Modi Road Show In Bengaluru: ಪ್ರಧಾನಿ ಭದ್ರತೆಗೆ 8 ಸಾವಿರ ಪೊಲೀಸರ ನಿಯೋಜನೆ; ಈ ಪ್ರದೇಶಗಳಲ್ಲಿ ಕಟ್ಟೆಚ್ಚರ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಮೇ 10ರಂದು ನಡೆಯುವ ಮತದಾನಕ್ಕೆ ಮುನ್ನ ಕೊನೆಯ ಹಂತವಾಗಿ ಮತದಾರರನ್ನು ತಲುಪಲು ಹರಸಾಹಸ ಪಡುತ್ತಿದ್ದಾರೆ.
ಕರುನಾಡ ಕುರುಕ್ಷೇತ್ರದಲ್ಲಿ ರಾಜ್ಯ ನಾಯಕರ ಜೊತೆಗೆ ರಾಷ್ಟ್ರೀಯ ನಾಯಕರೂ ಧುಮುಕಿದ್ದು, ಸಮಾವೇಶ ಮತ್ತು ರೋಡ್ ಶೋಗಳ ಮೂಲಕ ಪ್ರಚಾರ ನಡೆಸುತ್ತಿದ್ದಾರೆ. ಅದರಲ್ಲೂ ಬಿಜೆಪಿ ಒಂದು ಕೈ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಎಂಬ ಬ್ರಹ್ಮಾಸ್ತ್ರದ ಮೂಲಕ ಮತಬೇಟೆಯಾಡುತ್ತಿದೆ.

ಇದೀಗ ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಹೀಗಾಗಿ ಬೆಂಗಳೂರು ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಭದ್ರತೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಭದ್ರತೆಗೆ 8 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೇರಿದಂತೆ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಭಾಗಿಯಾಗಲಿದ್ದಾರೆ. ಸಂಚಾರಿ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, ಹತ್ತು ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಭದ್ರತೆ ನೀಡಲಿದ್ದಾರೆ.

ಪೊಲೀಸರು ನಾಲ್ಕು ಭಾಗಗಳಾಗಿ ಭದ್ರತೆ ನೀಡಲಿದ್ದು, ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ರಾಜಭವನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆ ಒದಗಿಸಲಾಗುತ್ತದೆ. ಜಯನಗರ, ಜೆಪಿನಗರದಲ್ಲಿ ಭದ್ರತೆ ಜವಾಬ್ದಾರಿಯನ್ನು ದಕ್ಷಿಣ ವಿಭಾಗ ಡಿಸಿಪಿ ಕೃಷ್ಣಕಾಂತ್ ನೇತೃತ್ವದ ತಂಡಕ್ಕೆ ವಹಿಸಲಾಗಿದೆ.
ಸುಮಾರು 150 ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದ್ದು, ಚಾಮರಾಜಪೇಟೆಯಿಂದ ಮಹಾಲಕ್ಷ್ಮಿ ಲೇಔಟ್ ತನಕ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ ಭದ್ರತೆಯ ನೇತೃತ್ವ ವಹಿಸಲಿದ್ದಾರೆ.
ಮಹಾಲಕ್ಷ್ಮಿ ಲೇಔಟ್ನಿಂದ ಮಲ್ಲೇಶ್ವರಂನ ಸ್ಯಾಂಕಿ ರಸ್ತೆಯವರೆಗೆ ಉತ್ತರ ವಿಭಾಗ ಡಿಸಿಪಿ ಶಿವಪ್ರಕಾಶ್ ದೇವರಾಜು ನೇತೃತ್ವದಲ್ಲಿ ಬಿಗಿ ಭದ್ರತೆ ನೀಡಲಾಗುತ್ತದೆ.
ನರೇಂದ್ರ ಮೋದಿ ಅವರ ರೋಡ್ ಶೋ ಸಾಗುವ ಮಾರ್ಗ ಮಧ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸೂಕ್ಷ್ಮ ಪ್ರದೇಶವಾದ ಚಾಮರಾಜಪೇಟೆ ಕ್ಷೇತ್ರದ ಶಿರಸಿ ಸರ್ಕಲ್ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ನಾಳೆ ಈ ಮಾರ್ಗದಲ್ಲಿ ವಾಹನ ಸವಾರರು ಸಂಚರಿಸದಂತೆ ಪೊಲೀಸರಿಂದ ಸೂಚನೆ ನೀಡಲಾಗಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಶನಿವಾರ (ಮೇ 6) ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ವರೆಗೆ ಮಾತ್ರ ರೋಡ್ ಶೋ ನಡೆಯಲಿದೆ.
ಬಳಿಕ ಭಾನುವಾರ (ಮೇ 7) ಬೆಳಗ್ಗೆ 9ರಿಂದ ಬೆಳಗ್ಗೆ 11.30ರವರೆಗೆ ಮಾತ್ರ ರೋಡ್ ಶೋ ನಡೆಯಲಿದೆ ಎಂದು ಬಿಬಿಎಂಪಿ ಆಯಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.












Click it and Unblock the Notifications