ಆರ್ ಆರ್ ನಗರದಲ್ಲಿ ಮುನಿರತ್ನ ಈಗಾಗಲೇ ಗೆದ್ದಾಗಿದೆ: ಸುಧಾಕರ್
ಬೆಂಗಳೂರು, ಅ.15: ''ವಾಸ್ತವವಾಗಿ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಮುನಿರತ್ನ ಅವರು ಈಗಾಗಲೇ ಗೆದ್ದಾಗಿದೆ. ಅವರು ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಅವರು ಮಾಡಿರುವ ಸಾಧನೆಯೇ ಅವರಿಗೆ ಹಿಂದಿಗಿಂತ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ತಂದುಕೊಡಲಿದೆ. ಹೀಗಿರುವಾಗ ಕೇಸು ದಾಖಲಿಸಿ ಹಿಂಬಾಗಿಲ ರಾಜಕಾರಣ ಮಾಡುವ ಅಗತ್ಯವಿಲ್ಲ'' ಎಂದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಯಾವುದೇ ಅಭ್ಯರ್ಥಿ ವಿರುದ್ಧ ಪೊಲೀಸ್ ಕೇಸು ದಾಖಲಿಸಿ ರಾಜಕಾರಣ ಮಾಡುವ ಅನಿವಾರ್ಯತೆ ನಮಗಿಲ್ಲ. ಮೊದಲ ಸಲ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ನನ್ನ ವಿರುದ್ಧವೂ ಪೊಲೀಸರು ಕೇಸು ದಾಖಲಿಸಿದ್ದರು. ಮೂರು ವರ್ಷ ಅದರ ವಿರುದ್ಧ ಹೋರಾಟ ನಡೆಸಿದೆ. ಹೀಗಾಗಿ ದುರುದ್ದೇಶಪೂರಿತವಾಗಿ ಕೇಸು ದಾಖಲಿಸಲಾಗಿದೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದರು.
ದಾರಿತಪ್ಪಿಸಿ ಮತ ಹಾಕಿಸಿಕೊಳ್ಳಲು ಇದು ಕನಕಪುರ ಅಲ್ಲ. ಇಲ್ಲಿರುವ ಪ್ರಜ್ಞಾವಂತ ಮತದಾರರು ಅಭಿವೃದ್ಧಿ ಪರವಾಗಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಬೆಂಬಲಿಸಲಿದ್ದಾರೆ. ನೂತನವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಿರುವ ಕಾರಣಕ್ಕೆ ಮನಸ್ಸಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ನಮ್ಮ ವಿರುದ್ಧ ಜನರ ಮುಂದೆ ಪ್ರತಿಪಾದಿಸಲು ಯಾವುದೇ ವಿಷಯಗಳಿಲ್ಲ ಎಂದು ಲೇವಡಿ ಮಾಡಿದರು.

ಈ ಚುನಾವಣೆ ಮುಂಬರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ದಿಕ್ಸೂಚಿಯಾಗಲಿದೆ. ಪಾಲಿಕೆ ಚುನಾವಣೆಯಲ್ಲೂ ಪಕ್ಷ ಗೆಲುಪು ಸಾಧಿಸಿ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ಭವಿಷ್ಯ ನುಡಿದರು. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಮತ್ತು ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಕೈಗೊಂಡಿರುವ ಜನಪರ ಕಾರ್ಯಕ್ರಮಗಳು ಮತದಾರರ ಮನ ಗೆದ್ದಿವೆ. ಮರು ಚುನಾವಣಾ ಫಲಿತಾಂಶದಲ್ಲಿ ಅದು ಬಿಂಬಿತವಾಗಲಿದೆ ಎಂದು ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.












Click it and Unblock the Notifications