ: ಈ ಹಿನ್ನೆಲೆಯಲ್ಲಿ ಸ್ವತಂತ್ರ ಪ್ರಾಧಿಕಾರರಿಂದ ಸ್ಪಷ್ಟವಾದ ವರದಿ ಪಡೆಯುವುದು ಸೂಕ್ತ ಎಂದೆನಿಸಿದೆ. ಸಂಬಂಧಿತ ಎಲ್ಲರಿಗೂ ನೋಟಿಸ್ ಜಾರಿ ಮಾಡಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ನೇಮಿಸಿದ ಭೂ ದಾಖಲೆಗಳ ಉಪ ನಿರ್ದೇಶಕರು (ಡಿಡಿಎಲ್ಆರ್) ತಾಂತ್ರಿಕ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ವಾಸ್ತವಿಕ ವರದಿಯನ್ನು ಮೂರು ವಾರಗಳಲ್ಲಿ ಸಲ್ಲಿಸಬೇಕು ಎಂದು ಆದೇಶ ನೀಡಿದೆ.

ನೋಟಿಸ್ ಪಡೆದ ಸಂಬಂಧಿತರು ಸೂಕ್ತ ದಾಖಲೆಗಳನ್ನು ಡಿಡಿಎಲ್ಆರ್ ಅವರಿಗೆ ನೀಡಬೇಕು. ಡಿಡಿಎಲ್ಆರ್ ಅವರು ಸಂಬಂಧಿತ ಎಲ್ಲಾ ಸಾರ್ವಜನಿಕ ದಾಖಲೆಗಳನ್ನು ತರಿಸಿಕೊಂಡು ಪರಿಶೀಲಿಸಬಹುದಾಗಿದೆ ಎಂದು ನ್ಯಾಯಾಲಯವು ಆದೇಶಿಸಿದೆ.

ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರ ಪರವಾಗಿ ವಾದಿಸಿದ ಹಿರಿಯ ವಕೀಲರು ಅರ್ಜಿಗೆ ಆಕ್ಷೇಪಿಸಿದರು. ಆದರೆ, ಟ್ರಸ್ಟ್ ಪರವಾಗಿ ಇದುವರೆಗೆ ಆಕ್ಷೇಪಣೆ ಸಲ್ಲಿಸಲಾಗಿಲ್ಲ. ಈ ಹಿನ್ನೆಲೆಯಲ್ಲಿ ಆಕ್ಷೇಪಣೆ ಸಲ್ಲಿಸಲು ಟ್ರಸ್ಟ್‌ಗೆ ಮೂರು ವಾರ ಕಾಲಾವಕಾಶ ನೀಡಲಾಗಿದೆ ಎಂದು ನ್ಯಾಯಾಲಯ ಆದೇಶ ಮಾಡಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+