ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನಗೆ ಬಿಜೆಪಿ ಟಿಕೆಟ್
ಬೆಂಗಳೂರು, ಅಕ್ಟೋಬರ್ 13: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಸುಪ್ರೀಂಕೋರ್ಟ್ ಇಂದು ಬೆಳಗ್ಗೆ ಉಪ ಚುನಾವಣೆ ನಡೆಸಲು ಒಪ್ಪಿಗೆ ನೀಡಿತ್ತು.
ಮಂಗಳವಾರ ಸಂಜೆ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಶಾಸಕ ಮುನಿರತ್ನ ಟಿಕೆಟ್ ಪಡೆಯಲು ಯಶಸ್ವಿಯಾಗಿದ್ದಾರೆ. ನಾಮಪತ್ರನ್ನು ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ.

ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ನಡುವೆ ಉಪ ಚುನಾವಣೆ ಟಿಕೆಟ್ ಪಡೆಯಲು ಪೈಪೋಟಿ ನಡೆದಿತ್ತು. ಯಾರಿಗೆ ಟಿಕೆಟ್ ಸಿಗಲಿದೆ? ಎಂಬುದು ರಾಜ್ಯದ ನಾಯಕರಿಗೂ ಕುತೂಹಲ ಮೂಡಿಸಿತ್ತು. ಅಂತಿವಾಗಿ ಮುನಿರತ್ನಗೆ ಟಿಕೆಟ್ ಸಿಕ್ಕಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಅವಕಾಶ ನೀಡಬಾರದು ಎಂದು ಬಿಜೆಪಿಯ ಮುನಿರಾಜು ಗೌಡ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿತ್ತು, ಉಪ ಚುನಾವಣೆ ನಡೆಸಲು ಒಪ್ಪಿಗೆ ನೀಡಿತ್ತು.
ಈಗಾಗಲೇ ಚುನಾವಣಾ ಆಯೋಗ ನವೆಂಬರ್ 3ರಂದು ಆರ್. ಆರ್. ನಗರದ ಉಪ ಚುನಾವಣೆ ನಡೆಸಲು ದಿನಾಂಕ ನಿಗದಿ ಮಾಡಿದೆ. ಚುನಾವಣಾ ಅಧಿಸೂಚನೆ ಸಹ ಪ್ರಕಟವಾಗಿದೆ. ಅಕ್ಟೋಬರ್ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಆರ್. ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ನಿಂದ ಕುಸುಮಾ ಹನುಮಂತರಾಯಪ್ಪ, ಜೆಡಿಎಸ್ನಿಂದ ಜ್ಞಾನ ಭಾರತಿ ಕೃಷ್ಣಮೂರ್ತಿ ಅಭ್ಯರ್ಥಿಗಳು. ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಆರ್. ಆರ್. ನಗರ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಮುನಿರತ್ನ ಕಾಂಗ್ರೆಸ್ನಿಂದ ಕಣಕ್ಕಿಳಿದು 108,065 ಮತಗಳನ್ನು ಪಡೆದು ಗೆಲವು ಸಾಧಿಸಿದ್ದರು. ಬಿಜೆಪಿ ಅಭ್ಯರ್ಥಿಯಾಗಿದ್ದ ಮುನಿರಾಜು ಗೌಡ 82,573 ಮತಗಳನ್ನು ಪಡೆದಿದ್ದರು.
ಮುನಿರತ್ನ 2 ಬಾರಿ ಆರ್. ಆರ್. ನಗರ ಕ್ಷೇತ್ರದಲ್ಲಿ ಗೆಲವು ಸಾಧಿಸಿದ್ದಾರೆ. 2013ರ ಚುನಾವಣೆಯಲ್ಲಿ 71,064 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ಇದ್ದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ನಲ್ಲಿ ವಿವಿಧ ಅರ್ಜಿಗಳ ವಿಚಾರಣೆ ಬಾಕಿ ಇದ್ದ ಕಾರಣ ಉಪ ಚುನಾವಣೆ ವಿಳಂಬವಾಗಿತ್ತು.











Click it and Unblock the Notifications