ಆರ್. ಆರ್. ನಗರ ಚುನಾವಣೆ; ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಕುಸುಮಾ
ಬೆಂಗಳೂರು, ಅಕ್ಟೋಬರ್ 06: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಅಂತಿಮವಾಗಿಲ್ಲ. ಕಾಂಗ್ರೆಸ್ ಸೇರ್ಪಡೆಗೊಂಡಿರುವ ಹೆಚ್. ಕುಸುಮಾ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
ಮಂಗಳವಾರ ತಂದೆ ಹನುಮಂತರಾಯಪ್ಪ ಜೊತೆ ಕುಸುಮಾ ಅವರು ಎಂ. ರಾಜ್ ಕುಮಾರ್ ಸೇರಿದಂತೆ ವಿವಿಧ ನಾಯಕರನ್ನು ಭೇಟಿ ಮಾಡಿದರು. ರಾಜ್ ಕುಮಾರ್ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ನ ಅಧ್ಯಕ್ಷರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕುರಿತು ಚಿಕ್ಕಣ್ಣ, ಪುಟ್ಟೇಗೌಡ, ಗಂಗಾಧರ್ ಹಾಗೂ ರಾಜಕುಮಾರ್ (ಹಲಗೆವಡೇರಹಳ್ಳಿ) ನಿವಾಸಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಭಾನುವಾರ ಹೆಚ್. ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಆರ್. ಆರ್. ನಗರದಿಂದ ಅವರೇ ಪಕ್ಷದ ಅಭ್ಯರ್ಥಿ ಎಂಬ ಸುದ್ದಿಗಳು ಹಬ್ಬಿವೆ. ಪಕ್ಷ ಅಧಿಕೃತವಾಗಿ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಸೋಮವಾರ ಘೋಷಣೆಯಾಗುವ ನಿರೀಕ್ಷೆ ಇತ್ತು. ಆದರೆ, ಸಿಬಿಐ ದಾಳಿಯಿಂದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಎಲ್ಲಾ ಕಾರ್ಯಕ್ರಮ ರದ್ದಾಗಿತ್ತು.
ಬಿಜೆಪಿ ಮತ್ತು ಜೆಡಿಎಸ್ ಸಹ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಬಿಜೆಪಿಯಲ್ಲಿ ಮಾಜಿ ಶಾಸಕ ಮುನಿರತ್ನ, ಮುನಿರಾಜು ಗೌಡ ಇಬ್ಬರಲ್ಲಿ ಯಾರು ಅಭ್ಯರ್ಥಿ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ಚುನಾವಣೆಯಲ್ಲಿ ಕ್ಷೇತ್ರದಲ್ಲಿ 60 ಸಾವಿರ ಮತಗಳನ್ನು ಪಡೆದಿದ್ದ ಜೆಡಿಎಸ್ ಮೂವರ ಹೆಸರನ್ನು ಅಂತಿಮಗೊಳಿಸಿದೆ. ಆದರೆ, ಇನ್ನೂ ಅಭ್ಯರ್ಥಿ ಯಾರು? ಎಂದು ಘೋಷಿಸಿಲ್ಲ.
ಅಕ್ಟೋಬರ್ 9ರಂದು ಉಪ ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 16ರ ತನಕ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಅವಕಾಶವಿದೆ. ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.












Click it and Unblock the Notifications