ಆರ್. ಆರ್. ನಗರ ಉಪ ಚುನಾವಣೆ; ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಾರಾಮಾರಿ
ಬೆಂಗಳೂರು, ಅಕ್ಟೋಬರ್ 21 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.
ಬುಧವಾರ ಲಕ್ಷ್ಮೀ ದೇವಿನಗರ ವಾರ್ಡ್ನಲ್ಲಿ ಉಪ ಚುನಾವಣೆ ಪ್ರಚಾರ ಮಾಡುವಾಗ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಆರ್. ಆರ್. ನಗರ ಕ್ಷೇತ್ರಕ್ಕೆ ಮುನಿರತ್ನ ಬಿಜೆಪಿ ಅಭ್ಯರ್ಥಿ ಮತ್ತು ಎಚ್. ಕುಸುಮಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಚುನಾವಣಾ ಪ್ರಚಾರ ನಡೆಸುವಾಗ ಮುನಿರತ್ನ ಬೆಂಬಲಿಗ ಮತ್ತು ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿಯವರು ಕೂಡಾ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಗಲಾಟೆಗೆ ಕಾರಣವಾಯಿತು.

ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ಮಾಡಲು ಕಾಂಗ್ರೆಸ್ ಕಾರ್ಯಕರ್ತರು ಸಂಗ್ರಹ ಮಾಡಿದ್ದ ಮಾಹಿತಿ ಪುಸ್ತಕವನ್ನು ಹರಿದು ಹಾಕಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವೇಲು ನಾಯ್ಕರ್ ಮತ್ತು ಅವರ ಬೆಂಬಲಿಗರು ಚುನಾವಣಾ ಪ್ರಚಾರಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವೇಲು ನಾಯ್ಕರ್ ಗಡಿಪಾರು ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
ಸಂಸದ ಡಿ. ಕೆ. ಸುರೇಶ್ ವೇಲು ನಾಯ್ಕರ್ ಮತ್ತು ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿರ ವಿರುದ್ಧ ದೂರು ದಾಖಲು ಮಾಡಿದ್ದಾರೆ. ಪೊಲೀಸರು ಎರಡೂ ಕಡೆಯವರನ್ನು ಕರೆಸಿ ಮತದಾರರ ಮೇಲೆ ಒತ್ತಡ ಹಾಕಬೇಡಿ ಎಂದು ತಿಳಿಸಿದ್ದಾರೆ.
ಮುನಿರತ್ನ ಪ್ರತಿಕ್ರಿಯೆ : ಘಟನೆ ಬಗ್ಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪ್ರತಿಕ್ರಿಯೆ ನೀಡಿದ್ದು, "ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಲು ಹೊರಗಿನಿಂದ 4 ಸಾವಿರ ಜನರನ್ನು ಕರೆತರಲಾಗಿದೆ. ಮನೆ ಮನೆಗೆ ತೆರಳಿ ಜಾತಿಯನ್ನು ಕೇಳುವ ಮೂಲಕ ಪ್ರಚಾರ ಮಾಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.












Click it and Unblock the Notifications